ಹುಬ್ಬಳ್ಳಿ: ಕಳಸಾ–ಬಂಡೂರಿ ಯೋಜನೆಯಡಿ ರಾಜ್ಯದ ಪಾಲು ಬಳಕೆಗೆ ಮಧ್ಯಂತರ ಆದೇಶ ನೀಡುವಂತೆ ಇದೇ 12ರಂದು ನಡೆಯಲಿರುವ ಮಹದಾಯಿ ನ್ಯಾಯಾಧೀಕರಣದ ಕಲಾಪದಲ್ಲಿ ಮನವಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಧ್ಯಂತರ ಆದೇಶ ನೀಡುವಂತೆ ನ್ಯಾಯಾಲಯವನ್ನು ಕೋರಲು ರಾಜ್ಯದ ಪರ ಕಾನೂನು ತಜ್ಞರಿಗೆ ಸೂಚಿಸಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು. ಕಳಸಾ–ಬಂಡೂರಿ ವಿಚಾರದಲ್ಲಿ ರಾಜ್ಯದ ಪಾಲಿನ ನೀರು ಬಳಕೆಯ ವಿಚಾರದಲ್ಲಿ ಯಾವುದೇ ರಾಜಿಗೆ ಸರ್ಕಾರ ಸಿದ್ಧವಿಲ್ಲ ಎಂದು ಸ್ಪಷ್ಟಪಡಿಸಿದ ಮುಖ್ಯಮಂತ್ರಿ, ಕುಡಿಯುವ ನೀರಿನ ಜೊತೆಗೆ ಈ ಭಾಗದ ರೈತರ ಹಿತವೂ ಇದರಲ್ಲಿ ಅಡಗಿದೆ ಎಂದು ಪ್ರಶ್ನೆಯೊಂದಕ್ಕೆ ಅವರು ಉತ್ತರಿಸಿದರು.
ಕೇಂದ್ರ ಸರ್ಕಾರ ವಿಶೇಷ ಪ್ಯಾಕೇಜ್ ನೀಡಲು ಮುಂದಾಗಿರುವುದರಿಂದ ಬೆಳೆಗಾರರಿಗೆ ಟನ್ ಕಬ್ಬಿಗೆ ₨2650 ನೀಡಲು ಸಕ್ಕರೆ ಕಾರ್ಖಾನೆಗಳ ಮಾಲೀಕರು ಒಪ್ಪಬಹುದು ಎಂದು ಹೇಳಿದ ಸಿದ್ದರಾಮಯ್ಯ ಈ ವಾರ ಮತ್ತೊಮ್ಮೆ ಸಭೆ ಕರೆದು ಅವರ ಮನವೊಲಿಸಲಾಗುವುದು ಎಂದು ತಿಳಿಸಿದರು.
ರಾಜ್ಯದಲ್ಲಿ ರಸ್ತೆಗಳ ದುರಸ್ತಿಗೆ ಕೇಂದ್ರ ಸರ್ಕಾರ ನೈಸರ್ಗಿಕ ವಿಕೋಪ ಪರಿಹಾರ ನಿಧಿಯಡಿ ₨1,000 ಕೋಟಿ ನೀಡಿದೆ. ಇದಕ್ಕೆ ರಾಜ್ಯ ಸರ್ಕಾರ ₨1,500 ಕೋಟಿ ತೆಗೆದಿಟ್ಟಿದೆ. ಶೀಘ್ರದಲ್ಲಿಯೇ ಗುಣಮಟ್ಟದ ರಸ್ತೆಗಳ ನಿರ್ಮಾಣ ಕೈಗೆತ್ತಿಕೊಳ್ಳಲಾಗುವುದು ಎಂದು ಹೇಳಿದ ಮುಖ್ಯಮಂತ್ರಿ, ರಾಜ್ಯ ಮಾನವ ಹಕ್ಕು ಆಯೋಗಕ್ಕೆ ಅಧ್ಯಕ್ಷರನ್ನು ನೇಮಿಸಲು ಇದೇ 12ರಂದು ಬೆಂಗಳೂರಿನಲ್ಲಿ ಸಭೆ ಕರೆಯಲಾಗಿದೆ.
ಆಯೋಗಕ್ಕೆ ರಾಜ್ಯ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಅಥವಾ ಸುಪ್ರೀಂಕೋರ್ಟ್ ನ್ಯಾಯಮೂರ್ತಿಯನ್ನು ನೇಮಿಸಬೇಕಿರುವುದರಿಂದ ಆ ಪ್ರಕ್ರಿಯೆ ಸ್ವಲ್ಪ ತಡವಾಗಿದೆ ಎಂದರು. ಈರುಳ್ಳಿ ಬೆಲೆ ಕುಸಿಯದಂತೆ ನೋಡಿಕೊಳ್ಳಲಾಗುವುದು. ಬೆಂಬಲ ಬೆಲೆಯಲ್ಲಿ ಮೆಕ್ಕೆಜೋಳ ಖರೀದಿಗೆ ಸರ್ಕಾರವೇ ಮುಂದಾಗಿದೆ. ಮೊದಲು ರೈತರೊಬ್ಬರಿಂದ 25 ಕ್ವಿಂಟಲ್ ಮಾತ್ರ ಮೆಕ್ಕೆಜೋಳವನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲಾಗುತ್ತಿತ್ತು. ಈಗ ರೈತರು ಎಷ್ಟು ಪ್ರಮಾಣದಲ್ಲಿ ತಂದರೂ ಖರೀದಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ಜಿಲ್ಲೆಗೆ ಸಚಿವ ಸ್ಥಾನ: ಹೈಕಮಾಂಡ್ ನಿರ್ಧಾರ...
ಸಂತೋಷ್ ಲಾಡ್ ರಾಜೀನಾಮೆಯಿಂದ ತೆರವಾಗಿರುವ ಸಚಿವ ಸ್ಥಾನವನ್ನು ಬೇರೆಯವರಿಗೆ ನೀಡುವ ವಿಚಾರದಲ್ಲಿ ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದು ಹೇಳಿದ ಸಿದ್ದರಾಮಯ್ಯ, ಖಾಲಿ ಇರುವ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರ ಸ್ಥಾನದ ಜವಾಬ್ದಾರಿಯನ್ನು ತಾತ್ಕಾಲಿಕವಾಗಿ ಬೇರೇಯವರಿಗೆ ವಹಿಸಲಾಗುವುದು ಆ ನಿಟ್ಟಿನಲ್ಲಿ ಶೀಘ್ರ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದರು. ನಿಗಮ ಮಂಡಳಿಗಳಿಗೆ ನೇಮಕ ಪ್ರಕ್ರಿಯೆ ಶೀಘ್ರ ಆರಂಭವಾಗಲಿದೆ. ಕೆಪಿಸಿಸಿ ಅಧ್ಯಕ್ಷರೊಂದಿಗೆ ಚರ್ಚಿಸಿ ಪಟ್ಟಿ ಅಂತಿಮಗೊಳಿಸಲಾಗುವುದು ಎಂದರು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.