ADVERTISEMENT

ಮುಗಿಲು ಮುಟ್ಟಿದ ಸಂಭ್ರಮ

ಕಲ್ಲು ತೂರಾಡಿಕೊಂಡ ಕೈ, ಕಮಲ ಕಾರ್ಯಕರ್ತರು

​ಪ್ರಜಾವಾಣಿ ವಾರ್ತೆ
Published 16 ಮೇ 2018, 6:36 IST
Last Updated 16 ಮೇ 2018, 6:36 IST

ಧಾರವಾಡ: ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸುತ್ತಿದ್ದಂತೆ ಆ ಪಕ್ಷದ ಕಾರ್ಯಕರ್ತರು ನಗರದ ಕೃಷಿ ವಿಶ್ವವಿದ್ಯಾಲಯದ ಮುಂಭಾಗದಲ್ಲಿ ಪಟಾಕಿ ಸಿಡಿಸಿ, ಜಯಘೋಷಗಳೊಂದಿಗೆ ವಿಜಯೋತ್ಸವ ಆಚರಿಸಿದರು.

ಫಲಿತಾಂಶ ಹೊರ ಬೀಳುತ್ತಿದ್ದಂತೆಯೇ ಕಾರ್ಯಕರ್ತರು ಮತ್ತು ಮುಖಂಡರು ಪರಸ್ಪರ ಸಿಹಿ ತಿನ್ನಿಸಿ ಸಂಭ್ರಮ ಪಟ್ಟರು. ಪ್ರತಿ ಸುತ್ತಿನ ಮತ ಎಣಿಕೆಯಾಗಿ, ಅಭ್ಯರ್ಥಿಗಳು ಪಡೆದ ಮತಗಳನ್ನು ಘೋಷಿಸುತ್ತಲೇ ಅಭ್ಯರ್ಥಿಗಳ ಸಹಚರರು, ಹಿಂಬಾಲಕರು ಅಭ್ಯರ್ಥಿಪರ ಜಯಘೋಷ ಕೂಗಿದರು. ‘ಮೋದಿ... ಮೋದಿ...’ ಎಂಬ ಘೋಷಣೆ
ಕೂಗುತ್ತಾ, ಕೇಸರಿ ಧ್ವಜ ಹಾರಿಸಿ ಸಂಭ್ರಮಪಟ್ಟರು.

ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದರು. ಇದರಿಂದ ಕೆರಳಿದ ಬಿಜೆಪಿ ಕಾರ್ಯಕರ್ತರೂ, ಕಾಂಗ್ರೆಸ್‌ ಕಾರ್ಯಕರ್ತರ ಮೇಲೆ ಕಲ್ಲು ತೂರಾಟ ನಡೆಸಿದರು. ಪೊಲೀಸರು ಕೂಡಲೇ ಪರಿಸ್ಥಿತಿ ತಿಳಿಗೊಳಿಸಿದರು.

ADVERTISEMENT

ಒಂದೆಡೆ ಬಿಜೆಪಿ ಕಾರ್ಯಕರ್ತರು ಸಂಭ್ರಮಿಸುತ್ತಿದ್ದರೆ, ಇನ್ನೊಂದೆಡೆ ಕಾಂಗ್ರೆಸ್‌ ಕಾರ್ಯಕರ್ತರೂ ಶಾಸಕ ಅಬ್ಬಯ್ಯ ಪ್ರಸಾದ ಹಾಗೂ ಸಿ.ಎಸ್‌. ಶಿವಳ್ಳಿ ಪ್ರತಿ ಸುತ್ತಿನಲ್ಲಿ ಮುನ್ನಡೆ ಸಾಧಿಸುತ್ತಿದ್ದುದ್ದನ್ನು ಕಂಡು, ಜಯಘೋಷ ಕೂಗುತ್ತಿದ್ದರು.

ಸಂಸದ ಪ್ರಹ್ಲಾದ ಜೋಶಿ ಮಾತನಾಡಿ, ‘ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಸಿದ್ದರಾಮಯ್ಯ ಅವರ ದುರಹಂಕಾರದ ನಡೆಗೆ ರಾಜ್ಯದ ಜನ ತಕ್ಕ ಉತ್ತರ ಕೊಟ್ಟಿದ್ದಾರೆ’  ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.