ADVERTISEMENT

‘ಹುಬ್ಬಳ್ಳಿ–ಧಾರವಾಡದ ಅಭಿವೃದ್ಧಿಗೆ ₹1 ಸಾವಿರ ಕೋಟಿ’

ಸ್ಮಾರ್ಟ್‌ ಸಿಟಿ ಮಂದಗತಿಯ ಕಾಮಗಾರಿಗೆ ಸಚಿವ ಬಸವರಾಜ ಅಸಮಾಧಾನ, ಕ್ರಮದ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 7 ಜನವರಿ 2021, 12:29 IST
Last Updated 7 ಜನವರಿ 2021, 12:29 IST
ಹುಬ್ಬಳ್ಳಿಯಲ್ಲಿ ಗುರುವಾರ ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ ಅವರು ವಿವಿಧ ಇಲಾಖೆಗಳ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದರು
ಹುಬ್ಬಳ್ಳಿಯಲ್ಲಿ ಗುರುವಾರ ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ ಅವರು ವಿವಿಧ ಇಲಾಖೆಗಳ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದರು   

ಹುಬ್ಬಳ್ಳಿ: ಕೇಂದ್ರ ರಸ್ತೆ ನಿಧಿ ಅಡಿ ಹುಬ್ಬಳ್ಳಿ–ಧಾರವಾಡದ ಪ್ರಮುಖ ರಸ್ತೆಗಳನ್ನು ನಿರ್ಮಾಣ ಮಾಡಲಾಗುತ್ತಿದ್ದು, ಉಳಿದ ರಸ್ತೆಗಳ ಅಭಿವೃದ್ಧಿಗೆ ₹1 ಸಾವಿರ ಕೋಟಿ ನೀಡಬೇಕು ಎಂದು ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಜಿಲ್ಲಾಡಳಿತಮಾಡಿದ ಮನವಿಗೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರುಒಪ್ಪಿಗೆ ಸೂಚಿಸಿದ್ದಾರೆ ಎಂದುನಗರಾಭಿವೃದ್ಧಿ ಸಚಿವ ಬೈರತಿಬಸವರಾಜ ತಿಳಿಸಿದರು.

ಇಲ್ಲಿ ಗುರುವಾರ ನಡೆದಸ್ಮಾರ್ಟ್‌ ಸಿಟಿ, ಮಹಾನಗರ ಪಾಲಿಕೆ, ನಗರಾಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ, ಕೆಯುಐಡಿಎಫ್‌ಸಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ‘ರಸ್ತೆಗಳ ಅಭಿವೃದ್ಧಿಗೆ ಶೀಘ್ರದಲ್ಲಿಯೇ ಹಣ ಬಿಡುಗಡೆ ಮಾಡಲಾಗುವುದು’ ಎಂದು ಭರವಸೆ ನೀಡಿದರು.

‘ಮಹಾತ್ಮಗಾಂಧಿ ನಗರ ವಿಕಾಸ ಯೋಜನೆಯಡಿ ಇಲ್ಲಿನ ಮಹಾನಗರ ಪಾಲಿಕೆಗೆ ₹150 ಕೋಟಿ ಸೇರಿದಂತೆ ವಿವಿಧ ಯೋಜನೆಗಳಿಂದ ಒಟ್ಟು ₹229 ಕೋಟಿ ನೀಡಲಾಗಿದೆ. ಪ್ರಮುಖ ನಗರವಾಗಿ ಬೆಳೆಯುತ್ತಿರುವ ಹುಬ್ಬಳ್ಳಿ–ಧಾರವಾಡದ ಸಮಗ್ರ ಅಭಿವೃದ್ಧಿಗೆ ಹಣ ವ್ಯಯಿಸಲು ಸರ್ಕಾರ ಬದ್ಧವಿದೆ.ನಗರ ವಿಕಾಸ ಯೋಜನೆಯ ಕಾರ್ಯಯೋಜನೆ ಸಿದ್ಧವಿದ್ದು,ಶೀಘ್ರವೇ ಟೆಂಡರ್ ಕರೆಯಲಾಗುವುದು.ಬರುವ ಬೇಸಿಗೆ ವೇಳೆಗೆಎಲ್ಲಾ ರಸ್ತೆ ಹಾಗೂ ಒಳಚರಂಡಿಗಳನ್ನು ದುರಸ್ತಿ ಮಾಡಲಾಗುವುದು’ ಎಂದರು.

ADVERTISEMENT

ಅಸಮಾಧಾನ:ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿಗಳು ಮಂದಗತಿಯಲ್ಲಿ ಸಾಗಿವೆ. ಇದು ಹೀಗೆಯೇ ಮುಂದುವರಿದರೆ ಅಧಿಕಾರಿಗಳನ್ನೇ ಹೊಣೆ ಮಾಡಲಾಗುವುದು. ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಎಚ್ಚರಿಕೆ ನೀಡಿದರು. ಸಭೆಯಲ್ಲಿ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ತರಾಟೆಗೆ ತೆಗೆದುಕೊಂಡರು.

ಇಂದಿರಾ ಗಾಜಿನ ಮನೆಯಲ್ಲಿ ನಡೆಯುತ್ತಿರುವ ಕಾಮಗಾರಿ, ತೋಳನಕೆರೆಗೆ ಚರಂಡಿ ನೀರು ಸೇರುತ್ತಿರುವುದರ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು. ಎರಡ್ಮೂರು ದಿನಗಳಲ್ಲಿ ಚರಂಡಿ ನೀರು ಹೋಗುವುದನ್ನು ನಿಲ್ಲಿಸದಿದ್ದರೆ ಕಠಿಣ ಕ್ರಮದ ಎಚ್ಚರಿಕೆ ನೀಡಿದರು.

‘ಪ್ರಗತಿಯಲ್ಲಿರುವ ಕಾಮಗಾರಿಗಳು ಐದಾರು ತಿಂಗಳಲ್ಲಿ ಪೂರ್ಣಗೊಳ್ಳಲಿದೆ. ಸ್ಮಾರ್ಟ್‌ ಸಿಟಿಯ ಯೋಜನೆಗಳ‌ನ್ನು ಮುಗಿಸಲು ಒಂದೂವರೆ ವರ್ಷ ಕಾಲಾವಕಾಶವಿದೆ. ಯೋಜನಾ ವೆಚ್ಚ ಹೆಚ್ಚಾಗದಂತೆ ಎಚ್ಚರಿಕೆ ವಹಿಸಿ ಕಾಲಮಿತಿಯಲ್ಲಿ ಮುಗಿಸಲಾಗುವುದು’ ಎಂದರು.

ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ, ಶಾಸಕರಾದ ಅರವಿಂದ ಬೆಲ್ಲದ, ಶಂಕರ ಪಾಟೀಲ ಮುನೇನಕೊಪ್ಪ, ವಿಧಾನ ಪರಿಷತ್‌ ಸದಸ್ಯಶ್ರೀನಿವಾಸ ಮಾನೆ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಪಾಲಿಕೆ ಆಯುಕ್ತ ಡಾ.ಸುರೇಶ್ ಇಟ್ನಾಳ್, ಕೆಯುಐಡಿಎಫ್‌ಸಿ ವ್ಯವಸ್ಥಾಪಕ ನಿರ್ದೇಶಕ ಡಾ.ಎಂ.ಟಿ.ರೆಜು, ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕಶಕೀಲ್ ಅಹಮದ್, ಹುಡಾ ಅಧ್ಯಕ್ಷ ನಾಗೇಶ ಕಲಬುರ್ಗಿ, ಆಯುಕ್ತ ವಿನಾಯಕ ಪಾಲನಕ್ ಪಾಲ್ಗೊಂಡಿದ್ದರು.

ಅಕ್ರಮ ಸಕ್ರಮ: ಉಪ ಸಮಿತಿ ರಚನೆ

ನಗರ ಪ್ರದೇಶಗಳಲ್ಲಿಅಕ್ರಮ ಸಕ್ರಮ ಆಸ್ತಿಗಳ ಕುರಿತು ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟದ ಉಪಸಮಿತಿ ಚಿಸಲಾಗಿದೆ. ಎಲ್ಲಾ ಸಾಧಕ ಬಾಧಕಗಳನ್ನು ಚರ್ಚಿಸಿ ಸರ್ಕಾರಕ್ಕೆ ವರದಿ ನೀಡಲಾಗುವುದು ಎಂದುಬಸವರಾಜ ಹೇಳಿದರು.

‘ಇಲ್ಲಿನಪಾಲಿಕೆಯ ಪಿಂಚಣಿ ಪಾವತಿಗೆ ₹52 ಕೋಟಿಈಗಾಗಲೇ ಬಿಡುಗಡೆ ಮಾಡಲಾಗಿದೆ. ಉಳಿದ ಹಣವನ್ನು ಮುಂದಿನ ಬಜೆಟ್‌ನಲ್ಲಿ ನೀಡಲಾಗುವುದು.ವಿಶ್ವಬ್ಯಾಂಕ್ ನೆರವಿನಲ್ಲಿ ₹2,800 ಕೋಟಿ ವೆಚ್ಚದಲ್ಲಿ ಹುಬ್ಬಳ್ಳಿ–ಧಾರವಾಡ,ಕಲಬುರ್ಗಿ ಮತ್ತುಬೆಳಗಾವಿಯಲ್ಲಿ 24X7ಕುಡಿಯುವ ನೀರು ಸರಬರಾಜು ಯೋಜನೆ ನಡೆಯಲಿದೆ’ ಎಂದರು.


ಎಲ್‌ಇಡಿ ದೀಪ ಅಳವಡಿಸಲು ₹77 ಕೋಟಿ ವೆಚ್ಚ

ಅವಳಿ ನಗರಗಳಲ್ಲಿ 64 ಸಾವಿರಎಲ್‌ಇಡಿ ಬಲ್ಪ್‌ಗಳನ್ನು ಅಳವಡಿಸಲು ₹77 ಕೋಟಿ ವೆಚ್ಚದ ಯೋಜನೆ ರೂಪಿಸಲಾಗಿದೆ. ಈ ಯೋಜನೆಯ ಲಾಭ, ನಷ್ಟಗಳನ್ನು ಪರಿಶೀಲಿಸಿಯೇ ಅನುಮೋದನೆ ನೀಡಲಾಗಿದೆ. ಇದರಿಂದ ಸರ್ಕಾರಕ್ಕೆ ಯಾವುದೇ ಹೊರೆಯಿಲ್ಲ. ಇವೆಲ್ಲವೂ ಸಾರ್ವಜನಿಕ ಸಹಭಾಗಿತ್ವದಲ್ಲಿ ನಡೆಯಲಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.