
ಜಗಳೂರು: ಸಮೀಪದ ಜಗಳೂರು ಗೊಲ್ಲರಹಟ್ಟಿ ಗ್ರಾಮದ ತಿರುಪತಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ ಅಂಗವಾಗಿ ಮಂಗಳವಾರ ಬೆಳಿಗ್ಗೆಯಿಂದ ರಾತ್ರಿವರೆಗೆ ವಿವಿಧ ಪೂಜಾ ಕೈಂಕರ್ಯ ಕೈಗೊಳ್ಳಲಾಯಿತು.
ನಸುಕಿನಲ್ಲಿ ಆರಂಭವಾದ ಪೂಜೆ ಇಡೀ ದಿನ ನಡೆಯಿತು. ತಾಲ್ಲೂಕಿನ ವಿವಿಧ ಗ್ರಾಮಗಳಿಂದ ಬಂದಿದ್ದ ಭಕ್ತರು ಸರದಿ ಸಾಲಿನಲ್ಲಿ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದು ಪುನೀತರಾದರು. ಮಹಿಳಾ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಏಕಾದಶಿ ಅಂಗವಾಗಿ ಪೂಜೆಗೆ ಯುವ ರೈತ ಜಿ.ಎಸ್.ರಾಜು ಹಾಗೂ ಇತರ ದಾನಿಗಳು ಐದು ಸಾವಿರಕ್ಕೂ ಹೆಚ್ಚು ಭಕ್ತರಿಗೆ ದಾಸೋಹ ಏರ್ಪಡಿಸಿದ್ದರು.
ಕೆಪಿಸಿಸಿ ಎಸ್.ಟಿ. ಘಟಕದ ಪ್ರಧಾನ ಕಾರ್ಯದರ್ಶಿ ಎಂ.ಡಿ.ಕೀರ್ತಿಕುಮಾರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಪಿ. ಪಾಲಯ್ಯ ಅವರು ದರ್ಶನ ಪಡೆದರು. ದೇವಸ್ಥಾನ ಸಮಿತಿ ಅಧ್ಯಕ್ಷ ಡಿ. ಶ್ರೀನಿವಾಸ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.