ADVERTISEMENT

ದಾವಣಗೆರೆ | ಹಾಸ್ಟೆಲ್‌ ವಿದ್ಯಾರ್ಥಿಗಳಿಗಾಗಿ ‘ಆರೋಗ್ಯ ಬಂಧು’; ರಾಜ್ಯದಲ್ಲೇ ಮೊದಲು

ರಾಮಮೂರ್ತಿ ಪಿ.
Published 30 ಜನವರಿ 2026, 23:46 IST
Last Updated 30 ಜನವರಿ 2026, 23:46 IST
   

ದಾವಣಗೆರೆ: ಸರ್ಕಾರಿ ವಸತಿ ನಿಲಯಗಳಲ್ಲಿರುವ ವಿದ್ಯಾರ್ಥಿಗಳ ಆರೋಗ್ಯವನ್ನು ನಿಯಮಿತವಾಗಿ ಪರೀಕ್ಷಿಸಿ ಚಿಕಿತ್ಸೆ ನೀಡಲು ಇಲ್ಲಿನ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ವತಿಯಿಂದ ‘ವಿದ್ಯಾರ್ಥಿ ಆರೋಗ್ಯಬಂಧು’ ಎಂಬ ವಿಶೇಷ ಯೋಜನೆ ರೂಪಿಸಲಾಗಿದೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಆರೋಗ್ಯ ಇಲಾಖೆಗಳ ಸಹಯೋಗದಲ್ಲಿ ರಾಜ್ಯದಲ್ಲೇ ಮೊದಲು ಜಿಲ್ಲೆಯಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. 

ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ವಸತಿಯುತ ಶಾಲೆಗಳ ವಿದ್ಯಾರ್ಥಿಗಳು ಈ ಯೋಜನೆಯ ಫಲಾನುಭವಿಗಳಾಗಲಿದ್ದಾರೆ. ಯೋಜನೆಯಡಿ ಜಿಲ್ಲೆಯಲ್ಲಿ ಪ್ರತಿ ತಿಂಗಳು 20,000 ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ನಡೆಯಲಿದೆ. 

ADVERTISEMENT

ಸರ್ಕಾರಿ ವಸತಿ ನಿಲಯಗಳಲ್ಲಿರುವ, ಪ್ರಾಥಮಿಕ ಶಿಕ್ಷಣದಿಂದ ಸ್ನಾತ್ತಕೋತ್ತರ ಪದವಿವರೆಗೆ ಕಲಿಯುತ್ತಿರುವ ಎಲ್ಲ ವಿದ್ಯಾರ್ಥಿಗಳಿಗೂ ಈ ಯೋಜನೆಯ ನೆರವು ದೊರೆಯಲಿದೆ. 

ಹೀಗಿರುತ್ತದೆ ಪ್ರಕ್ರಿಯೆ:  

ಪ್ರತಿ ತಿಂಗಳು ಪ್ರಾಥಮಿಕ ಆರೋಗ್ಯ ಕೇಂದ್ರ (ಪಿಎಚ್‌ಸಿ) ‘ನಮ್ಮ ಕ್ಲಿನಿಕ್‌’ ಸೇರಿದಂತೆ ವಸತಿ ನಿಲಯಗಳ ಸಮೀಪದ ಸರ್ಕಾರಿ ಆಸ್ಪತ್ರೆಗಳ ವೈದ್ಯರು ಹಾಗೂ ಸಿಬ್ಬಂದಿ ಹಾಸ್ಟೆಲ್‌ಗೆ ತೆರಳಿ ವಿದ್ಯಾರ್ಥಿಗಳ ಆರೋಗ್ಯ ಪರೀಕ್ಷಿಸಿ, ಔಷಧ ನೀಡಲಿದ್ದಾರೆ. 

ಯೋಜನೆಯ ಭಾಗವಾಗಿ ಪ್ರತಿ ವಿದ್ಯಾರ್ಥಿಗೆ ‘ಆರೋಗ್ಯ ಕಾರ್ಡ್‌’ ವಿತರಿಸಲಾಗುತ್ತಿದೆ. ಇದರಲ್ಲಿ ವಿದ್ಯಾರ್ಥಿಯ ಸಂಪೂರ್ಣ ವಿವರವನ್ನು ದಾಖಲಿಸಲಾಗುತ್ತಿದೆ. ಪ್ರತಿ ತಿಂಗಳು ಆರೋಗ್ಯ ಪರಿಶೀಲಿಸಿದಾಗ ವೈದ್ಯಾಧಿಕಾರಿ, ವಾರ್ಡನ್‌ ಹಾಗೂ ವಿದ್ಯಾರ್ಥಿಯು ಆ ಕಾರ್ಡ್‌ನಲ್ಲಿ ಸಹಿ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ.

ವಿದ್ಯಾರ್ಥಿಯ ರಕ್ತದ ಗುಂಪು, ಎತ್ತರ, ತೂಕ, ಕುಟುಂಬದ ಆರೋಗ್ಯ ಹಿನ್ನೆಲೆ, ನೀರು, ಆಹಾರದಿಂದ ಅಥವಾ ಔಷಧಿಯಿಂದ ಉಂಟಾಗುವ ಅಲರ್ಜಿ, ರಕ್ತದೊತ್ತಡ ಪ್ರಮಾಣ, ಮಧುಮೇಹ, ಮನೋರೋಗ ಸೇರಿದಂತೆ ಇನ್ನಿತರ ಆರೋಗ್ಯ ಸಮಸ್ಯೆಗಳ ಬಗ್ಗೆ ಆರೋಗ್ಯ ಕಾರ್ಡ್‌ನಲ್ಲಿ ನಮೂದಿಸಲಾಗುತ್ತದೆ.

‘ಆರೋಗ್ಯ ಸಮಸ್ಯೆ ಎದುರಿಸುತ್ತಿರುವ ವಿದ್ಯಾರ್ಥಿಗಳನ್ನು ಗುರುತಿಸಿ, ಕಾಯಿಲೆ ಕುರಿತು ಅಧಿಕ ಕಾಳಜಿ ವಹಿಸಲು ಈ ಯೋಜನೆ ಸಹಕಾರಿಯಾಗಲಿದೆ’ ಎನ್ನುತ್ತಾರೆ ಜಿಲ್ಲಾ ಪಂಚಾಯಿತಿ ಸಿಇಒ ಗಿತ್ತೆ ಮಾಧವ ವಿಠ್ಠಲರಾವ್.

ಯೋಜನೆಯ ಭಾಗವಾಗಿ ಪ್ರತ್ಯೇಕ ಪೋರ್ಟಲ್‌ ರೂಪಿಸಲಾಗಿದ್ದು, ಪ್ರತಿ ವಿದ್ಯಾರ್ಥಿಯೂ ತನಗೆ ನೀಡಿದ ವಿಶೇಷ ಗುರುತಿನ ಸಂಖ್ಯೆಯನ್ನು ನಮೂದಿಸಿ ಆನ್‌ಲೈನ್‌ ಮೂಲಕವೂ ಆರೋಗ್ಯದ ಸ್ಥಿತಿಗತಿಯನ್ನು ಪರಿಶೀಲಿಸಿಕೊಳ್ಳಬಹುದು.

ಜನವರಿ 12ರಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಹಾಗೂ ಜಿಲ್ಲೆಯ ಶಾಸಕರು ವಿದ್ಯಾರ್ಥಿಗಳಿಗೆ ಆರೋಗ್ಯ ಕಾರ್ಡ್‌ ವಿತರಿಸಿ ಯೋಜನೆಗೆ ಸಾಂಕೇತಿಕವಾಗಿ ಚಾಲನೆ ನೀಡಿದ್ದಾರೆ. ವೈದ್ಯರು ಹಾಗೂ ಸಿಬ್ಬಂದಿ ಜ.31ರಿಂದ ಸರ್ಕಾರಿ ವಸತಿ ನಿಲಯಗಳಿಗೆ ಭೇಟಿ ನೀಡಿ ಆರೋಗ್ಯ ಪರೀಕ್ಷೆ ಕಾರ್ಯ ಆರಂಭಿಸಲಿದ್ದಾರೆ.

ಆರೋಗ್ಯ ಕಾರ್ಡ್‌ನಲ್ಲಿ ಮಾಹಿತಿ

ಆರೋಗ್ಯ ಕಾರ್ಡ್‌ನಲ್ಲಿ ಸಂವಿಧಾನದ ಮಹತ್ವ, ಡಿಜಿಟಲ್‌ ಅರೆಸ್ಟ್‌, ಆನ್‌ಲೈನ್‌ ಗೇಮಿಂಗ್‌, ಸೈಬರ್ ಅಪರಾಧ, ಲೈಂಗಿಕ ದೌರ್ಜನ್ಯಗಳ ಬಗ್ಗೆ ಅರಿವು ಮೂಡಿಸುವ ಬರಹಗಳಿವೆ. ಅಲ್ಲದೆ, ಬಾಲ್ಯವಿವಾಹ, ಪೋಕ್ಸೊ ತಡೆ ಕಾಯ್ದೆ, ಬಾಲ ಕಾರ್ಮಿಕ ಪದ್ಧತಿ, ಪೌಷ್ಟಿಕ ಆಹಾರದ ಬಗ್ಗೆಯೂ ಮಾಹಿತಿ ನೀಡಲಾಗಿದೆ. ಎಸ್‌ಎಸ್‌ಎಲ್‌ಸಿ ಬಳಿಕ ವಿದ್ಯಾರ್ಥಿಗಳು ಆಯ್ದುಕೊಳ್ಳಬಹುದಾದ ವಿವಿಧ ಕೋರ್ಸ್‌ಗಳ ಬಗ್ಗೆಯೂ ವಿವರಿಸಲಾಗಿದೆ. ಸಹಾಯವಾಣಿ ಸಂಖ್ಯೆಗಳು, ತುರ್ತು ಸಂಪರ್ಕ ಸಂಖ್ಯೆಗಳನ್ನು ನಮೂದಿಸಲಾಗಿದೆ.

ಜಿಲ್ಲೆಯಲ್ಲಿ ಈ ಯೋಜನೆ ಅನುಷ್ಠಾನಗೊಳ್ಳುತ್ತಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿರುವ ಸರ್ಕಾರವು, ಯೋಜನೆಯನ್ನು ರಾಜ್ಯದಾದ್ಯಂತ ವಿಸ್ತರಿಸುವ ಭರವಸೆ ನೀಡಿದೆ.
– ಜಿ.ಎಂ. ಗಂಗಾಧರಸ್ವಾಮಿ, ಜಿಲ್ಲಾಧಿಕಾರಿ, ದಾವಣಗೆರೆ
ಪ್ರತಿ ಶನಿವಾರ, ಭಾನುವಾರ ವೈದ್ಯರು ಹಾಸ್ಟೆಲ್‌ಗಳಿಗೆ ತೆರಳಿ ವಿದ್ಯಾರ್ಥಿಗಳ ಆರೋಗ್ಯ ಪರೀಕ್ಷಿಸುವರು. ಕೆಲಸಕ್ಕೆ ಅಡ್ಡಿಯಾಗದಂತೆ ಸಮಯ ಹೊಂದಾಣಿಕೆ ಮಾಡಲಾಗುತ್ತದೆ.
ಗಿತ್ತೆ ಮಾಧವ ವಿಠ್ಠಲರಾವ್‌, ಸಿಇಒ, ಜಿಲ್ಲಾ ಪಂಚಾಯಿತಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.