ದಾವಣಗೆರೆ: ‘ಪ್ರಧಾನಿ ನರೇಂದ್ರ ಮೋದಿ ಅವರ ಸಮರ್ಥ ನಾಯಕತ್ವದಲ್ಲಿ ದೇಶವು ಬಲಿಷ್ಠ ರಾಷ್ಟ್ರವಾಗಿ ಹೊರಹೊಮ್ಮಲು ಸಾಧ್ಯವಾಗಿದೆ. ಮೋದಿ ಅವರ ದೂರದರ್ಶಿತ್ವ ಯೋಜನೆಗಳೇ ಈ ಸಾಧನೆಗೆ ಸಾಕ್ಷಿಯಾಗಿವೆ’ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಅಭಿಪ್ರಾಯಪಟ್ಟರು.
ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಸೋಮವಾರ ನಡೆದ ‘ಮೋದಿ@20: ಡ್ರೀಮ್ಸ್ ಮೀಟ್ ಡೆಲಿವರಿ’ ಪುಸ್ತಕ ಬಿಡುಗಡೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
‘ದೇಶದ ಅಭಿವೃದ್ಧಿಗೆ ಪೂರಕವಾದ ಡಿಜಿಟಲ್ ಇಂಡಿಯಾ, ಮೇಕ್ ಇನ್ ಇಂಡಿಯ, ಯುವ ಭಾರತ, ಸ್ವಚ್ಛ ಭಾರತ, ಇತ್ಯಾದಿ ಜನಪ್ರಿಯ ಯೋಜನೆಗಳನ್ನು ಜನರಿಗೆ ತಲುಪಿಸಿ, ದೇಶದ ಅಭಿವೃದ್ಧಿ ಯೋಜನೆಯಲ್ಲಿ ಎಲ್ಲರೂ ಪಾಲ್ಗೊಳ್ಳುವಂತೆ ಮಾಡಿದ್ದಾರೆ. ಸಾರ್ವಜನಿಕ ಮೌಲ್ಯಗಳನ್ನು ಆದರ್ಶಗಳನ್ನು ಸ್ಥಾಪನೆ ಮಾಡುವ ಮೂಲಕ ದೇಶಕ್ಕೆ ಉತ್ತಮ ಚಾರಿತ್ರ್ಯವನ್ನು ನೀಡಲು ಪ್ರಾಮಾಣಿಕವಾಗಿ ಪ್ರಯತ್ನಿಸಿದ್ದಾರೆ’ ಎಂದು ನುಡಿದರು.
‘ಮೋದಿ ಅವರ ಸಂಕಲ್ಪ ಶಕ್ತಿಯಿಂದ ದೇಶವು ಜಗತ್ತಿನ ಸರ್ವಶ್ರೇಷ್ಠ ಹಾಗೂ ಸದೃಢ ರಾಷ್ಟ್ರವಾಗಿ ಹೊರಹೊಮ್ಮಲು ಯುವಜನರ ಬೆಂಬಲ, ಸಹಕಾರ ಅತ್ಯಗತ್ಯವಾಗಿದೆ’ ಎಂದು ಸಾಮಾಜಿಕ ಚಿಂತಕ ನಿತ್ಯಾನಂದ ವಿವೇಕವಂಶಿ ತಿಳಿಸಿದರು.
ಪರಿವರ್ತನಾ ಸಂಘಟನೆ ಅಧ್ಯಕ್ಷ ಎಸ್.ಜಿ. ವೈದ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರೊ. ಎಚ್.ಪಿ. ನಾಗಸ್ವರೂಪ ಸ್ವಾಗತಿಸಿದರು. ಪ್ರೊ.ಡಿ.ಜಿ. ಪ್ರಕಾಶ್ ವಂದಿಸಿದರು. ಡಾ. ಭೀಮಾಶಂಕರ ಜೋಶಿ ಕಾರ್ಯಕ್ರಮ ನಿರೂಪಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.