ನ್ಯಾಮತಿ: ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣ ಸಿಗುತ್ತಿದ್ದು, ಶಿಕ್ಷಕರು ಜವಾಬ್ದಾರಿಯಿಂದ ಕೆಲಸ ಮಾಡುವ ಮೂಲಕ ಸರ್ಕಾರಿ ಶಾಲೆಗಳ ಉಳಿವಿಗೆ ಪ್ರಯತ್ನಿಸಬೇಕು ಎಂದು ಹೊನ್ನಾಳಿ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಟಿ.ನಿಂಗಪ್ಪ ಹೇಳಿದರು.
ಪಟ್ಟಣದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಜಿಲ್ಲಾ ಪಂಚಾಯಿತಿ, ಮಧ್ಯಾಹ್ನ ಬಿಸಿಯೂಟ ಯೋಜನೆ ವತಿಯಿಂದ ಬುಧವಾರ ಹಮ್ಮಿಕೊಂಡಿದ್ದ ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
‘ಸರ್ಕಾರ ಕೋಟ್ಯಂತರ ರೂಪಾಯಿಗಳನ್ನು ಶಿಕ್ಷಣಕ್ಕೆ ಖರ್ಚು ಮಾಡುತ್ತಿದೆ. ಜವಾಬ್ದಾರಿಯನ್ನು ಒಬ್ಬರಿಂದ ಒಬ್ಬರಿಗೆ ವರ್ಗಾಯಿಸದೇ ಎಲ್ಲರೂ ಒಗ್ಗಟ್ಟಾಗಿ ನಮ್ಮ ಶಾಲೆ, ನಮ್ಮ ಮಕ್ಕಳು ಎಂಬ ಮನೋಭಾವನೆ ಬೆಳೆಸಿಕೊಂಡು ಕೆಲಸ ಮಾಡಬೇಕು’ ಎಂದು ಸಲಹೆ ನೀಡಿದರು.
ಖಾಸಗಿ ಶಾಲೆಗಳಿಗಿಂತ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಬೋಧನೆ, ಬಿಸಿಯೂಟ, ಸಮವಸ್ತ್ರ ಸೇರಿ ವಿವಿಧ ಸೌಲಭ್ಯಗಳನ್ನು ಒದಗಿಸಿದ್ದರೂ ದಾಖಲಾತಿ ಪ್ರಮಾಣ ಕಡಿಮೆಯಾಗುತ್ತಿರುವುದಕ್ಕೆ ಕಾರಣ ಏನು ಎಂಬ ಬಗ್ಗೆ ಇಲಾಖೆ, ಶಿಕ್ಷಕರು, ಎಸ್ಡಿಎಂಸಿ ಸದಸ್ಯರು ಚರ್ಚಿಸಬೇಕಿದೆ ಎಂದು ಬಿಸಿಯೂಟ ಸಹಾಯಕ ನಿರ್ದೇಶಕ ನಾಗೇಂದ್ರಪ್ಪ ಹೇಳಿದರು.
ಎಸ್ಡಿಎಂಸಿ ಅಧ್ಯಕ್ಷೆ ಬಿ.ಕೆ.ಸುಮಾ ಅಧ್ಯಕ್ಷತೆ ವಹಿಸಿದ್ದರು. ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಡಿ.ರಾಮಪ್ಪ, ಕರ್ನಾಟಕ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಸಿದ್ಧಪ್ಪ ಜಿಗಣಪ್ಪನವರ, ಬಾಲಕಿಯರ ಕಾಲೇಜಿನ ಉಪಪ್ರಾಂಶುಪಾಲ ಬಿ.ಕೆ.ಮಂಜಪ್ಪ, ರಾಘವೇಂದ್ರ, ರವಿಶಂಕರ, ನಾಗರತ್ನಮ್ಮ ಎಸ್ಡಿಎಂಸಿ ಅಧ್ಯಕ್ಷ ಎಂ.ಕರಿಬಸಪ್ಪ, ಮಾತನಾಡಿದರು. ಪ್ರಾಥಮಿಕ ಶಾಲಾ ಶಿಕ್ಷಕರ ತಾಲ್ಲೂಕು ಘಟಕದ ಅಧ್ಯಕ್ಷೆ ಒ. ಜಿ. ಅನ್ನಪೂರ್ಣಮ್ಮ, ಶಿಕ್ಷಣ ಇಲಾಖೆಯ ಮುದ್ದನಗೌಡರು, ಬಿಆರ್ಸಿ, ಸಿಆರ್ಪಿಗಳು, ತಾಲ್ಲೂಕಿನ ವಿವಿಧ ಶಾಲೆಗಳ ಮುಖ್ಯಸ್ಥರು, ಎಸ್ಡಿಎಂಸಿ ಅಧ್ಯಕ್ಷರು, ಪೋಷಕರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.