ADVERTISEMENT

ಪಾಲಿಕೆ ಕಚೇರಿ ಮುಂದೆ ಪ್ರತಿಭಟನೆ ಇಂದು

ಜಿಮ್ಖಾನ ಮೈದಾನ ವಿವಾದ

​ಪ್ರಜಾವಾಣಿ ವಾರ್ತೆ
Published 11 ಸೆಪ್ಟೆಂಬರ್ 2013, 7:21 IST
Last Updated 11 ಸೆಪ್ಟೆಂಬರ್ 2013, 7:21 IST

ಹುಬ್ಬಳ್ಳಿ: ಜಿಮ್ಖಾನ ಮೈದಾನದಲ್ಲಿ ಸ್ಪೋರ್ಟ್ಸ್ ಮತ್ತು ರಿಕ್ರಿಯೇಶನ್‌ ಕ್ಲಬ್‌ನ ಕಾಮಗಾರಿಯನ್ನು ನಿಲ್ಲಿಸುವಂತೆ ಒತ್ತಾಯಿಸಿ  ಹುಬ್ಬಳ್ಳಿ ಸ್ಪೋರ್ಟ್ಸ್‌ ಗ್ರೌಂಡ್‌ ಬಚಾವೊ ಸಮಿತಿ ಪದಾಧಿಕಾರಿಗಳು ಇದೇ 11ರಂದು ಬೆಳಿಗ್ಗೆ 10.30 ಗಂಟೆಗೆ ಇಲ್ಲಿ ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆ ಕಚೇರಿ ಮುಂದೆ ಪ್ರತಿಭಟನೆ ನಡೆಸಲಿದ್ದಾರೆ.

ಸದರಿ ಕಾಮಗಾರಿಯನ್ನು ನಿಲ್ಲಿಸಲು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಮಂಗಳವಾರ ಸಮಿತಿ ಪದಾಧಿಕಾರಿ­ಗಳನ್ನು ಒಳಗೊಂಡ ನಿಯೋಗ ಪಾಲಿಕೆ ಆಯುಕ್ತ ರಮಣದೀಪ್‌ ಚೌಧರಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಸಂಜೆ 5 ಗಂಟೆ ಒಳಗಾಗಿ ಕ್ರಮ ಜರುಗಿಸುವಂತೆಯೂ ಮನವಿ ಮಾಡಲಾಗಿತ್ತು. ಆದರೆ, ಈ ವಿಷಯ ಕುರಿತಂತೆ ಸಮಗ್ರ ಮಾಹಿತಿ ಪಡೆದು, ಪರಿಶೀಲಿಸಿದ ನಂತರ ಕ್ರಮ ಕೈಗೊಳ್ಳುವುದಾಗಿ ಆಯುಕ್ತ ಚೌಧರಿ ಸ್ಪಷ್ಟಪಡಿಸಿದರು. ಹೀಗಾಗಿ ಆಯುಕ್ತರ ಈ ಧೋರಣೆಯನ್ನು ಖಂಡಿಸಿ ಬುಧವಾರ (ಸೆ. 11) ಪಾಲಿಕೆ ಕಚೇರಿ ಮುಂದೆ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾಗಿ ಸಮಿತಿ ಅಧ್ಯಕ್ಷ ಸಿ.ಬಿ.ಎಲ್‌.ಹೆಗಡೆ ತಿಳಿಸಿದ್ದಾರೆ.

ಈ ಸಂಬಂಧ, ಜಿಲ್ಲಾಧಿಕಾರಿ ಸಮೀರ್‌ ಶುಕ್ಲಾ, ಪೊಲೀಸ್‌ ಆಯುಕ್ತ ಬಿ.ಎ.ಪದ್ಮನಯನ, ಹುಬ್ಬಳ್ಳಿ–ಧಾರವಾಡ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ತಿಪ್ಪೇಶಿ ಅವರಿಗೂ ಪ್ರತ್ಯೇಕವಾಗಿ ಮನವಿ ಪತ್ರ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.
ವೆಂಕಟೇಶ ಸವದತ್ತಿ, ವಿನಾಯಕ ಶಿರೋಳಿಕರ್‌ ಹಾಗೂ ಇತರರು ನಿಯೋಗದಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.