ಸಾಸ್ವೆಹಳ್ಳಿ: ಕರ್ನಾಟಕದ 16 ಜಿಲ್ಲೆಗಳಲ್ಲಿ ಕ್ಷಯ ರೋಗವನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ಉದ್ದೇಶದಿಂದ ವಯಸ್ಕರಿಗೆ ಬಿಸಿಜಿ ಲಸಿಕೆ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಾಸ್ವೆಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ನರೇಂದ್ರ ತಿಳಿಸಿದರು.
ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದ ಕ್ಷಯರೋಗ ನಿರ್ಮೂಲನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ಈ ಹಿಂದೆ ಕೇವಲ ಮಕ್ಕಳಿಗೆ ಮಾತ್ರ ಬಿಸಿಜಿ ಲಸಿಕೆ ನೀಡಲಾಗುತ್ತಿತ್ತು. ಆದರೆ, ಇತ್ತೀಚಿನ ದಿನಗಳಲ್ಲಿ ವಯಸ್ಕರಲ್ಲೂ ಕ್ಷಯ ರೋಗ ಕಾಣಿಸಿಕೊಳ್ಳುತ್ತಿರುವುದು ಆತಂಕಕಾರಿ ವಿಷಯವಾಗಿದೆ. ಇದನ್ನು ತಡೆಗಟ್ಟುವ ಸಲುವಾಗಿ ವಯಸ್ಕರಿಗೂ ಬಿಸಿಜಿ ಲಸಿಕೆ ನೀಡಲಾಗುತ್ತಿದೆ. ಅದರಲ್ಲೂ ವಿಶೇಷವಾಗಿ ಸಕ್ಕರೆ ಕಾಯಿಲೆ ಇರುವವರು, 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು, ಕ್ಷಯ ರೋಗಿಯೊಂದಿಗೆ ನಿಕಟ ಸಂಪರ್ಕ ಹೊಂದಿರುವವರು, ಕ್ಷಯ ರೋಗದ ಇತಿಹಾಸ ಹೊಂದಿರುವವರು ಮತ್ತು ಧೂಮಪಾನ ಮಾಡುವವರು ಈ ಲಸಿಕೆಯನ್ನು ತಪ್ಪದೇ ಪಡೆದುಕೊಳ್ಳಬೇಕು’ ಎಂದು ಮನವಿ ಮಾಡಿದರು.
‘ಆರೋಗ್ಯ ಇಲಾಖೆಯ ಸಿಬ್ಬಂದಿ ನಿಮ್ಮ ಗ್ರಾಮಗಳಿಗೆ ಆಗಮಿಸಿ ಲಸಿಕೆ ನೀಡುತ್ತಿದ್ದಾರೆ. ಸಾರ್ವಜನಿಕರು ಇದನ್ನು ಸದುಪಯೋಗಪಡಿಸಿಕೊಂಡು ಕ್ಷಯ ರೋಗ ಬರದಂತೆ ತಮ್ಮನ್ನು ತಾವು ರಕ್ಷಿಸಿಕೊಳ್ಳಬಹುದು. ಈ ಆಂದೋಲನದಲ್ಲಿ ಸಾರ್ವಜನಿಕರ ಸಹಕಾರ ಅತ್ಯಗತ್ಯ’ ಎಂದು ಹೇಳಿದರು.
ನಾಗರಾಜಪ್ಪ ಎಸ್.ಆರ್., ಪೂರ್ಣಿಮಾ ಪಾಟೀಲ, ತಿಪ್ಪೇಸ್ವಾಮಿ, ಆರೋಗ್ಯ ಇಲಾಖೆಯ ಸಿಬ್ಬಂದಿ ರಘು, ರೆಡ್ಡಿ, ಸ್ವಾಮಿ, ಶಂಷದ್ ಬೇಗಂ, ಹೇಮಾವತಿ, ನೇತ್ರಾವತಿ ಹಾಗೂ ಆಶಾ ಕಾರ್ಯಕರ್ತರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.