ದಾವಣಗೆರೆ: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವನ್ನು ಶುಕ್ರವಾರ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ನಿರುದ್ಯೋಗ ದಿನವನ್ನಾಗಿ ಆಚರಿಸಲಾಯಿತು.
ದಾವಣಗೆರೆ ಉತ್ತರ, ದಕ್ಷಿಣ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಸಮಿತಿಯಿಂದ ನಗರದ ಜಯದೇವ ವೃತ್ತದಲ್ಲಿ ವಿನೂತನವಾಗಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಪ್ರಧಾನಿ ಮೋದಿ ವಿರುದ್ಧ ಘೋಷಣೆ ಕೂಗಿದರು.
ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುವುದಾಗಿ ನರೇಂದ್ರ ಮೋದಿ 7 ವರ್ಷಗಳ ಹಿಂದೆ ಭರವಸೆ ನೀಡಿದ್ದರು. ಆದರೆ ಉದ್ಯೋಗ ಸೃಷ್ಟಿಸುವ ಬದಲು ಇದ್ದ ಉದ್ಯೋಗ ಕೂಡ ಉಳಿಯದಂತೆ ಮಾಡಿದ್ದಾರೆ. ದೇಶದಲ್ಲಿ ಪ್ರತಿ ತಿಂಗಳು 15 ಲಕ್ಷ ಮಂದಿ ಉದ್ಯೋಗ ಕಳೆದುಕೊಳ್ಳುತ್ತಿದ್ದಾರೆ.ಯುವಕರಿಗೆ ಉದ್ಯೋಗ ನೀಡುವ ಸುಳ್ಳು ಭಾಷಣ ಮಾಡುತ್ತಿದ್ದು, ದೇಶದಲ್ಲಿ ನಿರುದ್ಯೋಗಿಗಳ ಸಂಖ್ಯೆ ಹೆಚ್ಚಾಗಿದೆ. 45 ವರ್ಷಗಳಲ್ಲಿಯೇ ಅತಿ ಹೆಚ್ಚು ನಿರುದ್ಯೋಗ ಸಮಸ್ಯೆ ಸೃಷ್ಟಿಯಾಗಿದೆ. ಕೇಂದ್ರದ ಆರ್ಥಿಕ ನೀತಿಯಿಂದ ಅನೇಕ ಕಂಪನಿಗಳು ಮುಚ್ಚಿವೆ ಎಂದು ದೂರಿದರು.
‘ಅಧಿಕಾರಕ್ಕೆ ಬಂದ ದಿನದಿಂದ ಇಲ್ಲಿಯವರೆಗೆ ಒಬ್ಬ ಯುವಕನಿಗೂ ಕೆಲಸ ಕೊಡದೆ ವಿಫಲವಾಗಿರುವ ದೇಶದ ಪ್ರಧಾನಿಯ ಜನ್ಮದಿನವನ್ನು ಯುವ ಕಾಂಗ್ರೆಸ್ ಸಮಿತಿಯಿಂದ ನಿರುದ್ಯೋಗ ದಿನ ಎಂದು ಆಚರಣೆ ಮಾಡಲಾಗುತ್ತಿದೆ’ ಎಂದರು.
ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಜಿಲ್ಲಾ ಅಧ್ಯಕ್ಷ ನಿಖಿಲ್ ಆರ್. ಕೊಂಡಜ್ಜಿ, ಉಪಾಧ್ಯಕ್ಷ ಸಾಗರ್ ಎಲ್.ಎಚ್., ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ಸುಭಾನ್ ಖಾನ್, ಎನ್ಎಸ್ಯುಐ ಜಿಲ್ಲಾ ಅಧ್ಯಕ್ಷ ರಹಮತ್ ಪೈಲ್ವಾನ್, ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಸದ್ದಾಂ, ಮುಖಂಡರಾದ ರಂಜಿತ್, ಎಚ್.ಎಸ್. ವಿನಯ್, ಸೈಯ್ಯದ್ ಇರ್ಫಾನ್, ಪ್ರಸನ್ನಕುಮಾರ್ , ಸುಹೇಲ್ ಅಹ್ಮದ್, ಚಿರಂಜೀವಿ, ಅವಿನಾಶ್, ವಿನೋದ್ ಕುಂದೂರು, ಮಹಮ್ಮದ್ ಬಾಷಾ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.