ADVERTISEMENT

ಚುನಾವಣಾ ಆಯುಕ್ತ, ಮುಖ್ಯಮಂತ್ರಿಗೆ ಪತ್ರ

​ಪ್ರಜಾವಾಣಿ ವಾರ್ತೆ
Published 30 ಡಿಸೆಂಬರ್ 2017, 8:41 IST
Last Updated 30 ಡಿಸೆಂಬರ್ 2017, 8:41 IST
ಜಿಲ್ಲಾಧಿಕಾರಿಗೆ ಶುಕ್ರವಾರ ಮನವಿ ಸಲ್ಲಿಸಿದ ವೀರೇಶ ಸೊಬರದಮಠ ಹಾಗೂ ಶಂಕರಪ್ಪ ಅಂಬಲಿ ಮನವಿ ಪತ್ರ ಪ್ರದರ್ಶಿಸಿದರು
ಜಿಲ್ಲಾಧಿಕಾರಿಗೆ ಶುಕ್ರವಾರ ಮನವಿ ಸಲ್ಲಿಸಿದ ವೀರೇಶ ಸೊಬರದಮಠ ಹಾಗೂ ಶಂಕರಪ್ಪ ಅಂಬಲಿ ಮನವಿ ಪತ್ರ ಪ್ರದರ್ಶಿಸಿದರು   

ಧಾರವಾಡ: ರೈತರಿಗೆ ನೀಡಿದ ಆಶ್ವಾಸನೆ ಹುಸಿಗೊಳಿಸಿದ ರಾಜಕೀಯ ಪಕ್ಷಗಳ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ರೈತ ಸೇನಾ ಕರ್ನಾಟಕ ಸಂಘಟನೆಯ ಮುಖಂಡರು ಕರ್ನಾಟಕ ಮುಖ್ಯ ಚುನಾವಣಾ ಆಯುಕ್ತರಿಗೆ ಪತ್ರ ಬರೆದು ಕೋರಿದ್ದಾರೆ. ಸಂಘಟನೆಯ ಶಂಕರಪ್ಪ ಅಂಬಲಿ, ವೀರೇಶ ಸೊಬರದಮಠ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ, ವಿರೋಧಪಕ್ಷದ ನಾಯಕ ಜಗದೀಶ ಶೆಟ್ಟರ್‌ ಅವರಿಗೂ ಪತ್ರ ಬರೆದಿದ್ದಾರೆ.

‘ಮಹದಾಯಿ ಕಳಸಾ–ಬಂಡೂರಿ ಹೋರಾಟಕ್ಕೆ ಸಂಬಂಧಿಸಿದಂತೆ ಚರ್ಚಿಸಲು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿಸಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡಿಕೊಂಡಿದ್ದಾರೆ.

‘ಮಹದಾಯಿ ವಿಷಯದಲ್ಲಿ ಒಬ್ಬರ ವಿರುದ್ಧ ಮತ್ತೊಬ್ಬರು ಪರಸ್ಪರ ಹೇಳಿಕೆ ನೀಡುತ್ತಿರುವುದು ಬೇಸರದ ಸಂಗತಿ. ಇದರಿಂದಾಗಿ ರೈತರಿಗೆ ಮತ್ತು ಸಾರ್ವಜನಿಕರಿಗೆ ಮೋಸವಾಗುತ್ತಿದೆ. ರೈತರಿಗೆ ನ್ಯಾಯ ದೊರಕಿಸಲು ಕಾಂಗ್ರೆಸ್‌ ಮತ್ತು ಬಿಜೆಪಿಗಳೆರಡೂ ಒಗ್ಗಟ್ಟಿನ ಹೋರಾಟ ನಡೆಸಬೇಕು’ ಎಂದು ಪತ್ರದಲ್ಲಿ ಕೋರಿದ್ದಾರೆ.

ADVERTISEMENT

‘ಡಿ. 31ರಂದು ಕರ್ನಾಟಕಕ್ಕೆ ಬರುತ್ತಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರನ್ನು ಭೇಟಿ ಮಾಡಿಸಬೇಕು. ಈ ವಿಷಯದಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಸಬೇಕು’ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಜಗದೀಶ ಶೆಟ್ಟರ್ ಅವರಿಗೆ ಬರೆದಿರುವ ಪತ್ರದಲ್ಲಿ ಆಗ್ರಹಿಸಿದ್ದಾರೆ.

ಚುನಾವಣಾ ಆಯುಕ್ತರಿಗೆ ಬರೆದಿರುವ ಪತ್ರದಲ್ಲಿ, ‘ಕರ್ನಾಟಕದ ಮೂರೂ ಪ್ರಮುಖ ರಾಜಕೀಯ ಪಕ್ಷಗಳ ನಾಯಕರು ಉತ್ತರ ಕರ್ನಾಟಕ ಐದು ಜಿಲ್ಲೆಗಳ ಜನರಿಗೆ ಮಹದಾಯಿ ನೀರು ಹರಿಸುವುದಾಗಿ ಸುಳ್ಳು ಭರವಸೆ ನೀಡಿದ್ದರು. ಆದರೆ, ಫಲಿತಾಂಶ ಮಾತ್ರ ಶೂನ್ಯ. ಈ ಭಾಗದ ಮತದಾರರಿಗೆ ದ್ರೋಹ ಮಾಡಿದ್ದಾರೆ. ಆದ್ದರಿಂದ ಮೂರೂ ಪಕ್ಷಗಳ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು’ ಎಂದು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.