ದಾವಣಗೆರೆ: ಅಡುಗೆ ಅನಿಲ ಬೆಲೆ ಏರಿಕೆ ವಿರೋಧಿಸಿ ದಾವಣಗೆರೆ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ವತಿಯಿಂದ ಬುಧವಾರ ನಗರದ ಅರಳಿಮರ ವೃತ್ತದಲ್ಲಿ ಸಿಲಿಂಡರ್ ಇಟ್ಟು ಪ್ರತಿಭಟನೆ ನಡೆಸಲಾಯಿತು.
ಕೊರೊನಾ ನಿಯಂತ್ರಣ ಕ್ರಮವಾಗಿ ಸರ್ಕಾರ ವಿಧಿಸಿದ್ದ ಲಾಕ್ಡೌನ್ನಿಂದ ದುಡಿಮೆ ಇಲ್ಲದೆ ಜನಸಾಮಾನ್ಯರು ಸಂಕಷ್ಟದಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಜನರ ಗಾಯದ ಮೇಲೆ ಬರೆ ಎಳೆದಿದೆ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಅನಿತಾಬಾಯಿ ಮಾಲತೇಶ್ ಆರೋಪಿಸಿದರು.
ಬಿಜೆಪಿ ಅಧಿಕಾರಕ್ಕೆ ಬಂದರೆ ದೇಶದ ಜನರಿಗೆ ಅಚ್ಛೆ ದಿನ್ ತರುವುದಾಗಿ ನರೇಂದ್ರ ಮೋದಿ ಹೇಳಿದ್ದರು. ಅಧಿಕಾರಕ್ಕೆ ಬಂದ ನಂತರದಲ್ಲಿ ಅಗತ್ಯ ವಸ್ತುಗಳ ಬೆಲೆಯನ್ನು ನಿರಂತರವಾಗಿ ಏರಿಕೆ ಮಾಡುವ ಮೂಲಕ ದೇಶದ ಜನರನ್ನು ದುಃಸ್ಥಿತಿಗೆ ತಳ್ಳಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರೆ ನಾಗರತ್ನಮ್ಮ ಟೀಕಿಸಿದರು.
ಕೋವಿಡ್ ನೆಪದಲ್ಲಿ ಜನರನ್ನು ಮನೆಯಲ್ಲಿ ಲಾಕ್ಮಾಡಿ, ಸಂಸತ್ತಿನಲ್ಲಿ ಚರ್ಚಿಸದೆ ಹಲವು ಜನವಿರೋಧಿ ಕಾಯ್ದೆಗಳನ್ನು ಜಾರಿಗೆ ತಂದು ದಿನಬಳಕೆ ವಸ್ತುಗಳ ಬೆಲೆ ಏರಿಸಿ ಮೇಲಿಂದ ಮೇಲೆ ಪೆಟ್ರೋಲ್, ಡೀಸೆಲ್ ಮತ್ತು ವಿದ್ಯುತ್ ದರ ಏರಿಸಿದೆ. ಅಲ್ಲದೆ, ಈಗ ಅಡುಗೆ ಅನಿಲದ ಬೆಲೆಯನ್ನು ಹೆಚ್ಚಳ ಮಾಡುವ ಮೂಲಕ ಕೇಂದ್ರ ಸರ್ಕಾರ ದುಡಿಯುವ ವರ್ಗದ ಜನರನ್ನು ಸಂಕಷ್ಟಕ್ಕೆ ತಳ್ಳಿದೆ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸುಷ್ಮಾ ಪಾಟೀಲ್, ದಾವಣಗೆರೆ ದಕ್ಷಿಣ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ ಶುಭಮಂಗಳ ಕಿಡಿಕಾರಿದರು.
ಬಳಿಕ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ, ಅಯೂಬ್ ಪೈಲ್ವಾನ್, ಮೈನುದ್ದೀನ್, ದಾದಾಪೀರ್, ದ್ರಾಕ್ಷಾಯಣಮ್ಮ, ರಹಜಾನ್ ದಾದಾಪೀರ್, ದಿಲ್ ಷಾ, ರಾಜೇಶ್ವರಿ, ಆಶಾ, ಸುನೀತಾ, ರುದ್ರಮ್ಮ, ಯಶೋದಾ, ಸಲ್ಮಾಬಾನು, ಗೀತಾ, ಕಲಾ, ಕವಿತಾ, ಮಂಗಳಮ್ಮ, ಇಂದ್ರಮ್ಮ, ಮಂಜುಳಾ, ರಾಧಾಬಾಯಿ, ಸಂಗೀತಾ, ಉಮಾ,ಜಯಶ್ರೀ , ಸಂಗಮ್ಮ, ಸುರೇಶ್ ಜಾಧವ್, ಮಹಮ್ಮದ್ ಜಿಕ್ರಿಯಾ ಅವರೂ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.