ADVERTISEMENT

ದಾವಣಗೆರೆ: ಗುಂಪು ಗಲಾಟೆ, ಪೊಲೀಸರ ಮೇಲೆ ಪ್ರಕರಣ; ಮತ್ತಿಬ್ಬರು ಆರೋಪಿಗಳ ಬಂಧನ

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2026, 2:34 IST
Last Updated 3 ಫೆಬ್ರುವರಿ 2026, 2:34 IST
<div class="paragraphs"><p>ಬಂಧನ</p></div>

ಬಂಧನ

   

ದಾವಣಗೆರೆ: ಗುಂಪು ಗಲಾಟೆ ಹಾಗೂ ಪೊಲೀಸರ ಮೇಲೆ ನಡೆದ ಹಲ್ಲೆಗೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಇದರಿಂದ ಬಂಧಿತರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ.

ಅಬ್ರಾರ್‌ ಹಾಗೂ ಆಯಾನ್‌ ಬಂಧಿತರು. ಕಾಂಗ್ರೆಸ್ ಮುಖಂಡ ಅಯೂಬ್ ಪೈಲ್ವಾನ್ ಪುತ್ರ ಹಸನ್ ಪೈಲ್ವಾನ್‌ ಹಾಗೂ ಫೈಜಾನ್ ಎಂಬುವರನ್ನು ಪೊಲೀಸರು ಭಾನುವಾರ ಬಂಧಿಸಿದ್ದರು.

ADVERTISEMENT

‘ಅಯೂಬ್ ಪೈಲ್ವಾನ್ ಪುತ್ರ ಹಸನ್ ಬಂಧಿತರಾಗಿದ್ದಾರೆ. ಮತ್ತೊಬ್ಬ ಪುತ್ರ ಹುಸೇನ್‌ ಸೇರಿದಂತೆ ಇತರ ಆರೋಪಿಗಳ ಬಂಧನಕ್ಕೆ ತಂಡಗಳನ್ನು ರಚಿಸಲಾಗಿದೆ. ಶೀಘ್ರದಲ್ಲೇ ಎಲ್ಲ ಆರೋಪಿಗಳನ್ನು ಬಂಧಿಸಲಾಗುವುದು. ಅಯೂಬ್‌ ಪೈಲ್ವಾನ್‌ ಅವರನ್ನೂ ವಿಚಾರಣೆಗೆ ಒಳಪಡಿಸಲಾಗಿದೆ’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಉಮಾ ಪ್ರಶಾಂತ್‌ ಸುದ್ದಿಗಾರರಿಗೆ ಮಾಹಿತಿ ನೀಡಿದರು.

ಕ್ರಿಕೆಟ್‌ಗೆ ಸಂಬಂಧಿ ಗಲಾಟೆ:

ಆಜಾದ್‌ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಆಟೊ ನಿಲ್ದಾಣದ ಬಳಿ ಜ.31ರಂದು ನಡೆದ ಗಲಾಟೆಗೆ ಕ್ರಿಕೆಟ್‌ ಆಟ ಕಾರಣ ಎಂಬುದು ಪೊಲೀಸರ ತನಿಖೆಯಿಂದ ಗೊತ್ತಾಗಿದೆ. ಇದರಲ್ಲಿ ರಾಜಕೀಯ ಉದ್ದೇಶ ಇಲ್ಲ ಎಂಬುದನ್ನು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

‘ಕ್ರಿಕೆಟ್‌ ಆಟದಲ್ಲಿನ ಸೋಲಿಗೆ ಸಂಬಂಧಿಸಿದಂತೆ ಗುಂಪೊಂದು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದೆ. ಇದಕ್ಕೆ ಮತ್ತೊಂದು ಗುಂಪು ಆಕ್ಷೇಪ ವ್ಯಕ್ತಪಡಿಸಿದೆ. ಈ ವಿಚಾರದಲ್ಲಿ ಆರಂಭವಾದ ಗಲಾಟೆ ಹಲ್ಲೆಯವರೆಗೂ ಮುಂದುವರಿದಿದೆ. ಆರೋಪಿತರ ಬಂಧನದ ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ’ ಎಂದು ಉಮಾ ಪ್ರಶಾಂತ್‌ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.