ದಾವಣಗೆರೆ: ನಗರ ಸೇರಿದಂತೆ ಜಿಲ್ಲೆಯಾದ್ಯಂತ ಶ್ರದ್ಧೆ ಹಾಗೂ ಭಕ್ತಿಯಿಂದ ವೈಕುಂಠ ಏಕಾದಶಿ ಆಚರಿಸಲಾಯಿತು.
ಎಂಸಿಸಿ ‘ಬಿ’ ಬ್ಲಾಕ್ನಲ್ಲಿರುವ ಶ್ರೀಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಬೆಳಿಗ್ಗೆ 6ರಿಂದ ರಾತ್ರಿ 10 ಗಂಟೆಯವರೆಗೆ ಶ್ರೀ ಸ್ವಾಮಿಯ ಅಖಂಡ ದರ್ಶನ ಮತ್ತು ಸರ್ವ ಭಕ್ತಾದಿಗಳಿಗೆ ತೀರ್ಥ ಪ್ರಸಾದ ವಿನಿಯೋಗ ಮಾಡಲಾಯಿತು.
ವೈಕುಂಠ ಏಕಾದಶಿಯಂದು ಉತ್ತರ ದ್ವಾರದ ಮೂಲಕ ವೆಂಕಟೇಶ್ವರ ಸ್ವಾಮಿಯ ದರ್ಶನ ಮಾಡಿದರೆ ಒಳ್ಳೆಯದಾಗುತ್ತದೆ ನಂಬಿಕೆ ಇದೆ. ಹಾಗಾಗಿಯೇ ಎಲ್ಲಾ ದೇವಸ್ಥಾನಗಳಲ್ಲಿ ಉತ್ತರ ದ್ವಾರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು.
ನಗರದ ಬೇತೂರು ರಸ್ತೆಯ ವೆಂಕಟೇಶ್ವರ ಸ್ವಾಮಿಯ ಎರಡನೇ ವರ್ಷದ ಬ್ರಹ್ಮರಥೋತ್ಸವ ಮತ್ತು ವೈಕುಂಠ ಏಕಾದಶಿ ಸ್ವಾಮಿಯ ಅಖಂಡ ದರ್ಶನ ಕಾರ್ಯಕ್ರಮವು ವೆಂಕಟೇಶ್ವರ ಸಮುದಾಯ ಭವನದಲ್ಲಿ ನಡೆಯಿತು.
ಶನಿವಾರ ಬೆಳಿಗ್ಗೆ 5.30ರಿಂದ 11ರವರೆಗೆ ವೈಕುಂಠ ಏಕಾದಶಿ, ಶ್ರೀ ಸ್ವಾಮಿ ಅಖಂಡ ದರ್ಶನ ಮತ್ತು ಗರುಡೋತ್ಸವ ನಡೆಯಿತು. ಭಾನುವಾರ ಅಶ್ವ ಉತ್ಸವ ನಡೆಯಲಿದೆ. ಡಿ.25ರಂದು ಮಧ್ಯಾಹ್ನ 3.30ರಿಂದ ಬ್ರಹ್ಮರಥೋತ್ಸವ ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಶಾಮನೂರು ಶಿವಶಂಕರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್ ಮಲ್ಲಿಕಾರ್ಜುನ್ ನೆರವೇರಿಸಲಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.