ADVERTISEMENT

ಮೇಕೆದಾಟು ಯೋಜನೆ ಶತಸ್ಸಿದ್ಧ: ಸಂಸದ ಸಿದ್ದೇಶ್ವರ

​ಪ್ರಜಾವಾಣಿ ವಾರ್ತೆ
Published 1 ಸೆಪ್ಟೆಂಬರ್ 2021, 6:22 IST
Last Updated 1 ಸೆಪ್ಟೆಂಬರ್ 2021, 6:22 IST
ಜಿ.ಎಂ. ಸಿದ್ದೇಶ್ವರ 
ಜಿ.ಎಂ. ಸಿದ್ದೇಶ್ವರ    

ದಾವಣಗೆರೆ: ‘ಮೇಕೆದಾಟು ಯೋಜನೆ ನಮ್ಮ ಹಕ್ಕು. ಅದನ್ನು ಮಾಡುವುದು ಶತಸ್ಸಿದ್ಧ.ಈ ವಿಚಾರದಲ್ಲಿ ರಾಜ್ಯದ ಎಲ್ಲ 25 ಮಂದಿ ಸಂಸದರು ಹಾಗೂ ರಾಜ್ಯಸಭಾ ಸದಸ್ಯರದ್ದುಒಂದೇ ನಿಲುವು’ ಎಂದು ಸಂಸದ ಜಿ.ಎಂ.ಸಿದ್ದೇಶ್ವರ ಹೇಳಿದರು.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಮೇಕೆದಾಟು ಯೋಜನೆಗೆ ತಮಿಳುನಾಡು ವಿರೋಧಿಸುತ್ತಿರುವುದು ಚುನಾವಣಾ ಗಿಮಿಕ್. ಆದರೆ ಕರ್ನಾಟಕದ ಕುಡಿಯುವ ನೀರು, ವಿದ್ಯುತ್‌ಗಾಗಿ ಈ ಯೋಜನೆ ಆಗಲೇಬೇಕು. ಪರಿಸರ ಹಾಗೂ ಅರಣ್ಯ ಇಲಾಖೆಗಳು ಒಪ್ಪಿಗೆ ನೀಡಬೇಕಿದೆ’ ಎಂದರು.

‘ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಸಂಬಂಧಿತ ತಪ್ಪಿತಸ್ಥರು ಬಂಧಿತರಾಗಿದ್ದು, ಅವರೆಲ್ಲರಿಗೂ ಕಠಿಣ ಶಿಕ್ಷೆ ನೀಡಬೇಕು. ಎಲ್ಲಿಯೂ ಅತ್ಯಾಚಾರ ಪ್ರಕರಣಗಳು ಹೆಚ್ಚದಂತೆ ಗೃಹಸಚಿವರು ಗಮನ ಹರಿಸಬೇಕು’ ಎಂದು ಮನವಿ ಮಾಡುವುದಾಗಿ ಹೇಳಿದರು.

ADVERTISEMENT

‘ಸೆ.2ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದಾವಣಗೆರೆಗೆ ಭೇಟಿ ನೀಡಲಿದ್ದು, ಈ ಭಾಗದಲ್ಲಿ ಇಂಡಿಯನ್ ರಿಸರ್ವ್ ಬೆಟಾಲಿಯನ್ ಸೌಲಭ್ಯ ಕಲ್ಪಿಸಲು ಕೇಂದ್ರ ಸಚಿವರಲ್ಲಿ ಮನವಿ ಮಾಡಲಾಗುವುದು’ ಎಂದರು.

‘ದಾವಣಗೆರೆ ಸೇರಿ 13 ಜಿಲ್ಲೆಗೆ ಮಂತ್ರಿ ಸ್ಥಾನ ಸಿಕ್ಕಿಲ್ಲ. ಸರ್ಕಾರಕ್ಕೆ ಬೆಂಬಲಿಸಿದ ಇತರೆ ಪಕ್ಷಗಳ 14 ಮಂದಿ ಶಾಸಕರಿಗೆ ಸಚಿವ ಸ್ಥಾನ ನೀಡಬೇಕಾದ್ದರಿಂದ ಸಮತೋಲನ ಸಾಧ್ಯವಾಗಿಲ್ಲ. ಜಿಲ್ಲೆಗೆ ಸಚಿವ ಸ್ಥಾನ ನೀಡುವಂತೆ ಮತ್ತೊಮ್ಮೆ ಮನವಿ ಮಾಡುತ್ತೇನೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.