ADVERTISEMENT

ಪಠ್ಯ ಲೋಪ ಸರಿಪಡಿಸದಿದ್ದರೆ ಹೋರಾಟ ಕಾಗಿನೆಲೆ ಗುರುಪೀಠದ ಸ್ವಾಮೀಜಿ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 25 ಜೂನ್ 2022, 17:43 IST
Last Updated 25 ಜೂನ್ 2022, 17:43 IST
ನಿರಂಜನಾನಂದಪುರಿ ಶ್ರೀ
ನಿರಂಜನಾನಂದಪುರಿ ಶ್ರೀ   

ಹರಿಹರ: ‘ಪಠ್ಯ–ಪುಸ್ತಕಗಳಲ್ಲಿ ಬಸವಣ್ಣ, ಕನಕದಾಸ, ಕುವೆಂಪು ಅವರಂತಹ ಮಹನೀಯರ ಪರಿಚಯದ ಪಾಠಗಳಲ್ಲಿ ಆಗಿರುವ ಲೋಪ ಸರಿಪಡಿಸದಿದ್ದರೆ ಹೋರಾಟಕ್ಕೆ ಇಳಿಯಬೇಕಾಗುತ್ತದೆ’ ಎಂದು ಕಾಗಿನೆಲೆ ಕನಕ ಗುರುಪೀಠದ ಪೀಠಾಧಿಪತಿ ನಿರಂಜನಾನಂದಪುರಿ ಸ್ವಾಮೀಜಿ ಸರ್ಕಾರಕ್ಕೆಶನಿವಾರ ಎಚ್ಚರಿಕೆ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಅವರು,‘ಮಹನೀಯರ ಪರಿಚಯ ಸತ್ಯದಿಂದ ಕೂಡಿರಬೇಕು. ಮಕ್ಕಳಿಗೆ ಇಲ್ಲಸಲ್ಲದ್ದು ಕಲಿಸಬಾರದು. ಆಗಿರುವ ಲೋಪವನ್ನು ಶೀಘ್ರ ಸರಿಪಡಿಸಲು ಮುಖ್ಯಮಂತ್ರಿ, ಶಿಕ್ಷಣ ಸಚಿವರಿಗೆ ಆಗ್ರಹಿಸುತ್ತೇನೆ. ತಪ್ಪಿದಲ್ಲಿ ಎಲ್ಲರ ಜೊತೆಗೂಡಿ ಹೋರಾಟಕ್ಕೆ ಇಳಿಯಬೇಕಾಗುತ್ತದೆ. ಸರ್ಕಾರ ಕಷ್ಟ ಎದುರಿಸಬೇಕಾಗುತ್ತದೆ’ ಎಂದರು.

ತಿಂಗಳಲ್ಲಿ ಸಂಶೋಧನಾ ಕೇಂದ್ರದ ವರದಿ: ‘ಹಿಂದುಳಿದ ಕುರುಬ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಬೇಡಿಕೆ ಕುರಿತಂತೆ ಬುಡಕಟ್ಟು ಸಂಶೋಧನಾ ಕೇಂದ್ರದಿಂದ ಸಮೀಕ್ಷಾ ಕಾರ್ಯ ಕೈಗೊಳ್ಳಲಾಗಿದೆ. ವರದಿ ಬಂದ ನಂತರ ಕೇಂದ್ರ ಸರ್ಕಾರಕ್ಕೆ ಅದನ್ನು ರವಾನಿಸಬೇಕಿದೆ. ಈ ದಿಸೆಯಲ್ಲಿ ಪ್ರಯತ್ನ ನಡೆದಿದೆ. ಕುರುಬ ಸಮಾಜಕ್ಕೆ ಪರಿಶಿಷ್ಟ ಪಂಗಡ ಮೀಸಲಾತಿ ನೀಡುವ ಮೂಲಕ ಸಾಮಾಜಿಕ ನ್ಯಾಯ ನೀಡಬೇಕು’ ಎಂದು ಸ್ವಾಮೀಜಿ ಆಗ್ರಹಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.