ತ್ಯಾವಣಿಗೆ: ಸಮೀಪದ ಬೆಳಲಗೆರೆ ಗ್ರಾಮದ ಪುರಾಣ ಪ್ರಸಿದ್ಧ ವೀರಭದ್ರೇಶ್ವರಸ್ವಾಮಿ ರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ಗುರವಾರ ಮಧ್ಯಾಹ್ನ ಅದ್ದೂರಿಯಾಗಿ ನಡೆಯಿತು.
ಸ್ವಾಮಿಗೆ ವಿಶೇಷ ಪೂಜೆ ನಂತರ ವೀರಭದ್ರೇಶ್ವರ ಸ್ವಾಮಿಯ ಉತ್ಸವಮೂರ್ತಿಯನ್ನು ಅಲಂಕರಿಸಿದ್ದ ರಥದಲ್ಲಿ ಕೂರಿಸಿದ ಬಳಿಕ ಪೂಜಾ ಕೈಂಕರ್ಯಗಳನ್ನು ನೇರವೇರಿಸಿ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ಭಕ್ತರು ರಥಕ್ಕೆ ಬಾಳೆಹಣ್ಣು, ಮಂಡಕ್ಕಿ, ಮೆಣಸಿನಕಾಳು, ಎರಚಿ ಭಕ್ತಿ ಸಮರ್ಪಿಸಿದರು.
ದೇವಸ್ಥಾನದ ಮುಂಭಾಗದಿಂದ ಗ್ರಾಮದ ಬನಶಂಕರಿ ದೇವಸ್ಥಾನದವರೆಗೆ ರಥೋತ್ಸವ ಸಾಗಿತು. ರಾಜ್ಯದ ವಿವಿಧಡೆಯಿಂದ ಆಗಮಿಸಿದ್ದ ಭಕ್ತರಿಗೆ ದೇವಸ್ಥಾನ ಸಮಿತಿ ವತಿಯಿಂದ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.
ಸಂಜೆ 4 ಗಂಟೆಗೆ ಆಂಜನೇಯಸ್ವಾಮಿ ದೇವಸ್ಥಾನದ ಎದರು ಕಾರೆ ಮುಳ್ಳಿನ ಗದ್ದುಗೆ ಸಿದ್ಧಪಡಿಸಲಾಗಿತ್ತು. ಸಾಂಪ್ರದಾಯಿಕ ಪೂಜೆ ಸಲ್ಲಿಸಿ ಆರಂಭದಲ್ಲಿ ದಾಸಪ್ಪನವರು ಮುಳ್ಳುಗದ್ದುಗೆ ಹತ್ತಿದರು. ನಂತರ ಗ್ರಾಮದಲ್ಲಿ ಓಕಳಿ ಕಾರ್ಯಕ್ರಮ ಅದ್ದೂರಿಯಾಗಿ ನೇರವೇರಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.