ದಾವಣಗೆರೆ: ಮಹಾತ್ಮ ಗಾಂಧೀಜಿ ನೇತೃತ್ವದಲ್ಲಿ ಸ್ವಾತಂತ್ರ್ಯ ಹೋರಾಟಗಾರರು ಭಾರತದ ಅಭಿವೃದ್ಧಿಗೆ ಅಳವಡಿಸಿಕೊಂಡ ಪ್ರಜಾಪ್ರಭುತ್ವ ಹಾಗೂ ಚುನಾವಣಾ ವ್ಯವಸ್ಥೆಯನ್ನು ಬುಡಮೇಲು ಮಾಡಲು ಬಿಜೆಪಿ ಯತ್ನಿಸುತ್ತಿದೆ ಎಂದು ಎಐಸಿಸಿ ಕಾರ್ಯದರ್ಶಿ ಮಯೂರ ಜಯಕುಮಾರ್ ಆರೋಪಿಸಿದರು.
ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿರುವ ‘ವೋಟ್ ಚೋರಿ’ ಸಹಿ ಸಂಗ್ರಹ ಅಭಿಯಾನಕ್ಕೆ ಇಲ್ಲಿನ ಜಯದೇವ ವೃತ್ತದಲ್ಲಿ ಭಾನುವಾರ ಚಾಲನೆ ನೀಡಿ ಅವರು ಮಾತನಾಡಿದರು.
‘ಭಾರತಕ್ಕೆ ಪ್ರಜಾಪ್ರಭುತ್ವ ವ್ಯವಸ್ಥೆ ಸೂಕ್ತ ಎಂಬುದನ್ನು ಸ್ವಾತಂತ್ರ್ಯ ಹೋರಾಟಗಾರರು 1947ಕ್ಕೂ ಮುನ್ನವೇ ಅರಿತಿದ್ದರು. ನಿಷ್ಪಕ್ಷಪಾತ ಚುನಾವಣೆ ನಡೆಸಲು ಚುನಾವಣಾ ಆಯೋಗಕ್ಕೆ ಸ್ವಾಯತ್ತತೆ ನೀಡಿದ್ದರು. ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿ ಇರುವವರೆಗೂ ಚುನಾವಣಾ ಆಯೋಗದ ಸಾಂವಿಧಾನಿಕ ಚೌಕಟ್ಟಿಗೆ ಧಕ್ಕೆ ಉಂಟಾಗಿರಲಿಲ್ಲ. ಆದರೆ, ಬಿಜೆಪಿ ಅಧಿಕಾರ ಹಿಡಿದ ಬಳಿಕ ಚುನಾವಣಾ ಆಯೋಗವನ್ನು ಕಪಿಮುಷ್ಟಿಯಲ್ಲಿ ಇಟ್ಟುಕೊಂಡಿದೆ’ ಎಂದು ದೂರಿದರು.
‘ಮತಗಳ್ಳತನ ಮಾಡುವ ಮೂಲಕ ಬಿಜೆಪಿ ಅಧಿಕಾರ ಹಿಡಿಯುತ್ತಿದೆ. ಮತದಾರರ ಪಟ್ಟಿಯಲ್ಲಿ ಸುಳ್ಳು ಹೆಸರು ಇರುವುದನ್ನು ಕಾಂಗ್ರೆಸ್ ಸಾಕ್ಷ್ಯ ಸಮೇತ ಜನರ ಮುಂದಿಟ್ಟಿದೆ. ಒಬ್ಬ ಮತದಾರ ಹಲವು ಕ್ಷೇತ್ರಗಳಲ್ಲಿ ಮತ ಚಲಾವಣೆ ಮಾಡಿರುವುದು ಪತ್ತೆಯಾಗಿದೆ. ಇದರ ವಿಡಿಯೊ ದಾಖಲೆಗಳನ್ನು ಬಿಡುಗಡೆ ಮಾಡಲು ಚುನಾವಣಾ ಆಯೋಗ ಮೀನ–ಮೇಷ ಎಣಿಸುತ್ತಿದೆ. ಆಯೋಗ ಪಾರದರ್ಶಕ ಹಾಗೂ ಪ್ರಾಮಾಣಿಕ ನಡವಳಿಕೆ ಹೊಂದಿದ್ದರೆ ಈ ಹಿಂಜರಿಕೆ ಏಕೆ’ ಎಂದು ಪ್ರಶ್ನಿಸಿದರು.
‘ಚುನಾವಣಾ ಆಯೋಗ ಸಾಂವಿಧಾನಿಕ ಸಂಸ್ಥೆ. ಪ್ರತಿಯೊಬ್ಬರ ಮತದಾನದ ಹಕ್ಕು ಕಾಪಾಡುವುದು ಆಯೋಗದ ಜವಾಬ್ದಾರಿ. ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಬೇಕು. ಆದರೆ, ಆಯೋಗ ಇದಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ. ಪ್ರಜಾಪ್ರಭುತ್ವದ ಆಶಯಗಳನ್ನು ಹಾಳು ಮಾಡಲು ಪ್ರಯತ್ನಿಸುತ್ತಿದೆ’ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ದೂರಿದರು.
‘ಸ್ವತಂತ್ರವಾಗಿ ಕಾರ್ಯನಿರ್ವಹಿಸಬೇಕಾಗಿದ್ದ ಆಯೋಗ ಬಿಜೆಪಿಯ ಕೈಗೊಂಬೆಯಾಗಿದೆ. ಹೊರರಾಜ್ಯದ ಮತದಾರರು ಕರ್ನಾಟಕದ ಮತದಾರರ ಪಟ್ಟಿಯಲ್ಲಿದ್ದರೂ ಕಣ್ಮುಚ್ಚಿ ಕುಳಿತಿದೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮುಂದಿಟ್ಟಿರುವ ಪ್ರಶ್ನೆಗಳಿಗೆ ಉತ್ತರ ನೀಡುವುದನ್ನು ಬಿಟ್ಟು ಬಿಜೆಪಿಯ ಮುಖವಾಣಿಯಂತೆ ವರ್ತಿಸುತ್ತಿದೆ’ ಎಂದು ಕಿಡಿಕಾರಿದರು.
‘ಕೇಂದ್ರ ಸರ್ಕಾರದ ಮಲತಾಯಿ ಧೋರಣೆಯಿಂದಾಗಿ ರಾಜ್ಯದ ಅಭಿವೃದ್ಧಿಗೆ ತೊಡಕಾಗಿದೆ. ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಸಂಗ್ರಹದಲ್ಲಿ ಕರ್ನಾಟಕ ದೇಶದಲ್ಲಿ 2ನೇ ಸ್ಥಾನದಲ್ಲಿದೆ. ಆದರೆ, ಕೇಂದ್ರ ಸರ್ಕಾರ ರಾಜ್ಯದ ಪಾಲನ್ನು ಸರಿಯಾಗಿ ನೀಡುತ್ತಿಲ್ಲ. ಬಿಜೆಪಿ ಸಂಸದರು ಈ ಬಗ್ಗೆ ಕೇಂದ್ರ ಸರ್ಕಾರವನ್ನು ಪ್ರಶ್ನೆ ಮಾಡುತ್ತಿಲ್ಲ’ ಎಂದು ಹರಿಹಾಯ್ದರು.
ಶಿಗ್ಗಾವಿ ಶಾಸಕ ಯಾಸೀರ ಅಹ್ಮದ್ ಖಾನ್ ಪಠಾಣ, ವಿಧಾನಪರಿಷತ್ ಸದಸ್ಯ ಡಿ.ಟಿ. ಶ್ರೀನಿವಾಸ್, ಕರ್ನಾಟಕ ಜೀವವೈವಿಧ್ಯ ಮಂಡಳಿ ಅಧ್ಯಕ್ಷ ವಡ್ನಾಳ್ ಜಗದೀಶ್, ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಮರಿಯೋಜಿರಾವ್, ದಾವಣಗೆರೆ–ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ, ಮಾಜಿ ಶಾಸಕ ಎಸ್. ರಾಮಪ್ಪ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಬಸವರಾಜ್ ಹಾಜರಿದ್ದರು.
‘ಮತದಾರರ ಪಟ್ಟಿಯಲ್ಲಿ ಆಗಿರುವ ಲೋಪಗಳನ್ನು ದೇಶದ ಮುಂದೆ ಇಡಲಾಗಿದೆ. ಇದನ್ನು ಜನರ ಬಳಿಗೆ ಕೊಂಡೊಯ್ಯುವ ಕಾರ್ಯವನ್ನು ಕಾಂಗ್ರೆಸ್ ಕಾರ್ಯಕರ್ತರು ಮಾಡಬೇಕು. ಜಿಲ್ಲೆಯಲ್ಲಿ 2 ಲಕ್ಷ ಸಹಿ ಸಂಗ್ರಹಿಸಬೇಕು’ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಕಾರ್ಯಕರ್ತರಿಗೆ ಸೂಚನೆ ನೀಡಿದರು.
‘ಅ.15ರವರೆಗೆ ನಡೆಯುವ ಸಹಿ ಸಂಗ್ರಹ ಅಭಿಯಾನದಲ್ಲಿ ಪ್ರತಿಯೊಬ್ಬರು ತೊಡಗಿಕೊಳ್ಳಬೇಕು. ಮನೆ–ಮನೆಗೆ ತೆರಳಿ ಸಹಿ ಸಂಗ್ರಹಿಸಬೇಕು. ಬಿಜೆಪಿ ಮಾಡುತ್ತಿರುವ ಮೋಸದ ಕುರಿತು ಜನರಿಗೆ ಮನವರಿಕೆ ಮಾಡಿಕೊಡಬೇಕು’ ಎಂದು ಹೇಳಿದರು.
‘ಜಿಲ್ಲೆಯಲ್ಲಿ 1 ಲಕ್ಷ ಸಹಿ ಸಂಗ್ರಹಿಸುವಂತೆ ಕೆಪಿಸಿಸಿ ಗುರಿ ನೀಡಿದೆ. ಸಂಸದರ ಅಪೇಕ್ಷೆಯಂತೆ ಜಿಲ್ಲೆಯಲ್ಲಿ 2 ಲಕ್ಷ ಸಹಿ ಸಂಗ್ರಹಿಸಲಾಗುವುದು’ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಬಿ. ಮಂಜಪ್ಪ ಪ್ರಕಟಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.