ಮಾವಿನಹೊಳೆ (ಚನ್ನಗಿರಿ): ‘ನಾವು ಮಾಡುವ ಯಾವುದೇ ವೃತ್ತಿ ತನ್ನದೇ ಆದ ಗೌರವವನ್ನು ಹೊಂದಿರುತ್ತವೆ. ನಾವು ಮಾಡುವ ವೃತ್ತಿಗೆ ಚ್ಯುತಿಯಾಗದಂತೆ ನಡೆದುಕೊಳ್ಳಬೇಕು’ ಎಂದು ಬಿಜೆಪಿ ಯುವ ಮುಖಂಡ ಮಾಡಾಳ್ ಪ್ರಶಾಂತ್ ತಿಳಿಸಿದರು.
ತಾಲ್ಲೂಕಿನ ಮಾವಿನಹೊಳೆ ಗ್ರಾಮದ ಮಹಾರುದ್ರಸ್ವಾಮಿ ಸಮುದಾಯ ಭವನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವೀರಶೈವ ಪುರೋಹಿತ ಸಭಾ ತಾಲ್ಲೂಕು ಘಟಕ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಎಡೆಯೂರು ಮಠದ ರೇಣುಕಾ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ‘ಎಲ್ಲರೂ ಸಂಸ್ಕೃತ ಭಾಷೆಯನ್ನು ಕಲಿಯಬೇಕು. ಸಂಸ್ಕೃತ ಭಾಷೆಯಿಂದ ಸುಸಂಸ್ಕೃತರಾಗಲು ಸಾಧ್ಯ’ ಎಂದು ಹೇಳಿದರು.
‘ಪುರೋಹಿತರು ಭಕ್ತರು ಹಾಗೂ ದೇವರ ಮಧ್ಯೆ ಕೊಂಡಿಗಳಂತೆ ಕಾರ್ಯನಿರ್ವಹಿಸುತ್ತಿದ್ದಾರೆ. ಮಕ್ಕಳಿಗೆ ವೇದ ಪಾಠವನ್ನು ಕಲಿಸಲು ಪೋಷಕರು ಮುಂದಾಗಬೇಕು. ಪುರೋಹಿತ ಸಂಘಟನೆ ಇನ್ನಷ್ಟು ಶಕ್ತಿಯುತವಾಗಿ ಬೆಳೆಯಲಿ’ ಎಂದು ಆಶಿಸಿದರು.
ಪುರೋಹಿತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಚನ್ನೇಶ್ ಶಾಸ್ತ್ರಿ, ತಾಲ್ಲೂಕು ಅಧ್ಯಕ್ಷ ನೀಲಕಂಠಯ್ಯ ಶಾಸ್ತ್ರಿ, ತುಮ್ಕೋಸ್ ಅಧ್ಯಕ್ಷ ಆರ್.ಎಂ. ರವಿ, ಕಾಂಗ್ರೆಸ್ ಕಿಸಾನ್ ಸೆಲ್ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ್ ಶಿವಗಂಗಾ, ಪ್ರಕಾಶ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಮಂಜುಳ ಟಿ.ವಿ. ರಾಜು, ಕರವೇ ಮಹಿಳಾ ಘಟಕದ ಅಧ್ಯಕ್ಷೆ ಜ್ಯೋತಿ ಕೋರಿ ಉಪಸ್ಥಿತರಿದ್ದರು.
ಹೊನ್ನಾಳಿ ಹಿರೇಕಲ್ಮಠದ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ, ದುಗ್ಲಿ ರೇವಣಸಿದ್ದೇಶ್ವರ ಸ್ವಾಮೀಜಿ, ತಾವರೆಕೆರೆ ಶಿಲಾಮಠದ ಅಭಿನವ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ, ಚನ್ನಗಿರಿ ಹಾಲಸ್ವಾಮಿ ವಿರಕ್ತ ಮಠದ ಬಸವ ಜಯಚಂದ್ರ ಸ್ವಾಮೀಜಿ, ಕೇದಾರಾಲಿಂಗ ಹಿರೇಮಠದ ಶಿವಶಾಂತವೀರ ಶಿವಾಚಾರ್ಯ ಸ್ವಾಮೀಜಿ ನೇತೃತ್ವ ವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.