ADVERTISEMENT

‘ಪಠ್ಯದ ಜೊತೆಗೆ ಕ್ರೀಡೆಯನ್ನೂ ಮೈಗೂಡಿಸಿಕೊಳ್ಳಿ

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2013, 5:11 IST
Last Updated 17 ಸೆಪ್ಟೆಂಬರ್ 2013, 5:11 IST

ಧಾರವಾಡ: ‘ಕ್ರೀಡಾ ಚಟುವಟಿಕೆಗಳಿಗೆ ಸರ್ಕಾರ ಅನೇಕ ರೀತಿಯ ಪ್ರೋತ್ಸಾಹಗಳನ್ನು ನೀಡುತ್ತಿದ್ದು, ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳನ್ನು ಮೈಗೂಡಿಸಿಕೊಂಡು ಬೆಳೆಯಬೇಕು’ ಎಂದು ಜಿಲ್ಲಾ ಪಂಚಾಯಿತಿ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಟಿ.ಜೆ.ಬಾಲಣ್ಣವರ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಕ್ರೀಡಾ ಪ್ರಾಧಿಕಾರ ಹಾಗೂ ನವದೆಹಲಿಯ ಪೈಕಾ ಮಿಷನ್‌ ಸಂಯುಕ್ತ ಆಶ್ರಯದಲ್ಲಿ ಸೋಮವಾರ ಇಲ್ಲಿಯ ಕರ್ನಾಟಕ ವಿಶ್ವವಿದ್ಯಾಲಯದ ರಾಣಿ ಚನ್ನಮ್ಮ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಪೈಕಾ ಗ್ರಾಮೀಣ, ದಸರಾ ಹಾಗೂ ಪೈಕಾ ಮಹಿಳಾ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ಇಂದಿನ ಯುವಕರಲ್ಲಿ ದೈಹಿಕ ಆರೋಗ್ಯದ ಕೊರತೆ ಎದ್ದು ಕಾಣುತ್ತಿದೆ. ಇಂಥ ದೈಹಿಕ ಆರೋಗ್ಯವನ್ನು ಚೆನ್ನಾಗಿ ಇಟ್ಟುಕೊಳ್ಳಬೇಕಾದರೆ ಕ್ರೀಡೆಗೆ ಹೆಚ್ಚಿನ ಪ್ರಾಶಸ್ತ್ಯ ನೀಡಬೇಕು. ಓದಿನಿಂದ ಕೇವಲ ಜ್ಞಾನವನ್ನು ವೃದ್ಧಿ ಮಾಡಿಕೊಳ್ಳಬಹುದು. ಆದರೆ, ಕ್ರೀಡೆಯಿಂದ ದೈಹಿಕ ಆರೋಗ್ಯವನ್ನು ವೃದ್ಧಿ ಮಾಡಿಕೊಳ್ಳಬಹುದು. ಕ್ರೀಡೆಗಳಲ್ಲಿ ಸೋಲು, ಗೆಲುವು ಎಂಬುದು ಇದ್ದದ್ದೇ, ಸೋಲು ಎನ್ನುವುದು ಗೆಲುವಿನ ಮೆಟ್ಟಿಲು ಇದ್ದಂತೆ. ಸೋಲಿನ ಜೊತೆಗೆ ಗೆಲುವನ್ನು ಸಾಧಿಸಬೇಕು’ ಎಂದು ಕ್ರೀಡಾಪಟುಗಳಿಗೆ ಅವರು ಸಲಹೆ ನೀಡಿದರು.

ಹುಬ್ಬಳ್ಳಿ, ಕುಂದಗೋಳ, ಕಲಘಟಗಿ, ಧಾರವಾಡ ಹಾಗೂ ನವಲಗುಂದ ತಾಲ್ಲೂಕಿನ ಗ್ರಾಮೀಣ ತಂಡಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದವು. ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಧೀಕ್ಷಕ ವಿಶ್ವನಾಥ ಇದ್ದರು. ಸಹನಿರ್ದೇಶಕ ಡಿ.ಶ್ರೀನಿವಾಸ ಸ್ವಾಗತಿಸಿದರು. ಜಗದೀಶ ಮಳಗಿ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.