ADVERTISEMENT

ಹಣ ವಾಪಸ್‌ ಕೊಡಿಸಲು ಗ್ರಾಹಕರ ಒತ್ತಾಯಿರಿ ಭಾರಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2017, 6:29 IST
Last Updated 10 ಅಕ್ಟೋಬರ್ 2017, 6:29 IST

ಹುಬ್ಬಳ್ಳಿ: ಪಿಎಸಿಎಲ್‌ ಸಂಸ್ಥೆಯಲ್ಲಿ ಹಣ ಹೂಡಿಕೆ ಮಾಡಿದ ಗ್ರಾಹಕರಿಗೆ ಸಂಸ್ಥೆ ಮೋಸ ಮಾಡಿದೆ. ಆ ಹಣವನ್ನು ಮರಳಿ ಗ್ರಾಹಕರಿಗೆ ಕೊಡಿಸಬೇಕು ಎಂದು ಒತ್ತಾಯಿಸಿ ಎಲ್ಲ ಹೂಡಿಕೆದಾರರ ಸಂಘಟನೆ (ಎಐಎಸ್‌ಒ)ಯ ಸಾವಿರಾರು ಕಾರ್ಯಕರ್ತರು ನಗರದ ರೈಲ್ವೆ ನಿಲ್ದಾಣದಿಂದ ತಹಶೀಲ್ದಾರ್‌ ಕಚೇರಿವರೆಗೆ ಭಾನುವಾರ ಪ್ರತಿಭಟನೆ ನಡೆಸಿದರು.
ಜೆಡಿಎಸ್‌ ಸಹಯೋಗದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಬಂದಿದ್ದ 1500ಕ್ಕೂ ಅಧಿಕ ಗ್ರಾಹಕರು ಭಾಗವಹಿಸಿದ್ದರು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ವಿಧಾನಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ, ‘ಪ್ರಕರಣದ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್‌ನ ಅಂದಿನ ಮುಖ್ಯ ನ್ಯಾಯಮೂರ್ತಿ ಆರ್‌.ಎಂ. ಲೋಧಾ ನೇತೃತ್ವದ ನ್ಯಾಯಪೀಠವು ಸ್ಟಾಕ್‌ ಅಂಡ್‌ ಎಕ್ಸ್‌ಚೇಂಜ್‌ ಬೋರ್ಡ್‌ ಆಫ್‌ ಇಂಡಿಯಾ (ಸೆಬಿ)ದ ಮೂವರು ಅಧಿಕಾರಿಗಳ ಸಮಿತಿಯನ್ನು ರಚಿಸಿ, ಪಿಎಸಿಎಲ್ ಆಸ್ತಿ ಮಾರಾಟದಿಂದ ಬಂದ ಹಣವನ್ನು ಗ್ರಾಹಕರಿಗೆ ಮರಳಿಸಬೇಕು ಎಂದು ಆದೇಶ ನೀಡಿತ್ತು.

ಆದರೆ, ಆದೇಶ ನೀಡಿ ಒಂದೂವರೆ ವರ್ಷ ಕಳೆದರೂ ಇನ್ನೂ ಹಣ ಮರಳಿಸಲು ಆಗಿಲ್ಲ. ಹೀಗಾಗಿ, ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ ಆದೇಶವನ್ನು ಜಾರಿಗೊಳಿಸುವಂತೆ ಸೆಬಿಗೆ ಸೂಚಿಸಬೇಕು’ ಎಂದು ಮನವಿ ಮಾಡಿದರು.

ADVERTISEMENT

ಎಐಎಸ್‌ಒ ರಾಜ್ಯ ಘಟಕದ ಅಧ್ಯಕ್ಷ ವಿರೂಪಾಕ್ಷಪ್ಪ ಗುಡ್ಡಣ್ಣವರ, ರಾಜ್ಯ ಕಾರ್ಯದರ್ಶಿ ಪಿ.ಯು. ಮಾಂಡ್ರೆ, ಎಸ್‌.ಆರ್‌. ರೇಶ್ಮಿ, ಎ.ಜೆ. ಪ್ರಕಾಶ, ಎಚ್‌.ಎಫ್‌. ಕಾಡಪ್ಪನವರ, ಜಗನ್ನಾಥ ಮಾನೆ, ವಿಕಾಸ ಸೊಪ್ಪಿನ ಪ್ರತಿಭಟನೆ ನೇತೃತ್ವ ವಹಿಸಿದ್ದರು.

ವಿಜಯಪುರ, ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ಬೆಂಗಳೂರು, ಹಾವೇರಿ, ಗದಗ ಜಿಲ್ಲೆಗಳಿಂದ ಪಿಎಸಿಎಲ್‌ನಲ್ಲಿ ಹಣ ಹೂಡಿಕೆ ಮಾಡಿದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಕಿತ್ತೂರು ಚನ್ನಮ್ಮ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದ ಬಳಿಕ ತಹಶೀಲ್ದಾರ್ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಕೆಲವರು ಅರೆಬೆತ್ತಲೆ ಮೆರವಣಿಗೆ ನಡೆಸಿ ಭಿಕ್ಷಾಟನೆಯನ್ನೂ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.