ADVERTISEMENT

ದಾವಣಗೆರೆ| ತಪ್ಪು ಹಾದಿ ತುಳಿಯದ ರಾಮನ ಆದರ್ಶ ಪಾಲಿಸಿ: ಡಾ.ಪ್ರಭಾ ಮಲ್ಲಿಕಾರ್ಜುನ್

​ಪ್ರಜಾವಾಣಿ ವಾರ್ತೆ
Published 8 ಅಕ್ಟೋಬರ್ 2025, 5:21 IST
Last Updated 8 ಅಕ್ಟೋಬರ್ 2025, 5:21 IST
ದಾವಣಗೆರೆಯ ಗುಂಡಿ ಮಹದೇವಪ್ಪ ಕಲ್ಯಾಣ ಮಂಟಪದಲ್ಲಿ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಹಾಗೂ ಗಣ್ಯರು ದೀಪ ಬೆಳಗಿಸಿ ಉದ್ಘಾಟಿಸಿದರು ಪ್ರಜಾವಾಣಿ ಚಿತ್ರ
ದಾವಣಗೆರೆಯ ಗುಂಡಿ ಮಹದೇವಪ್ಪ ಕಲ್ಯಾಣ ಮಂಟಪದಲ್ಲಿ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಹಾಗೂ ಗಣ್ಯರು ದೀಪ ಬೆಳಗಿಸಿ ಉದ್ಘಾಟಿಸಿದರು ಪ್ರಜಾವಾಣಿ ಚಿತ್ರ   

ದಾವಣಗೆರೆ: ‘ರಾಮಾಯಣದ ಶ್ರೀರಾಮ ಎಂತಹ ಕಷ್ಟದ ಸಂದರ್ಭಗಳಲ್ಲೂ ತಪ್ಪು ಹಾದಿ ತುಳಿಯಲಿಲ್ಲ. ಶ್ರೀರಾಮನನ್ನು ಮಾರ್ಯಾದಾ ಪುರುಷೋತ್ತಮ ಎಂದು ಕರೆಯಲಾಗುತ್ತದೆ. ರಾಮನ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳೋಣ’ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು. 

ಇಲ್ಲಿನ ಗುಂಡಿ ಮಹದೇವಪ್ಪ ಕಲ್ಯಾಣ ಮಂಟಪದಲ್ಲಿ ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಸಮಾರಂಭದಲ್ಲಿ ಮಾತನಾಡಿದರು. 

‘ರಾಮನು ಕಾಡಿಗೆ ತೆರಳಿದಾಗ ಸಹೋದರ ಭರತ ರಾಮನ ಪಾದುಕೆಗಳನ್ನು ಸಿಂಹಾಸನದ ಮೇಲೆ ಇಟ್ಟು ರಾಜ್ಯಭಾರ ಮಾಡುತ್ತಾನೆ. ವನವಾಸದ ನಂತರ ಪುನಃ ರಾಮನ ಪಟ್ಟಾಭಿಷೇಕ ನಡೆಯುತ್ತದೆ. ಹಿರಿಯರಿಗೆ ಗೌರವ ನೀಡುವುದು, ಸಹೋದರತ್ವ ಪಾಲಿಸುವುದು, ಸತಿ –ಪತಿಯನ್ನು ಗೌರವಿಸುವ ಗುಣಗಳು ಎಲ್ಲಾ ಕಾಲಕ್ಕೂ ಮಾದರಿಯಾಗಿವೆ’ ಎಂದರು. 

ADVERTISEMENT

‘ರಾಮಾಯಣ ಬಗ್ಗೆ ದೇಶದಲ್ಲಿ ಮಾತ್ರವಲ್ಲದೆ ವಿದೇಶಗಳಲ್ಲಿಯೂ ಅಧ್ಯಯನಗಳು ನಡೆದಿವೆ. ರಾಮಾಯಣವನ್ನು ಬೇರೆ ಬೇರೆ ಕವಿಗಳು ತಮ್ಮದೇ ಆದ ದೃಷ್ಟಿಕೋನದಲ್ಲಿ ಕಂಡಿದ್ದಾರೆ’ ಎಂದು ಹೇಳಿದರು. 

‘ಎಸ್‌ಟಿ ಸಮುದಾಯದ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ಶ್ರಮಿಸುತ್ತಿದೆ. ವಿದ್ಯಾರ್ಥಿ ವೇತನದ ಜೊತೆಗೆ ವಿದೇಶದಲ್ಲಿ ಶಿಕ್ಷಣ ಪಡೆಯಲು ₹39 ಕೋಟಿ ಪ್ರೋತ್ಸಾಹ ಧನ ನೀಡಿದೆ. ವಾಲ್ಮೀಕಿ ಭವನ ನಿರ್ಮಾಣಕ್ಕೂ ಅನುದಾನ ಮೀಸಲಿರಿಸಿದೆ’ ಎಂದು ತಿಳಿಸಿದರು. 

‘ಪ್ರಪಂಚದ ಏಳು ಮಹಾಕಾವ್ಯಗಳ ಪಟ್ಟಿಯಲ್ಲಿ ದೇಶದ ವಾಲ್ಮೀಕಿ ರಾಮಾಯಣ ಮತ್ತು ವ್ಯಾಸ ಕವಿ ರಚಿಸಿದ ಮಹಾಭಾರತ ಸೇರಿವೆ. ವಾಲ್ಮೀಕಿ ರಾಮಾಯಣದಂತಹ ಮಹಾಕಾವ್ಯ ಇನ್ನೊಂದಿಲ್ಲ’ ಎಂದು ಉಪನ್ಯಾಸ ನೀಡಿದ ನಿವೃತ್ತ ಪ್ರಾಂಶುಪಾಲ ಡಾ.ದಾದಾಪೀರ್ ನವಿಲೇಹಾಳ್ ಅಭಿಪ್ರಾಯಪಟ್ಟರು.  

‘ವಾಲ್ಮೀಕಿಯ ಮೂಲ ಹೆಸರು ರತ್ನಾಕರ, ಇದರ ಅರ್ಥ ಸಮುದ್ರವಾಗಿದೆ. ಅಂದರೆ ಸಮುದ್ರದಲ್ಲಿರುವ ಮುತ್ತು ರತ್ನ. ವಾಲ್ಮೀಕಿ ರಾಮಾಯಾಣವು ನೈತಿಕ ಮೌಲ್ಯಗಳನ್ನೊಳಗೊಂಡ ಮಹಾಕಾವ್ಯವಾಗಿದೆ. ನಾರದರಿಂದ ಪ್ರಭಾವಿತರಾದ ವಾಲ್ಮೀಕಿ ರಾಮಾಯಾಣವನ್ನು ರಚಿಸುತ್ತಾರೆ. ರಾಮಾಯಾಣದಲ್ಲಿ ಅಕ್ಷರಸ್ಥರು, ಅನಕ್ಷರಸ್ಥರು ಎಲ್ಲರೂ ಆಲಿಸುವಂತಹ ಪಾತ್ರಗಳು, ಘಟನಾವಳಿಗಳಿವೆ’ ಎಂದರು. 

ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಎನ್.ಜಯದೇವನಾಯ್ಕ, ‘ಧೂಡಾ’ ಅಧ್ಯಕ್ಷ ದಿನೇಶ್ ಶೆಟ್ಟಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಶಾಮನೂರು ಟಿ.ಬಸವರಾಜ್, ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರ ಸ್ವಾಮಿ, ಜಿಲ್ಲಾ ಪಂಚಾಯಿತಿ ಸಿಇಒ ಗಿತ್ತೆ ಮಾಧವ ವಿಠಲರಾವ್, ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಡಾ.ನವೀನ್ ಮಠದ್ ಹಾಗೂ ಸಮುದಾಯದ ಹಲವು ಮುಖಂಡರು ಉಪಸ್ಥಿತರಿದ್ದರು. 

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ವೇದಿಕೆ ಕಾರ್ಯಕ್ರಮಕ್ಕೂ ಮೊದಲು ವಾಲ್ಮೀಕಿ ಮಹರ್ಷಿಯ ಭಾವಚಿತ್ರವನ್ನು ನಗರದ ಪ್ರಮುಖ ಬೀದಿಗಳಲ್ಲಿ ಕಲಾತಂಡಗಳೊಂದಿಗೆ ಬೆಳ್ಳಿರಥದಲ್ಲಿ ಮೆರವಣಿಗೆ ನಡೆಸಲಾಯಿತು.

ವಾಲ್ಮೀಕಿ ಜಯಂತಿ ಅಂಗವಾಗಿ ನಡೆದ ಮೆರವಣಿಗೆಯಲ್ಲಿ ಡೊಳ್ಳು ಕುಣಿತ ಕಲಾವಿದರು ಗಮನ ಸೆಳೆದರು
ವಾಲ್ಮೀಕಿ ಮಹರ್ಷಿಯವರು ರಾಮಾಯಣ ಮಹಾಕಾವ್ಯದ ಮೂಲಕ ಛಾಪು ಮೂಡಿಸಿದ್ದಾರೆ. ವಾಲ್ಮೀಕಿಯವರ ಆದರ್ಶಗಳನ್ನು ಪಾಲಿಸುವುದೇ ಅವರಿಗೆ ನಾವು ನೀಡುವ ಗೌರವವಾಗಿದೆ. 
ಕೆ.ಎಸ್.ಬಸವಂತಪ್ಪ ಮಾಯಕೊಂಡ ಶಾಸಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.