ADVERTISEMENT

ಸಂವಿಧಾನಕ್ಕೆ ಬದ್ಧ: ಶಾ

​ಪ್ರಜಾವಾಣಿ ವಾರ್ತೆ
Published 4 ಏಪ್ರಿಲ್ 2018, 12:15 IST
Last Updated 4 ಏಪ್ರಿಲ್ 2018, 12:15 IST

ಹುಬ್ಬಳ್ಳಿ: ‘ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಕಾಯ್ದೆ ಕುರಿತು ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ವಿರುದ್ಧ ದಲಿತ ಸಂಘಟನೆಗಳು ಬಂದ್ ಕರೆ ನೀಡುವ ಅವಶ್ಯಕತೆಯಿರಲಿಲ್ಲ. ಅಂಬೇಡ್ಕರ್ ರಚಿಸಿರುವ ಸಂವಿಧಾನಕ್ಕೆ ನಾವು ಬದ್ಧರಾಗಿದ್ದೇವೆ. ದಲಿತರಿಗೆ ಅನ್ಯಾಯವಾಗಲು ಕೇಂದ್ರ ಅವಕಾಶ ನೀಡುವುದಿಲ್ಲ’ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸ್ಪಷ್ಟಪಡಿಸಿದರು.ಬಾದಾಮಿ ತಾಲ್ಲೂಕಿನ ಶಿವಯೋಗಮಂದಿರದಿಂದ ರಸ್ತೆ ಮಾರ್ಗವಾಗಿ ಇಲ್ಲಿನ ವಿಮಾನ ನಿಲ್ದಾಣಕ್ಕೆ ಮಂಗಳವಾರ ರಾತ್ರಿ ಬಂದ ಶಾ ಸುದ್ದಿಗಾರರೊಂದಿಗೆ ಮಾತನಾಡಿದರು.

‘ಬಂದ್ ವೇಳೆ ಉತ್ತರ ಭಾರತದಲ್ಲಿ ಆಗಿರುವ ಹಿಂಸಾಚಾರಕ್ಕೆ ಪ್ರತಿಪಕ್ಷದ ಎಲ್ಲರೂ ಹೊಣೆಗಾರರು. ಮೀಸಲಾತಿ ರದ್ದಾಗುತ್ತಿದೆ ಎನ್ನುವ ಸುಳ್ಳುಸುದ್ದಿಯನ್ನು ಹಬ್ಬಿಸಲಾಗುತ್ತಿದೆ. ಬಿಜೆಪಿ, ಮೀಸಲಾತಿ ರದ್ದು ಮಾಡುವುದಿಲ್ಲ. ಸಂವಿಧಾನಾತ್ಮಕ ರಕ್ಷಣೆ ಇರುವ ದಲಿತರಿಗೆ ನೀಡಲಾದ ಹಕ್ಕುಗಳನ್ನು ಕಿತ್ತುಕೊಳ್ಳುವ, ಮೊಟಕುಗೊಳಿಸುವ ಪ್ರಶ್ನೆಯೇ ಇಲ್ಲ. ನಾವು ಮೀಸಲಾತಿ ಪರವಾಗಿ ಇದ್ದೇವೆ. ರಾಜಕೀಯ ಲಾಭಕ್ಕಾಗಿ ಜನರನ್ನು ಹಾದಿ ತಪ್ಪಿಸಲಾಗುತ್ತಿದೆ’ ಎಂದು ಟೀಕಿಸಿದರು.

ಸಿದ್ದರಾಮಯ್ಯ ಷಡ್ಯಂತ್ರ: ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಲಿಂಗಾಯತ ಸ್ವತಂತ್ರ ಧರ್ಮ ಪ್ರಸ್ತಾವ ತಿರಸ್ಕರಿಸಿತ್ತು. ಇದೆಲ್ಲ ಗೊತ್ತಿದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತೊಮ್ಮೆ ಲಿಂಗಾಯತರಿಗೆ ಅಲ್ಪಸಂಖ್ಯಾತರಿಗೆ ಸ್ಥಾನ ಮಾನ ನೀಡುವ ಶಿಫಾರಸು ಮಾಡಿದ್ದಾರೆ. ಇದು ಬಿ.ಎಸ್.ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿಯಾಗುವುದನ್ನು ತಡೆಯುವ ಷಡ್ಯಂತ್ರ. ಇದಕ್ಕೆಲ್ಲ ಬಿಜೆಪಿ ಜಗ್ಗುವುದಿಲ್ಲ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.