ADVERTISEMENT

ಚುನಾವಣಾ ಕರ್ತವ್ಯಕ್ಕೆ ಗೈರಾಗುವ ಅಧಿಕಾರಿಗಳ ವಿರುದ್ಧ ಕ್ರಮ:ಡಿ.ಸಿ

​ಪ್ರಜಾವಾಣಿ ವಾರ್ತೆ
Published 2 ಏಪ್ರಿಲ್ 2018, 9:39 IST
Last Updated 2 ಏಪ್ರಿಲ್ 2018, 9:39 IST

ಧಾರವಾಡ: ‘ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿಳಂಬ ಮಾಡದೇ ಕರ್ತವ್ಯಕ್ಕೆ ಹಾಜರಾಗಬೇಕು. ನಿರ್ಲಕ್ಷ್ಯ ತೋರಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು’ ಎಂದು ಜಿಲ್ಲಾ ಚುನಾವಣಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಎಚ್ಚರಿಕೆ ನೀಡಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಭಾನುವಾರ ನಡೆದ ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿಗಳು, ಸಹಾಯಕ ಚುನಾವಣಾಧಿಕಾರಿಗಳು, ನೋಡಲ್ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

’ಈಗಾಗಲೇ ಜಿಲ್ಲೆಯಲ್ಲಿ 22 ಚೆಕ್ ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದೆ. ಅವುಗಳಿಗೆ ಅಗತ್ಯವಿರುವ ಮೂಲಸೌಕರ್ಯಗಳನ್ನು ಕೂಡ ಒದಗಿಸಲಾಗುತ್ತಿದೆ. ವಿಡಿಯೊ ಕಣ್ಗಾವಲು ಸಮಿತಿ ಹಾಗೂ ಸಂಚಾರಿ ವಿಚಕ್ಷಣಾ ತಂಡಗಳು ಈಗಾಗಲೇ ಜಿಲ್ಲೆಯಾದ್ಯಂತ ಕಾರ್ಯನಿರತವಾಗಿವೆ. ಈ ತಂಡಗಳು ಮಾದರಿ ನೀತಿ ಸಂಹಿತೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುತ್ತಿವೆ’ ಎಂದರು.‘ಏ.5 ರಿಂದ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಇವಿಎಂ ಮತ್ತು ವಿವಿ ಪ್ಯಾಟ್ ಬಳಕೆಯ ಕುರಿತು ತರಬೇತಿ ಆರಂಭವಾಗಲಿದೆ. ಎಲ್ಲ ಸರ್ಕಾರಿ ಅನುದಾನಿತ ಹಾಗೂ ಅನುದಾನರಹಿತ ಸಂಸ್ಥೆಗಳ ನೌಕರರನ್ನೂ ಸಹ ಚುನಾವಣಾ ಕಾರ್ಯಕ್ಕೆ ನಿಯೋಜಿಸಲು ಅವಕಾಶವಿದೆ’ ಎಂದರು.ಮತದಾರರ ನೋಂದಣಿ ಮತ್ತಿತರ ಪ್ರಕ್ರಿಯೆಗೆ ಮತದಾರರ ಸೌಲಭ್ಯ ಕೇಂದ್ರಗಳನ್ನು ಸ್ಥಾಪಿಸಲು ಅವರು ಸಲಹೆ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ರಮೇಶ ಕಳಸದ, ಪಾಲಿಕೆ ಆಯುಕ್ತ ಶಕೀಲ್ ಅಹ್ಮದ್, ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿ ಮಹೇಶಕುಮಾರ ಸೇರಿದಂತೆ ಜಿಲ್ಲೆಯ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.