ಭದ್ರಾವತಿ: ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಮುಚ್ಚುವ ಆದೇಶ ಪುನರ್ ಪರಿಶೀಲನೆ ನಡೆಸುವಂತೆ ಕೇಂದ್ರ ಉಕ್ಕು ಸಚಿವರಿಗೆ ರಾಜ್ಯ ಸರ್ಕಾರ ಮನವಿ ಮಾಡಿದೆ.
ಈ ಕುರಿತು ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧ್ಯಾ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 27ರಂದು ಪತ್ರ ಬರೆದಿದ್ದು, ಭದ್ರಾವತಿ ಕ್ಷೇತ್ರದ ಜನರು ವಿಐಎಸ್ಎಲ್ ಕಾರ್ಖಾನೆಯನ್ನು ನಂಬಿ ಬದುಕು ಕಟ್ಟಿಕೊಂಡಿದ್ದಾರೆ. ಅಲ್ಲದೆ ಈ ಕಾರ್ಖಾನೆ ರಾಜ್ಯದ ಇತಿಹಾಸದ ಭವ್ಯ ಪರಂಪರೆಯಾಗಿದೆ. ಭಾರತರತ್ನ, ಶ್ರೇಷ್ಠ ತಂತ್ರಜ್ಞ ಸರ್.ಎಂ ವಿಶ್ವೇಶ್ವರಯ್ಯ ಅವರಿಗೆ ಗೌರವ ಸಲ್ಲಿಸಬೇಕಾದರೆ ಈ ಕಾರ್ಖಾನೆ ಉಳಿಯಬೇಕಾಗಿದೆ ಎಂದಿದ್ದಾರೆ.
ಈ ಹಿಂದೆ 2018ರಲ್ಲಿ ರಾಜ್ಯ ಸರ್ಕಾರ 150 ಎಕರೆ ಕಬ್ಬಿಣ ಅದಿರು ಗಣಿ ಕಾರ್ಖಾನೆಗೆ ಮಂಜೂರಾತಿ ಮಾಡಿದ್ದು, ಈಗಾಗಲೇ ಎಲ್ಲಾ ಪ್ರಕ್ರಿಯೆಗಳು ಮುಕ್ತಾಯಗೊಂಡಿದೆ. 2024ರಿಂದ ಗಣಿಯಲ್ಲಿ ಅದಿರು ಉತ್ಪಾದನೆ ಆರಂಭಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಕಾರ್ಖಾನೆಯನ್ನು ಯಾವುದೇ ಕಾರಣಕ್ಕೂ ಮುಚ್ಚದೆ ಮುನ್ನಡೆಸಿಕೊಂಡು ಹೋಗುವ ಸಂಬಂಧ ಪುನರ್ ಪರಿಶೀಲನೆ ಮಾಡುವಂತೆ ಮನವರಿಕೆ ಮಾಡಿದ್ದಾರೆ.
ಕಾರ್ಖಾನೆ ಮುಂಭಾಗ ಕಳೆದ ಸುಮಾರು 6 ತಿಂಗಳಿನಿಂದ ಗುತ್ತಿಗೆ ಕಾರ್ಮಿಕರು ಹೋರಾಟ ನಡೆಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.