ದಾವಣಗೆರೆ: ಪ್ರತಿ ನಿಮಿಷಕ್ಕೆ ಸಾವಿರ ಲೀಟರ್ ಆಮ್ಲಜನಕ ಉತ್ಪಾದನೆ ಮಾಡುವ ಸಾಮರ್ಥ್ಯದ ಘಟಕವನ್ನು ಜಿಲ್ಲೆಗೆ ಕೇಂದ್ರ ಸರ್ಕಾರ ಮಂಜೂರು ಮಾಡಿದೆ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ತಿಳಿಸಿದ್ದಾರೆ.
ಕೊರೊನಾ ಸೋಂಕಿತರಿಗೆ ಆಮ್ಲಜನಕ ಕೊರತೆಯಾಗಬಾರದು ಎಂಬ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದೆ. ರಾಜ್ಯದಲ್ಲಿ ₹ 34 ಕೋಟಿ ವೆಚ್ಚದಲ್ಲಿ 28 ಘಟಕಗಳನ್ನು ತೆರೆಯಲು ನಿರ್ಧರಿಸಿದೆ. ಅದರಲ್ಲಿ ದಾವಣಗೆರೆ ಘಟಕವೂ ಒಂದು. ₹ 82 ಲಕ್ಷ ವೆಚ್ಚದಲ್ಲಿ ಈ ಘಟಕ ನಿರ್ಮಾಣಗೊಳ್ಳಲಿದೆ. ಕೇಂದ್ರ ಸರ್ಕಾರ ಸ್ವಾಮ್ಯದ ಒಎನ್ಜಿಸಿ ಹಾಗೂ ಎಂಆರ್ಪಿಎಲ್ ಕಂಪನಿಗಳಿಗೆ ಈ ಘಟಕ ಸ್ಥಾಪಿಸುವ ಹೊಣೆ ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಜೂನ್ 30ರ ಒಳಗೆ ಎಲ್ಲ ಘಟಕಗಳು ಪೂರ್ಣಗೊಂಡು ಕಾರ್ಯಾರಂಭಿಸಲಿವೆ. ಪ್ರಧಾನಮಂತ್ರಿ ನರೇಂದ್ರ ಮೋದಿ, ಇಂಧನ ಸಚಿವ ಧರ್ಮೇಂದ್ರ ಪ್ರಧಾನ್, ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಅವರ ಮುತುವರ್ಜಿಯಿಂದ ಈ ಘಟಕ ಆರಂಭಗೊಳ್ಳಲಿದೆ ಎಂದು ಸಂಸದರು ಹೇಳಿಕೆ ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.