ADVERTISEMENT

ದಾವಣಗೆರೆ | ನಾಳೆ ಡಿ.ಕೆ. ಶಿವಕುಮಾರ್ ಪದಗ್ರಹಣ: ಜಿಲ್ಲೆಯಲ್ಲೂ ಸಿದ್ಧತೆ

​ಪ್ರಜಾವಾಣಿ ವಾರ್ತೆ
Published 30 ಜೂನ್ 2020, 13:19 IST
Last Updated 30 ಜೂನ್ 2020, 13:19 IST
ಎಚ್‌.ಬಿ. ಮಂಜಪ್ಪ
ಎಚ್‌.ಬಿ. ಮಂಜಪ್ಪ   

ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ, ಸಲೀಂ ಮಹಮದ್, ಸತೀಶ್ ಜಾರಕಿಹೊಳಿ ಅವರ ಪದಗ್ರಹಣ ಸಮಾರಂಭ ಜುಲೈ 2ರಂದು ನಡೆಯಲಿದ್ದು, ಜಿಲ್ಲೆಯಲ್ಲೂ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಬಿ.ಮಂಜಪ್ಪ ತಿಳಿಸಿದರು.

ಬೆಂಗಳೂರಿನ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಪದಗ್ರಹಣ ಸಮಾರಂಭ ನಡೆಯಲಿದ್ದು, ಶಾಸಕ ಶಾಮನೂರು ಶಿವಶಂಕರಪ್ಪ ಪಾಲ್ಗೊಳ್ಳುತ್ತಾರೆ. ರಾಜ್ಯದಾದ್ಯಂತ ಪಕ್ಷದ ಕಾರ್ಯಕರ್ತರು ಪಂಚಾಯಿತಿ ಹಾಗೂ ಸ್ಥಳೀಯ ಮಟ್ಟದಲ್ಲಿಯೇ ಕಾರ್ಯಕ್ರಮವನ್ನು ವೀಕ್ಷಿಸಿ ಜ್ಯೂಮ್ ಆ್ಯಪ್ ಮೂಲಕ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಲಿದ್ದಾರೆ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಜಿಲ್ಲೆಯಲ್ಲಿ 206 ಗ್ರಾಮ ಪಂಚಾಯಿತಿ, ಎರಡು ಪಟ್ಟಣ ಪಂಚಾಯತಿ,2 ಪುರಸಭೆ, ಒಂದು ನಗರಸಭೆ ಹಾಗೂ ಒಂದು ನಗರಪಾಲಿಕೆ ವ್ಯಾಪ್ತಿಯ ಎಲ್ಲಾ ವಾರ್ಡ್ ಗಳಲ್ಲಿ ನಮ್ಮ ಕಾರ್ಯಕರ್ತರು ಪ್ರತಿಜ್ಞಾವಿಧಿ ಸ್ವೀಕರಿಸುವರು, ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ‌ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡುವರು. ಪಾಲಿಕೆಯಲ್ಲಿ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಶಾಸಕರು ಹಾಗೂ ಮಾಜಿ ಶಾಸಕರು, ಬ್ಲಾಕ್ ಅಧ್ಯಕ್ಷರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ’ ಎಂದರು.

ADVERTISEMENT

‘ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು ಅಧಿಕಾರವಿದ್ದಾಗ ಒಂದು ರೀತಿ ಇಲ್ಲದಾಗ ಒಂದು ರೀತಿ ಮಾತನಾಡುತ್ತಾರೆ. ಅವರ ಮಾತುಗಳಿಗೆ ಬೆಲೆ ಇಲ್ಲದಂತಾಗಿದೆ. ಆಡಳಿತ ಪಕ್ಷ ತಪ್ಪು ಮಾಡಿದಾಗ ಅದನ್ನು ಪ್ರಶ್ನಿಸುವುದು ವಿರೋಧ ಪಕ್ಷದ ಕರ್ತವ್ಯ. ಅದನ್ನು ಮಾಡಿದರೆ ಮನಬಂದಂತೆ ಮಾತನಾಡುವುದು ಸರಿಯಲ್ಲ. ಪ್ರಚಾರಕ್ಕಾಗಿ ಹೇಳಿಕೆ ನೀಡುವುದನ್ನು ಬಿಟ್ಟು ಉತ್ತಮ ವಿಚಾರಗಳನ್ನು ಮಂಡಿಸಿದಾಗ ಅದನ್ನು ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ದಿನೇಶ್ ಕೆ. ಶೆಟ್ಟಿ, ಮಾಗನಹಳ್ಳಿ ಪರಶುರಾಂ, ಅಮೃತೇಶ್, ಮೋಕ್ಷದಾಯಿನಿ, ಸೈಯದ್ ಖಾಲಿದ್, ಕೆ.ಎಲ್.ಹರೀಶ್ ಬಸಾಪುರ, ಮುಜಾಹಿದ್, ಆಶಾ ಮುರಳಿ, ಡೋಲಿ ಚಂದ್ರು, ದ್ರಾಕ್ಷಾಯಿಣಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.