ADVERTISEMENT

ಪರೀಕ್ಷೆ ಮುಂದೂಡಲು ಒತ್ತಾಯ

​ಪ್ರಜಾವಾಣಿ ವಾರ್ತೆ
Published 8 ಅಕ್ಟೋಬರ್ 2017, 8:26 IST
Last Updated 8 ಅಕ್ಟೋಬರ್ 2017, 8:26 IST

ಹುಬ್ಬಳ್ಳಿ: ಕರ್ನಾಟಕ ವಿಶ್ವವಿದ್ಯಾಲಯ ವ್ಯಾಪ್ತಿಗೆ ಒಳಪಡುವ ಪದವಿ ಕಾಲೇಜುಗಳ ಪರೀಕ್ಷೆಗಳನ್ನು ಮುಂದೂಡಬೇಕು ಎಂದು ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ನೇತೃತ್ವದಲ್ಲಿ ಕಾಲೇಜು ವಿದ್ಯಾರ್ಥಿಗಳು ನಗರದಲ್ಲಿ ಶನಿವಾರ ಪ್ರತಿಭಟನೆ ಮಾಡಿದರು.

‘ಯಾವುದೇ ಪೂರ್ವ ತಯಾರಿ ಇಲ್ಲದೇ ಪದವಿ ಕಾಲೇಜುಗಳ ಪರೀಕ್ಷಾ ದಿನಾಂಕ ಘೋಷಣೆ ಮಾಡಿರುವುದು ಖಂಡನೀಯ. ಪಠ್ಯಕ್ರಮಗಳನ್ನು ಪೂರ್ಣಗೊಳಿಸದೇ ಪರೀಕ್ಷಾ ದಿನಾಂಕ ನಿಗದಿ ಮಾಡಿರುವುದರಿಂದ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳಲ್ಲಿ ಗೊಂದಲ ಉಂಟಾಗಿದೆ’ ಎಂದು ಅಖಿಲ ಭಾರತ ವಿದ್ಯಾರ್ಥಿ ಪರಿಷತ್ತಿನ ಪ್ರಾಂತ ಸಂಘಟನಾ ಕಾರ್ಯದರ್ಶಿ ಮಂಜುನಾಥ ಮೀಸೆ ಆರೋಪಿಸಿದರು.

‘ಪರಿಷ್ಕೃತ ವೇಳಾಪಟ್ಟಿ ಬಿಡುಗಡೆ ಮಾಡಬೇಕು. ಬಾಕಿ ಉಳಿದಿರುವ ಪಠ್ಯವನ್ನು ಪೂರ್ಣಗೊಳಿಸಲು ಅಧ್ಯಾಪಕರಿಗೆ ಸೂಚಿಸಬೇಕು. ಇಲ್ಲವಾದಲ್ಲಿ ಹೋರಾಟ ತೀವ್ರಗೊಳಿಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.

ADVERTISEMENT

ಎಬಿವಿಪಿ ವಿಭಾಗ ಸಂಚಾಲಕ ಸಿದ್ದು ಸಾಲಿಮಠ, ಜಿಲ್ಲಾ ಸಂಚಾಲಕ ವಿನಯಗೌಡ, ನಗರ ಸಂಘಟನಾ ಕಾರ್ಯದರ್ಶಿ ಪೂಜಿತಾ, ಕಾರ್ಯಕರ್ತರಾದ ಮಂಜುಳಾ, ಸುಕನ್ಯಾ, ಕಿಶೋರ, ಸಚಿನ, ಶ್ರೀನಿವಾಸ, ಸನ್ಮತಿ ಪ್ರತಿಭಟನೆಯ ನೇತೃತ್ವ ವಹಿಸಿದ್ದರು. ವಿವಿಧ ಕಾಲೇಜಿನ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಸಂಚಾರ ದಟ್ಟಣೆ: ಪ್ರತಿಭಟನೆಯಿಂದಾಗಿ ಚನ್ನಮ್ಮ ವೃತ್ತದಲ್ಲಿ ಅರ್ಧ ತಾಸಿಗೂ ಹೆಚ್ಚು ಕಾಲ ಸಂಚಾರ ದಟ್ಟಣೆ ಉಂಟಾಗಿತ್ತು. ಇದರಿಂದ ವಾಹನ ಸವಾರರು ಮುಂದೆ ಹೋಗಲು ಪರದಾಡಿದರು. ಸಂಚಾರ ಸುಗಮಗೊಳಿಸಲು ಪೊಲೀಸರು ಹೆಣಗಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.