ADVERTISEMENT

ಶಾಲಾ ಕೊಠಡಿ ನಿರ್ಮಾಣಕ್ಕೆ ಶಂಕುಸ್ಥಾಪನೆ

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2012, 6:10 IST
Last Updated 21 ಫೆಬ್ರುವರಿ 2012, 6:10 IST

ಧಾರವಾಡ: ಸರ್ವಶಿಕ್ಷಣ ಅಭಿಯಾನ ಕಾರ್ಯಕ್ರಮದಡಿ ಸುಮಾರು 10 ಲಕ್ಷ ರೂ. ವೆಚ್ಚದಲ್ಲಿ ತಾಲ್ಲೂಕಿನ ಕುರುಬಗಟ್ಟಿ ಗ್ರಾಮದಲ್ಲಿ ನಿರ್ಮಿಸಲುದ್ದೇಶಿಸಿರುವ ಎರಡು ಶಾಲಾ ಕೊಠಡಿಗಳ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಸೋಮವಾರ ಶಂಕುಸ್ಥಾಪನೆ ನೆರವೇರಿಸಿದರು.

ಇದೇ ಸಂದರ್ಭದಲ್ಲಿ ಕರ್ನಾಟಕ ಕಲಾ ಮಹಾವಿದ್ಯಾಲಯ ಗ್ರಾಮದಲ್ಲಿ ಆಯೋಜಿಸಿದ್ದ ಹತ್ತು ದಿನಗಳ ರಾಷ್ಟ್ರೀಯ ಸೇವಾ ಯೋಜನೆ ಶಿಬಿರದಲ್ಲಿ ವಿದ್ಯಾರ್ಥಿಗಳು ಶ್ರಮದಾನದ ಮೂಲಕ ನಿರ್ಮಿಸಿದ ಶೌಚಾಲಯಗಳನ್ನು ಹಾಗೂ ಮಾರ್ಕೊಪೋಲೊ ಕಂಪೆನಿಯಿಂದ ನಿರ್ಮಿಸಲಾದ ಶೌಚಾಲಯಗಳನ್ನು ಸಚಿವರು ಫಲಾನುಭವಿಗಳಿಗೆ ಹಸ್ತಾಂತರಿಸಿದರು.

`ವಿದ್ಯಾರ್ಥಿಗಳು ಶಿಬಿರದ ಅವಧಿಯಲ್ಲಿ ಸಾಮಾಜಿಕ ಶಿಕ್ಷಣ ಕೊಡುವ ಕೆಲಸ ಮಾಡುವುದರ ಜೊತೆಯಲ್ಲಿ ಗ್ರಾಮಗಳಲ್ಲಿ ಸ್ವಚ್ಛತೆ ಬಗ್ಗೆ ಅರಿವು ಮೂಡಿಸಬೇಕು. ಇದರಿಂದ ಹಳ್ಳಿಗಳಲ್ಲಿ ಬದಲಾವಣೆ ತರಲು ಸಾಧ್ಯ~ ಎಂದು ಸಚಿವರು ಹೇಳಿದರು.

ಶಾಸಕಿ ಸೀಮಾ ಮಸೂತಿ ಮಾತನಾಡಿ, ತಮ್ಮ ಕ್ಷೇತ್ರದ ವ್ಯಾಪ್ತಿಯಲ್ಲಿಯ 56 ಹಳ್ಳಿಗಳಲ್ಲಿ ಶೌಚಾಲಯಗಳನ್ನು ನಿರ್ಮಿಸುವ ಉದ್ದೇಶ ಹೊಂದಲಾಗಿದೆ. ಮಾದರಿ ತಾಲ್ಲೂಕನ್ನಾಗಿ ಮಾಡಲು ಪ್ರಯತ್ನಿಸಲಾಗುವುದು. ಯಾದವಾಡ ಗ್ರಾಮ ಪಂಚಾಯತಿಗೆ ರಾಷ್ಟ್ರೀಯ ಪುರಸ್ಕಾರ ದೊರೆತಿದ್ದು, ಇನ್ನುಳಿದ ಗ್ರಾಪಂ ಗಳು ಇದೇ ರೀತಿ ಅಭಿವೃದ್ಧಿ ಕೆಲಸಗಳನ್ನು ಮಾಡಬೇಕು ಎಂದರು.


ಜಿ.ಪಂ. ಸದಸ್ಯೆ ಪ್ರೇಮಾ ಕೊಮಾರದೇಸಾಯಿ, ಜಿ.ಪಂ. ಉಪ ಕಾರ್ಯದರ್ಶಿ ಎಸ್.ಬಿ.ಮುಳ್ಳೊಳ್ಳಿ, ತಾ.ಪಂ. ಇಒ ರುದ್ರಸ್ವಾಮಿ, ಎನ್.ಎಂ.ಭೀಮಪ್ಪ, ಕರ್ನಾಟಕ ಕಲಾ ಕಾಲೇಜಿನ ಪ್ರಾಚಾರ್ಯ ಎಸ್.ಎಸ್.ಕಟ್ಟೀಮನಿ, ಕರ್ನಾಟಕ ವಿಶ್ವವಿದ್ಯಾಲಯದ ಎನ್‌ಎಸ್‌ಎಸ್ ಸಂಯೋಜನಾಧಿಕಾರಿ ಡಾ. ಹಾಜವಗೋಳ, ಟಾಟಾ ಮಾರ್ಕೊಪೋಲೊ ಕಂಪೆನಿಯ ಅಧಿಕಾರಿಗಳಾದ ವಿನಯ ಪಾಠಕ, ಆರ್.ಎಕೆ.ಪ್ರಸಾದ, ಟೆಲ್ಕಾನ್ ಅಧಿಕಾರಿ ಆರ್.ಎ.ರಾವ್, ಶರ್ಮ ಮತ್ತಿತರರು ಉಪಸ್ಥಿತರಿದ್ದರು. ಡಾ. ಎಂ.ಬಿ.ದಳಪತಿ ಸ್ವಾಗತಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT