ಹುಬ್ಬಳ್ಳಿ: ‘ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಮತ್ತು ಪ್ರಾಥಮಿಕ ಶಿಕ್ಷಣ ಸಚಿವ ತನ್ವೀರ್ ಸೇಠ್ ಅವರಿಗೆ ನೈತಿಕ ಶಿಕ್ಷಣ ಕಲಿಸುವ ಅಗತ್ಯ ಇದೆ’ ಎಂದು ಸಂಸದ ಪ್ರಹ್ಲಾದ ಜೋಶಿ ಶನಿವಾರ ಇಲ್ಲಿ ತಿಳಿಸಿದರು.ಬಿ.ಆರ್. ಅಂಬೇಡ್ಕರ್ ಜಯಂತಿ ಮತ್ತು ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಜನ್ಮ ಶತಾಬ್ದಿ ಅಂಗವಾಗಿ ಏರ್ಪಡಿಸಿದ್ದ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
‘ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಧಿಕಾರ ಬೇಕಿದ್ದರೆ ಸಾಯಲಿ ಎಂಬುದಾಗಿ ರಾಯರಡ್ಡಿ ಹೇಳಿಕೆ ನೀಡಿರುವುದು ಸರಿಯಲ್ಲ. ಸಾರ್ವಜನಿಕ ಸಮಾರಂಭದಲ್ಲಿ ಅಶ್ಲೀಲ ವಿಡಿಯೊ ನೋಡಿದ ತನ್ವೀರ್ ಸೇಠ್ ಮುಜುಗರಕ್ಕೆ ಒಳಗಾಗಿದ್ದನ್ನು ಜನ ಮರೆತಿಲ್ಲ. ಸಾರ್ವಜನಿಕ ಸಮಾರಂಭಗಳಲ್ಲಿ ಹೇಗೆ ನಡೆದುಕೊಳ್ಳಬೇಕು ಎಂಬುದು ಸಚಿವರುಗಳಿಗೆ ಗೊತ್ತಿಲ್ಲ’ ಎಂದು ಅವರು ಟೀಕಿಸಿದರು.
‘ಠೇವಣಿ ಇಲ್ಲದೆ ಬಡವರಿಗೆ ಉಚಿತವಾಗಿ ಸಿಲಿಂಡರ್ ವಿತರಿಸುವ ‘ಉಜ್ವಲ’ ಯೋಜನೆಗೆ ಕೇಂದ್ರ ಪೆಟ್ರೋಲಿಯಂ ಖಾತೆ ಸಚಿವ ಧರ್ಮೇಂದ್ರ ಪ್ರಧಾನ್ ಮೇ ಮೊದಲ ವಾರದಲ್ಲಿ ಹುಬ್ಬಳ್ಳಿಯಲ್ಲಿ ಚಾಲನೆ ನೀಡಲಿದ್ದಾರೆ’ ಎಂದರು.‘ಬಡವರಿಗೆ ಉಚಿತವಾಗಿ ಸಿಲಿಂಡರ್ ವಿತರಿಸುವ ಕೆಲಸಕ್ಕೆ ಕೇಂದ್ರ ಸರ್ಕಾರ ಮುಂದಾಗಿದ್ದರೆ, ಪಡಿತರ ಚೀಟಿಗಳನ್ನು ಬಡವರಿಂದ ಕಸಿದುಕೊಳ್ಳುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ’ ಎಂದೂ ಜೋಶಿ ದೂರಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.