ಧಾರವಾಡ: ಕಳೆದ 20 ತಿಂಗಳ ಅವಧಿಯಲ್ಲಿ ನನ್ನ ಅಧ್ಯಕ್ಷತೆಯಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳು ತೃಪ್ತಿ ತಂದಿವೆ ಎಂದು ಜಿಲ್ಲಾ ಪಂಚಾಯಿತಿಯ ನಿರ್ಗಮಿತ ಅಧ್ಯಕ್ಷ ಅಡಿವೆಪ್ಪ ಮನಮಿ ಹೇಳಿದರು.
ಜಿ.ಪಂ. ಸಭಾಂಗಣದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿ.ಪಂ. ವ್ಯಾಪ್ತಿಯ ಮತ ಕ್ಷೇತ್ರಗಳಲ್ಲಿನ ಅತೀ ಕೆಟ್ಟ ರಸ್ತೆಗಳ ಅಭಿವೃದ್ಧಿಗಾಗಿ ಪ್ರತಿ ಕ್ಷೇತ್ರಕ್ಕೆ 50 ಲಕ್ಷ ರೂ.ಗಳಿಂದ 1 ಕೋಟಿ ರೂ.ಗಳವರೆಗೆ ಅನುದಾನ ನೀಡುವಂತೆ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅಧಿಕಾರವಧಿಯಲ್ಲಿ ಕುಡಿಯುವ ನೀರು, ರಸ್ತೆ ಸೇರಿದಂತೆ ಇತರೆ ಗ್ರಾಮೀಣಾಭಿವೃದ್ಧಿ ಯೋಜನೆಗಳನ್ನು ಕಾರ್ಯಗತಗೊಳಿಸಲಾಗಿದೆ.
ಗ್ರಾಮೀಣ ಪ್ರದೇಶದಲ್ಲಿ ರಸ್ತೆ ಸುಧಾರಣೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಇದರ ಜೊತೆಯಲ್ಲಿ ಹೊಲ ಮನೆಗಳ ರಸ್ತೆಗಳ ಸುಧಾರಣೆಗೆ ಕ್ರಿಯಾ ಯೋಜನೆಯೊಂದನ್ನು ಸಿದ್ಧಪಡಿಸಲಾಗಿದೆ. ಕಳೆದ ವರ್ಷ ಅಧ್ಯಕ್ಷರ ಅಭಿವೃದ್ಧಿ ಅನುದಾನದಡಿಯಲ್ಲಿ ಒಂದು ಕೋಟಿ ರೂಪಾಯಿ ಅನುದಾನ ಮಂಜೂರಾಗಿದೆ. ಅದರಲ್ಲಿ ಸೌರಶಕ್ತಿ, ರಸ್ತೆ ಕಾಮಗಾರಿ, ಶಾಲಾ ಶೌಚಾಲಯ, ಬಾಲಕಿಯರ ಅರೋಗ್ಯ ರಕ್ಷಣೆಗಾಗಿ ಸಖಿ ಕಾರ್ಯಕ್ರಮ ಹಾಗೂ ಕ್ರೀಡಾ ಸಲಕರಣೆ ಮುಂತಾದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗಿದೆ. ಈ ಸಾಲಿನಲ್ಲಿ ರೂ 2 ಕೋಟಿ ಅನುದಾನ ಮಂಜೂರಾಗಿದ್ದು, ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಕ್ರೀಯಾಯೋಜನೆ ಸಿದ್ಧಪಡಿಸಲಾಗಿದೆ.
ಅದರಲ್ಲಿ ರೂ 50 ಲಕ್ಷ ಅನುದಾನದಡಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೊಜನೆಯಡಿ ಕಳೆದ ಸಾಲಿನಲ್ಲಿ ರೂ 46.59 ಕೋಟಿ ಅನುದಾನದಲ್ಲಿ 5610 ವಿವಿಧ ಕಾಮಗಾರಿಗಳನ್ನು ಪೂರ್ಣಗೊಳಿಸಿ 21.29 ಲಕ್ಷ ಮಾನವ ದಿನಗಳ ಉದ್ಯೋಗವನ್ನು ಸೃಷ್ಟಿಸಲಾಗಿದೆ ಎಂದು ಹೇಳಿದರು.
ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಎ.ಮೇಘಣ್ಣವರ ಮಾತನಾಡಿ, `ಜಿಲ್ಲೆಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡುವ ಕಾರ್ಮಿಕರಿಗೆ ನೀಡುವ ಕೂಲಿಯನ್ನು ಆನ್ಲೈನ್ (ಇಎಫ್ಎಂಎಸ್) ಮೂಲಕವೇ ಪಾವತಿ ಮಾಡಲಾಗುತ್ತಿದೆ. ಒಟ್ಟು 6 ಕೋಟಿ ಹಣವನ್ನು ಕೂಲಿ ರೂಪದಲ್ಲಿ ಪಾವತಿ ಮಾಡಲಾಗಿದೆ. ಕಳೆದ ಸೆ 21ರಿಂದಲೇ ಈ ವ್ಯವಸ್ಥೆ ಪೂರ್ಣ ಪ್ರಮಾಣದಲ್ಲಿ ಜಾರಿಗೆ ಬಂದಿದೆ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.