ADVERTISEMENT

ಹುಬ್ಬಳ್ಳಿ: ಕೋವಿಡ್‌ ಮುಂಜಾಗ್ರತಾ ಕ್ರಮವಾಗಿ 10 ಸಾವಿರ ಕೋವಿಡ್‌ ಕಿಟ್‌

​ಪ್ರಜಾವಾಣಿ ವಾರ್ತೆ
Published 25 ಮೇ 2025, 15:18 IST
Last Updated 25 ಮೇ 2025, 15:18 IST
ದಿವ್ಯಪ್ರಭು, ಜಿಲ್ಲಾಧಿಕಾರಿ, ಧಾರವಾಡ
ದಿವ್ಯಪ್ರಭು, ಜಿಲ್ಲಾಧಿಕಾರಿ, ಧಾರವಾಡ   

ಹುಬ್ಬಳ್ಳಿ: ಕೋವಿಡ್‌ ಮುಂಜಾಗ್ರತಾ ಕ್ರಮವಾಗಿ ಧಾರವಾಡ ಜಿಲ್ಲೆ ಸೇರಿದಂತೆ ಸುತ್ತಲಿನ ಐದು ಜಿಲ್ಲೆಗಳನ್ನು ಕೇಂದ್ರವಾಗಿಟ್ಟುಕೊಂಡು, ನಗರದ ಕೆಎಂಸಿ–ಆರ್‌ಐ ಆಸ್ಪತ್ರೆಯಲ್ಲಿ ಕೋವಿಡ್‌ ಹೆಚ್ಚುವರಿ ತಪಾಸಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ರಾಜ್ಯದ ವಿವಿಧೆಡೆ ಕೊರೋನಾ ಸೋಂಕು ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಕೋವಿಡ್‌ ತಪಾಸಣೆ ಹೆಚ್ಚಿಸಲು ಮುಂದಾಗಿದೆ. ಕೋವಿಡ್‌ ತಪಾಸಣೆಗೆ ರಾಜ್ಯದಲ್ಲಿನ 10 ಕೇಂದ್ರಗಳನ್ನು ಗುರುತಿಸಲಾಗಿದ್ದು, ಅದರಲ್ಲಿ ನಗರದ ಕೆಎಂಸಿ–ಆರ್‌ಐ ಆಸ್ಪತ್ರೆಯೂ ಒಂದು. ಧಾರವಾಡ, ಬಾಗಲಕೋಟೆ, ಗದಗ, ಹಾವೇರಿ ಮತ್ತು ಬೆಳಗಾವಿ ಜಿಲ್ಲೆ ಈ ಕೇಂದ್ರದ ವ್ಯಾಪ್ತಿಗೆ ಒಳಪಡಲಿದ್ದು, ಆರೋಗ್ಯ ಇಲಾಖೆ 10 ಸಾವಿರ ತಪಾಸಣಾ ಸಾಮಗ್ರಿಗಳನ್ನು ಹಂಚಿಕೆ ಮಾಡಿದೆ.

ತೀವ್ರ ಉಸಿರಾಟದ ತೊಂದರೆ ಅನುಭವಿಸುತ್ತಿರುವವರು, ವೃದ್ಧರು, ಮಕ್ಕಳು, ಗರ್ಭಿಣಿಯರಲ್ಲಿ ಕೋವಿಡ್‌ ಲಕ್ಷಣಗಳು ಕಂಡು ಬಂದರೆ ಕಡ್ಡಾಯವಾಗಿ ಪರೀಕ್ಷೆಗೆ ಒಳಪಡಿಸಬೇಕೆಂದು ಸೂಚಿಸಲಾಗಿದೆ. ಕೆಎಂಸಿ–ಆರ್‌ಐ ಆಸ್ಪತ್ರೆಯ ಪ್ರಯೋಗಾಲಯಕ್ಕೆ ಡಾ. ಶಾಂತಲಾ ಜಿ.ಬಿ. ಅವರನ್ನು ನೋಡಲ್‌ ಅಧಿಕಾರಿಯನ್ನಾಗಿ ನೇಮಿಸಿ, ಐದು ಜಿಲ್ಲೆಗಳ ಉಸ್ತುವಾರಿ ನೀಡಲಾಗಿದೆ.

ADVERTISEMENT

‘ಆಸ್ಪತ್ರೆಯಲ್ಲಿ ಕೋವಿಡ್‌ ಪರೀಕ್ಷೆ ನಿರಂತರವಾಗಿ ನಡೆಯುತ್ತಿದೆ. ಆದರೆ, ಸರ್ಕಾರದ ಈಗಿನ ನಿರ್ದೇಶನದ ಮೇರೆಗೆ ಸೋಮವಾರದಿಂದ ತಪಾಸಣಾ ಸಂಖ್ಯೆಯನ್ನು ಹೆಚ್ಚಿಸಲಾಗುತ್ತಿದೆ. ಸಾರ್ವಜನಿಕರು, ಸಂಘ–ಸಂಸ್ಥೆಗಳು, ಉದ್ಯಮಿಗಳು ನೀಡಿರುವ ಹಾಗೂ ಆರೋಗ್ಯ ಇಲಾಖೆ ವಿತರಿಸಿರುವ ಕೋವಿಡ್‌ ಪರಿಕರಗಳೆಲ್ಲ ಸುಸ್ಥಿತಿಯಲ್ಲಿವೆ. ಪ್ರತಿನಿತ್ಯ 150 ರಿಂದ 200ರಷ್ಟು ಹೆಚ್ಚುವರಿ ತಪಾಸಣೆ ನಡೆಸಲು ಆರೋಗ್ಯ ಇಲಾಖೆಯಿಂದ ಸೂಚನೆ ಬಂದಿದೆ’ ಎಂದು ‘ಪ್ರಜಾವಾಣಿ’ಗೆ ಕೆಎಂಸಿ–ಆರ್‌ಐ ನಿರ್ದೇಶಕ ಎಸ್‌.ಎಫ್‌. ಕಮ್ಮಾರ ತಿಳಿಸಿದರು.

‘ಆಸ್ಪತ್ರೆಯ ಎಲ್ಲ ವಿಭಾಗದ ಮುಖ್ಯ ವೈದ್ಯಾಧಿಕಾರಿಗಳ ಜೊತೆ ಈಗಾಗಲೇ ಸಭೆ ನಡೆಸಿ, ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲಾಗಿದೆ. ವೈದ್ಯಾಧಿಕಾರಿಗಳ ನೇತೃತ್ವದಲ್ಲಿ ಪ್ರತ್ಯೇಕ ತಂಡಗಳನ್ನು ರಚಿಸಲಾಗಿದೆ. ತುರ್ತು ಸಂದರ್ಭದಲ್ಲಿ ರೋಗಿಯನ್ನು ದಾಖಲಿಸಿಕೊಂಡು, ಪ್ರತ್ಯೇಕವಾಗಿ ಚಿಕಿತ್ಸೆ ನೀಡಲು ಐಸೋಲೇಷನ್‌ ವಾರ್ಡ್‌ ಸಹ ಸ್ಥಾಪಿಸಲಾಗಿದೆ. ತೀವ್ರು ಉಸಿರಾಟದ ಸಮಸ್ಯೆ ಹಾಗೂ ಕೊರೋನಾ ಸೋಂಕಿನ ಲಕ್ಷಣವಿದ್ದರೂ ಪರೀಕ್ಷೆ ಮಾಡಿಸಿಕೊಳ್ಳಬೇಕು’ ಎಂದು ಹೇಳಿದರು.

‘ಧಾರವಾಡ ಜಿಲ್ಲೆಯಲ್ಲಿ ಸದ್ಯ ಕೋವಿಡ್‌ ಪಾಸಿಟಿವ್‌ ಪ್ರಕರಣ ಇಲ್ಲ. ಕೋವಿಡ್‌ ಲಕ್ಷಣಗಳು ಸಹ ಯಾರಲ್ಲಿಯೂ ಕಂಡು ಬಂದಿಲ್ಲ. ಮಳೆ ಮತ್ತು ಬಿಸಿಲು ಇರುವುದರಿಂದ ಕೆಲವರಲ್ಲಿ ಶೀತ, ಜ್ವರ ಕಂಡು ಬರುತ್ತಿದೆ. ಯಾವುದೇ ಕಾರಣಕ್ಕೂ ಸಾರ್ವಜನಿಕರು ಆತಂಕಪಡಬೇಕಿಲ್ಲ’ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.