ADVERTISEMENT

‘ಉಜ್ವಲ್‌’ ಯೋಜನೆಗೆ ಚಾಲನೆ ಇಂದು

​ಪ್ರಜಾವಾಣಿ ವಾರ್ತೆ
Published 17 ಜೂನ್ 2017, 7:22 IST
Last Updated 17 ಜೂನ್ 2017, 7:22 IST
ಹುಬ್ಬಳ್ಳಿಯ ನೆಹರೂ ಮೈದಾನದಲ್ಲಿ ‘ಪ್ರಧಾನಮಂತ್ರಿ ಉಜ್ವಲ್‌’ ಯೋಜನೆಯ ಚಾಲನೆ ಕಾರ್ಯಕ್ರಮಕ್ಕೆ ಸಿದ್ಧಗೊಂಡಿರುವ ವೇದಿಕೆ
ಹುಬ್ಬಳ್ಳಿಯ ನೆಹರೂ ಮೈದಾನದಲ್ಲಿ ‘ಪ್ರಧಾನಮಂತ್ರಿ ಉಜ್ವಲ್‌’ ಯೋಜನೆಯ ಚಾಲನೆ ಕಾರ್ಯಕ್ರಮಕ್ಕೆ ಸಿದ್ಧಗೊಂಡಿರುವ ವೇದಿಕೆ   

ಹುಬ್ಬಳ್ಳಿ: ರಾಜ್ಯದ 33 ಲಕ್ಷ ಮಂದಿಗೆ ಉಚಿತವಾಗಿ ಅಡುಗೆ ಅನಿಲ ಸಂಪರ್ಕ ಒದಗಿಸುವ ಕೇಂದ್ರ ಸರ್ಕಾರದ ಮಹಾತ್ವಾಕಾಂಕ್ಷಿ ‘ಪ್ರಧಾನಮಂತ್ರಿ ಉಜ್ವಲ್‌’ ಯೋಜನೆಗೆ ಇದೇ 17 ರಂದು ಬೆಳಿಗ್ಗೆ 11 ಗಂಟೆಗೆ ನಗರದ ನೆಹರೂ ಮೈದಾನದಲ್ಲಿ ಕೇಂದ್ರದ ಸಂಸದೀಯ ವ್ಯವಹಾರ ಸಚಿವ ಅನಂತಕುಮಾರ, ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಸಚಿವ ಧರ್ಮೇಂದ್ರ ಪ್ರಧಾನ್‌ ಅವರು ಚಾಲನೆ ನೀಡಲಿದ್ದಾರೆ.

ಧಾರವಾಡ, ಬೆಳಗಾವಿ, ಗದಗ ಹಾಗೂ ಹಾವೇರಿ ಜಿಲ್ಲೆಗಳ ಫಲಾನು­ಭವಿಗಳು ಕಾರ್ಯಕ್ರಮದಲ್ಲಿ ಭಾಗವಹಿ­ಸ­ಲಿದ್ದಾರೆ. ಫಲಾನುಭವಿಗಳಿಗೆ ಕಾರ್ಯ­ಕ್ರಮಕ್ಕೆ ಆಗಮಿಸಲು ವಿವಿಧ ಪೆಟ್ರೋ­ಲಿಯಂ ಕಂಪೆನಿಗಳವರು ವಾಹನ ವ್ಯವಸ್ಥೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಮೈದಾನದಲ್ಲಿ ಬೃಹತ್‌ ವೇದಿಕೆ ನಿರ್ಮಿಸಲಾಗಿದ್ದು, 20 ಸಾವಿರ ಆಸನಗಳನ್ನು ಹಾಕಲಾಗಿದೆ. ಮಳೆ ಬಂದರೆ ಕಾರ್ಯಕ್ರಮಕ್ಕೆ ಅಡ್ಡಿಯಾಗ­ಬಾರದು ಎಂದು  ‘ವಾಟರ್‌ ಪ್ರೂಫ್‌’ ಪೆಂಡಾಲ್‌ ಹಾಕಲಾಗಿದೆ. ಮೂರು ದಿನ­ಗಳಿಂದ ವೇದಿಕೆ ನಿರ್ಮಾಣ ನಡೆದಿದ್ದು, ಶುಕ್ರವಾರ ಸಂಜೆ ಅಂತಿಮಗೊಂಡಿದೆ.

ADVERTISEMENT

ಕೇಂದ್ರ ಸಚಿವ ರಮೇಶ ಜಿಗಜಿಣಗಿ, ಸಂಸದ ಪ್ರಹ್ಲಾದ ಜೋಶಿ,, ವಿಧಾನಸಭೆ ವಿರೋಧ ಪಕ್ಷದ ನಾಯಕ ಜಗದೀಶ ಶೆಟ್ಟರ್‌, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಆಹಾರ ನಾಗರಿಕ ಸರಬರಾಜು ಸಚಿವ ಯು.ಟಿ. ಖಾದರ್‌, ಗ್ರಾಮೀಣಾಭಿವೃದ್ಧಿ ಸಚಿವ ಎಚ್‌.ಕೆ. ಪಾಟೀಲ, ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಲಕರ್ಣಿ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.

ವಾಹನಗಳ ನಿಲುಗಡೆಗೆ ವ್ಯವಸ್ಥೆ: ಕಾರ್ಯಕ್ರಮಕ್ಕೆ ಬೇರೆ ಕಡೆಯಿಂದ ಆಗಮಿಸುವ ವಾಹನಗಳ ನಿಲುಗಡೆಗೆ ವಿವಿಧೆಡೆ ವ್ಯವಸ್ಥೆ ಮಾಡಲಾಗಿದೆ. ಗದಗ ಕಡೆಯಿಂದ ಬರುವ ವಾಹನ­ಗಳಿಗೆ ಚಿಲ್ಲಿ ಮೈದಾನ, ನವಲಗುಂದ ಕಡೆಯಿಂದ ಬರುವ ವಾಹನಗಳಿಗೆ ರೈಲ್ವೆ ಮೈದಾನ, ಕಾರವಾರ ರಸ್ತೆಯಿಂದ ಬರುವ ವಾಹನಗಳಿಗೆ ಗಿರಣಿ ಚಾಳ, ಮೂರು ಸಾವಿರಮಠ ಮೈದಾನದಲ್ಲಿ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ. ಹಳೇ ಬಸ್‌ ನಿಲ್ದಾಣದಿಂದ ಹಿಡಿದು ನೆಹರೂ ಮೈದಾನದವರೆಗಿನ ರಸ್ತೆಯುದ್ದಕ್ಕೂ ಕಾರ್ಯಕ್ರಮದ ಬಗ್ಗೆ ರಾಜಕೀಯ ನಾಯಕರು ಬ್ಯಾನರ್‌ ಹಾಗೂ ಫ್ಲೆಕ್ಸ್‌ ಹಾಕಿದ್ದಾರೆ.

ವಿದ್ಯಾರ್ಥಿಗಳೊಂದಿಗೆ ಸಂವಾದ
ನಗರದ ನೆಹರೂ ಮೈದಾನದಲ್ಲಿ ನಡೆಯುವ ಪ್ರಧಾನಮಂತ್ರಿ ಉಜ್ವಲ್‌ ಯೋಜನೆ ಉದ್ಘಾಟನೆ ಕಾರ್ಯಕ್ರಮದ ನಂತರ ಕೇಂದ್ರದ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಸಚಿವ ಧರ್ಮೇಂದ್ರ ಪ್ರಧಾನ ಅವರು ಮಧ್ಯಾಹ್ನ 2.45ಕ್ಕೆ ಬಿವಿಬಿ ಎಂಜಿನಿಯರಿಂಗ್‌ ಕಾಲೇಜಿನ ಬಯೋಟೆಕ್‌ ಹಾಲ್‌ನಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ.

ಹಾಗೂ ನೈಸರ್ಗಿಕ ಅನಿಲ ಸಚಿವ ಧರ್ಮೇಂದ್ರ ಪ್ರಧಾನ ಅವರು ಮಧ್ಯಾಹ್ನ 2.45ಕ್ಕೆ ಬಿವಿಬಿ ಎಂಜಿನಿಯರಿಂಗ್‌ ಕಾಲೇಜಿನ ಬಯೋಟೆಕ್‌ ಹಾಲ್‌ನಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.