ADVERTISEMENT

ಉತ್ತರ ಪತ್ರಿಕೆ ಹಗರಣ ಖಂಡಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2012, 9:20 IST
Last Updated 18 ಡಿಸೆಂಬರ್ 2012, 9:20 IST

ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿಗೆ ಸಂಬಂಧಿಸಿದ ವಿವಿಧ ವಿಷಯಗಳ ಪರೀಕ್ಷೆಯಲ್ಲಿ ಉತ್ತರ ಪತ್ರಿಕೆಗಳನ್ನು ಅಕ್ರಮವಾಗಿ ಬರೆಸಿದವರಲ್ಲಿ ಇನ್ನೂ ಅನೇಕರ ಕೈವಾಡವಿದ್ದು, ಅವರನ್ನು ತಕ್ಷಣವೇ ಬಂಧಿಸಬೇಕು ಎಂದು ಒತ್ತಾಯಿಸಿ ಎಬಿವಿಪಿ ಕಾರ್ಯಕರ್ತರು ಸೋಮವಾರ ಕರ್ನಾಟಕ ವಿ.ವಿ. ಆವರಣದಲ್ಲಿ ಪ್ರತಿಭಟನೆ ನಡೆಸಿದರು.

ಸಮಾಜದಲ್ಲಿ ಪ್ರಾಮಾಣಿಕತೆ, ನೈತಿಕತೆ, ಚಾರಿತ್ರ್ಯ, ಮೌಲ್ಯಗಳನ್ನು ಬೆಳೆಸಿ ಉತ್ತಮವಾದ ನಾಗರಿಕರನ್ನು ತಯಾರಿಸಬೇಕಾದ ವಿಶ್ವವಿದ್ಯಾಲಯದಲ್ಲೇ ಈ ರೀತಿಯ ಅಕ್ರಮ ಚಟುವಟಿಕೆಗಳು ನಡೆಯುತ್ತಿರುವದು ವಿಶ್ವವಿದ್ಯಾಲಯದ ಘನತೆಗೆ ಧಕ್ಕೆ ತರುವಂತಿದೆ. ಈ ಪ್ರಕರಣದಲ್ಲಿ ಕೇವಲ ಕೆಳ ದರ್ಜೆಯ ನೌಕರರನ್ನು ಮಾತ್ರ ಬಂಧಿಸಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯವಸ್ಥಿತವಾದ ಒಂದು ಜಾಲವಿದೆ. ಅದನ್ನು ಕೂಡಲೇ ಪತ್ತೆ ಹಚ್ಚಬೇಕು. ಆ ಅಪರಾಧಿಗಳಿಗೆ ಕಾನೂನು ರೀತಿಯ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ ಕಾರ್ಯಕರ್ತರು, ಈ ಕುರಿತಂತೆ ಪ್ರದೀಪ ಮತ್ತು ಸಂದೀಪ ಅಂಗಡಿ ಎಂಬ ಇಬ್ಬರು ಗುತ್ತಿಗೆ ನೌಕರರನ್ನು ಬಂಧಿಸಿದ್ದರೂ ಈ ದುಷ್ಕೃತ್ಯದಲ್ಲಿ ಉಪನ್ಯಾಸಕರು ಹಾಗೂ ಉನ್ನತ ಅಧಿಕಾರಿಗಳೂ ಸೇರಿದಂತೆ ಅನೇಕರ ಕೈವಾಡವಿರುವದು ಮೇಲ್ನೋಟಕ್ಕೆ ಕಂಡು ಬಂದಿದೆ.

ಈ ಕುರಿತಂತೆ ವಿವಿಯ ಕುಲಪತಿಗಳು ಹಾಗೂ ಮೌಲ್ಯಮಾಪನ ಕುಲಸಚಿವರು ಈ ವಿಷಯಕ್ಕೆ ಸಂಬಂದಿಸಿದಂತೆ ಶೀಘ್ರ ಮತ್ತು ಪ್ರಾಮಾಣಿಕವಾದ ತನಿಖೆ ನಡೆಸಿ ಅಪರಾಧಿಗಳಿಗೆ ತಕ್ಕ ಶಿಕ್ಷೆ ನೀಡಬೇಕು ಇಲ್ಲದೇ ಹೋದರೆ ಎಬಿವಿಪಿ ವತಿಯಿಂದ ಉಗ್ರ ಹೋರಾಟ ಮಾಡಲಾಗುವುದು ಎಂದು ಕಾರ್ಯಕರ್ತರು ಎಚ್ಚರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT