ದಾವಣಗೆರೆ: ಜಿಲ್ಲೆಯಲ್ಲಿ ಕೊರೊನಾ ವೈರಸ್ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಅದನ್ನು ನಿಯಂತ್ರಿಸುವುದಕ್ಕಾಗಿ ಜಿಲ್ಲೆಯಲ್ಲಿ ಮೇ 21ರಂದು ಬೆಳಿಗ್ಗೆ 10ರಿಂದ ಮೇ 24ರ ಬೆಳಿಗ್ಗೆ 6ರ ವರೆಗೆ ಸಂಪೂರ್ಣ ಲಾಕ್ಡೌನ್ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ ತಿಳಿಸಿದರು.
ಮುಂದೆ ಸಂಭವಿಸಬಹುದಾದ ಅನಾಹುತವನ್ನು ತಡೆಗಟ್ಟಲು ಜಾರಿಗೆ ತರುತ್ತಿರುವ ಸಂಪೂರ್ಣ ಲಾಕ್ಡೌನ್ಗೆ ಸಾರ್ವಜನಿಕರು ಸಹಕರಿಸಬೇಕು ಎಂದು ಸಚಿವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮನವಿ ಮಾಡಿದರು.
ಮೇ 12ರಿಂದ 24ರ ವರೆಗೆ ಕಠಿಣ ಕ್ರಮಗಳನ್ನು ಸರ್ಕಾರ ಜಾರಿಗೊಳಿಸಿತ್ತು. ಆದರೆ ಪ್ರಕರಣಗಳ ಸಂಖ್ಯೆ ಏರುತ್ತಲೆ ಇದೆ. ಸೋಂಕು ಹರಡುವಿಕೆಯ ಸರಪಳಿಯನ್ನು ತುಂಡರಿಸಲು ಇನ್ನಷ್ಟು ಕಠಿಣ ಕ್ರಮ ಜರುಗಿಸುವುದು ಅನಿವಾರ್ಯ. ಮೇ 24ರ ಬಳಿಕ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಮುಖ್ಯಮಂತ್ರಿ ಅವರೇ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದರು.
ಜಿಲ್ಲೆಯಲ್ಲಿ ಹೆಚ್ಚು ಪರೀಕ್ಷೆಗಳನ್ನು ಮಾಡಿತ್ತಿದ್ದು, ಇದರಿಂದ ಸೋಂಕಿತರ ಪ್ರಮಾಣ ಹೆಚ್ಚಿದೆ. ಆಸ್ಪತ್ರೆಗಳಲ್ಲಿ ಎಷ್ಟು ಸಾಮಾನ್ಯ ಬೆಡ್, ಆಮ್ಲಜನಕ ಬೆಡ್ ಇರಬೇಕು ಎಂಬುದನ್ನು ಜನರಿಗೆ ಕಾಣುವಂತೆ ಹಾಕಬೇಕು ಎಂದು ಸೂಚಿಸಿದ್ದೆ. ಅದು ಜಾರಿಯಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಸಂಸದ ಜಿ.ಎಂ. ಸಿದ್ದೇಶ್ವರ, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಶಾಸಕರಾದ ಪ್ರೊ. ಲಿಂಗಣ್ಣ, ಎಸ್.ಎ. ರವೀಂದ್ರನಾಥ್, ಮೇಯರ್ ಎಸ್.ಟಿ. ವೀರೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ವಿಜಯ ಮಹಾಂತೇಶ್, ಡಿಎಚ್ಒ ಡಾ. ನಾಗರಾಜ್, ಡಿಎಸ್ಒ ಡಾ. ರಾಘವನ್ ಅವರೂ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.