ದಾವಣಗೆರೆ: ಪ್ರಜಾಪ್ರಭುತ್ವದಲ್ಲಿ ಎಲ್ಲರ ಸಹಭಾಗಿತ್ವ ಅಗತ್ಯ. ಎಲ್ಲರೂ ಲೋಕಸಭಾ ಚುನಾವಣಾ ಹಬ್ಬದಲ್ಲಿ ಭಾಗವಹಿಸುವ ಮೂಲಕ ಪ್ರಜಾತಂತ್ರವನ್ನು ಆರಾಧಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಮನವಿ ಮಾಡಿದರು.
ನಗರದ ಹೈಸ್ಕೂಲ್ ಮೈದಾನದಲ್ಲಿ ಶನಿವಾರ ಜಿಲ್ಲಾ ಸ್ವೀಪ್ ಸಮಿತಿ, ಯುವಜನ ಕ್ರೀಡಾ ಇಲಾಖೆ ಹಾಗೂ ಮಾ ಸಾಹಸ ಕ್ರೀಡಾ ಅಕಾಡೆಮಿ ಸಹಭಾಗಿತ್ವದಲ್ಲಿ ಮತದಾರರ ಜಾಗೃತಿಗೆ ಆಯೋಜಿಸಿದ್ದ ಹಾಟ್ ಏರ್ ಬಲೂನ್ ತರಬೇತಿಗೆ ಚಾಲನೆ ನೀಡಿ ಮಾತನಾಡಿದರು.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಯುವ ಮತದಾರರು ಏಪ್ರಿಲ್ 9ರ ಒಳಗಾಗಿ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಸೇರ್ಪಡೆ ಮಾಡಬೇಕು. ಈ ಮೂಲಕ ಮತದಾನದ ಹಬ್ಬದಲ್ಲಿ ಭಾಗವಹಿಸಬೇಕು. ಒಂದು ಮತ ಅನೇಕ ಅಶ್ವಶಕ್ತಿಗೆ ಸಮವಾಗಿದ್ದು, ಯಾರೂ ಮತದಾನದಿಂದ ಹೊರಗುಳಿಯಬಾರದು ಎಂದು ಸಲಹೆ ನೀಡಿದರು.
ಮತದಾರರ ಜಾಗೃತಿಗಾಗಿ ಹಮ್ಮಿಕೊಂಡಿರುವ ಹಾಟ್ ಏರ್ ಬಲೂನ್ ತರಬೇತಿಯ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಮತದಾರರ ಪಟ್ಟಿಯನ್ನು ಅವಲೋಕಿಸಿ ಸೇರ್ಪಡೆ ಮಾತ್ತು ತಿದ್ದುಪಡಿ ಇದ್ದಲ್ಲಿ ಏಪ್ರಿಲ್ 9ರ ಒಳಗಾಗಿ ಸಲ್ಲಿಸಬಹುದು. ಚುನಾವಣೆಗೆ ಸಂಬಂಧಿಸಿದ ಸಹಾಯಕ್ಕಾಗಿ 1950 ಸಹಾಯವಾಣಿ ಸಂಪರ್ಕಿಸಬಹುದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ. ಇಟ್ನಾಳ್ ಹೇಳಿದರು.
‘ದಾವಣಗೆರೆಯಲ್ಲಿ ಮೊದಲ ಬಾರಿಗೆ ಹಾಟ್ ಏರ್ ಬಲೂನ್ ತರಬೇತಿ ಹಮ್ಮಿಕೊಳ್ಳಲಾಗಿದೆ. ಮಾರ್ಚ್ 17ರಂದೂ ತರಬೇತಿ ನಡೆಯಲಿದೆ. ಏರ್ ಬಲೂನ್ ಹಾರಾಟಕ್ಕೆ ದಿನವೊಂದಕ್ಕೆ 30 ಗ್ಯಾಸ್ ಸಿಲಿಂಡರ್ಗಳ ಅಗತ್ಯ ಇದೆ. ಜಿಲ್ಲಾ ಪಂಚಾಯಿತಿ ಅದರ ವೆಚ್ಚ ಭರಿಸುತ್ತಿದೆ. ಇದರ ಸದುಪಯೋಗ ಪಡೆಯಬೇಕು’ ಎಂದು ಮಾ ಸಾಹಸ ಕ್ರೀಡಾ ಅಕಾಡೆಮಿಯ ಮಾಗನಹಳ್ಳಿ ಮಂಜುನಾಥ್ ಸಲಹೆ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಜಿ. ಕೊಟ್ರೇಶ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ, ಯುವಜನ ಹಾಗೂ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಜಯಲಕ್ಷ್ಮಿಬಾಯಿ, ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.