ADVERTISEMENT

ವಿ.ವಿ, ಕಾಲೇಜು ಜಾಗೃತ ದಳ ರಚನೆ

​ಪ್ರಜಾವಾಣಿ ವಾರ್ತೆ
Published 1 ಏಪ್ರಿಲ್ 2020, 14:00 IST
Last Updated 1 ಏಪ್ರಿಲ್ 2020, 14:00 IST

ದಾವಣಗೆರೆ: ಕೊರೊನಾ ವೈರಸ್‌ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ವಿಶ್ವವಿದ್ಯಾಲಯ ಹಾಗೂ ಸಂಯೋಜಿತ ಕಾಲೇಜುಗಳಲ್ಲಿ ಜಾಗೃತ ದಳವನ್ನು ರಚಿಸಲಾಗಿದ್ದು, ಮನೆಯಿಂದಲೇ ಕೊರೊನಾ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುತ್ತಿದೆ.

ಕುಲಪತಿ ಅಧ್ಯಕ್ಷತೆಯಲ್ಲಿ ವಿಶ್ವವಿದ್ಯಾಲಯ ಜಾಗೃತ ದಳ ಹಾಗೂ ಆಯಾ ಕಾಲೇಜುಗಳ ಪ್ರಾಂಶುಪಾಲರ ಅಧ್ಯಕ್ಷತೆಯಲ್ಲಿ ಕಾಲೇಜು ಜಾಗೃತ ದಳವನ್ನು ರಚಿಸಲಾಗಿದೆ.

ಜಾಗೃತ ದಳದವರು ವಿಶ್ವವಿದ್ಯಾಲಯ ಹಾಗೂ ಕಾಲೇಜು ವ್ಯಾಪ್ತಿಯ ಗ್ರಾಮವನ್ನು ದತ್ತು ಪಡೆದು ಅಥವಾ ಈಗಾಗಲೇ ದತ್ತು ಪಡೆದಿರುವ ಗ್ರಾಮಗಳಲ್ಲಿ ಜನರಲ್ಲಿ ವಿಡಿಯೊ, ವಾಟ್ಸ್‌ಆ್ಯಪ್‌ ಗ್ರೂಪ್‌ಗಳ ಮೂಲಕ ಆರೋಗ್ಯ ಜಾಗೃತಿ ಮೂಡಿಸಬೇಕು. ಕೊರೊನಾ ವೈರಸ್‌ ಹರಡದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಸಲಹೆ ನೀಡಬೇಕು. ದುರ್ಬಲ ವರ್ಗದವರಿಗೆ ಮಾಸ್ಕ್‌ ಹಾಗೂ ಹ್ಯಾಂಡ್‌ ಸ್ಯಾನಿಟೈಸರ್‌ ಒದಗಿಸಬೇಕು. ಯಾವುದೇ ವ್ಯಕ್ತಿಯಲ್ಲಿ ಕೆಮ್ಮು, ನೆಗಡಿ, ಜ್ವರದಂತಹ ಲಕ್ಷಣ ಕಂಡು ಬಂದರೆ ಆರೋಗ್ಯ ಇಲಾಖೆಯ ಗಮನಕ್ಕೆ ತರಬೇಕು. ಹೋಂ ಕ್ವಾರಂಟೈನ್‌ನಲ್ಲಿರುವವರು 14 ದಿನಗಳ ಕಾಲ ಮನೆಯಿಂದ ಹೊರಗೆ ಬಾರದಂತೆ ನೋಡಿಕೊಳ್ಳುವಂತೆ ಮನೆಯವರಿಗೆ ಸೂಚಿಸಬೇಕು. ವಿಶ್ವವಿದ್ಯಾಲಯ ಹಾಗೂ ಕಾಲೇಜಿನ ಸಿಬ್ಬಂದಿ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದು ಕುಲಪತಿ ಪ್ರೊ. ಶರಣಪ್ಪ ಹಲಸೆ ಸಲಹೆ ನೀಡಿದ್ದಾರೆ ಎಂದು ಕುಲಸಚಿವ ಡಾ. ಬಸವರಾಜ ಬಣಕಾರ ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.