ಅಣ್ಣಿಗೇರಿ: ಸಮಾಜಕ್ಕೆ ಉತ್ತಮ ಕೊಡುಗೆ ನೀಡಿದ ಮಹನೀಯರನ್ನು ಮತ್ತು ಪದ್ಮಶ್ರೀ ಪುರಸ್ಕೃತ ಅಬ್ದುಲ್ ಖಾದರ್ ನಡಕಟ್ಟಿನ ಅವರಿಗೆ ಸ್ಥಳೀಯ ಅಂಜುಮನ್ ಸಂಸ್ಥೆಯಿಂದ ಸನ್ಮಾನಿಸಲಾಯಿತು.
ಈ ವೇಳೆ ಮಾತನಾಡಿದ ಸಕ್ಕರೆ ಖಾತೆ ಸಚಿವ ಶಂಕರಪಾಟೀಲ ಮುನೇನಕೊಪ್ಪ ’ನಿರಂತರವಾಗಿ ಸಂಕಷ್ಟಕ್ಕೆ ಸಿಲುಕುತ್ತಿರುವ ರೈತರ ಕಷ್ಟಕ್ಕೆ ಸ್ಪಂದಿಸಿ ನಡಕಟ್ಟಿನ ಅವರು ಕೃಷಿ ಉಪಕರಣ ಕಂಡು ಹಿಡಿದು ಅನ್ನದಾತರ ಬದುಕಿಗೆ ಆಸರೆಯಾಗಿದ್ದಾರೆ. ನನ್ನ ಕ್ಷೇತ್ರದ ಸಾಧಕರಿಗೆ ಪ್ರತಿಷ್ಠಿತ ಪ್ರಶಸ್ತಿ ಬಂದಿರುವುದು ಹೆಮ್ಮೆಯ ವಿಷಯ’ ಎಂದರು.
‘ಸಮಾಜಕ್ಕೆ ಉತ್ತಮ ಸೇವೆ ಸಲ್ಲಿಸುತ್ತಿರುವ ಅಂಜುಮನ್ ಸಂಸ್ಥೆ ಕಾರ್ಯ ಶ್ಲಾಘನೀಯ. ಅಂಜುಮನ್ ಕೇವಲ ಮುಸ್ಲಿಂ ಸಮಾಜಕ್ಕೆ ಮಾತ್ರವಲ್ಲದೆ ಎಲ್ಲರೊಂದಿಗೆ ಹೊಂದಿಕೊಂಡು ಕೆಲಸ ಮಾಡುತ್ತಿದೆ. ಸಂಸ್ಥೆಯಿಂದ ನೂತನವಾಗಿ ಆರಂಭಿಸುತ್ತಿರುವ ಕೌಶಲಾಭಿವೃದ್ಧಿ ಕಾರ್ಯಕ್ಕೆ ಹಾಗೂ ಅಭಿವೃದ್ಧಿಗೆ ₹20 ಲಕ್ಷ ನೀಡಲಾಗುವುದು’ ಎಂದು ಭರವಸೆ ನೀಡಿದರು. ಪುರಸಭೆಗೆ ಆಯ್ಕೆಯಾದ 23 ಸದಸ್ಯರನ್ನು ಸನ್ಮಾನಿಸಲಾಯಿತು.
ಮಾಜಿ ಸಚಿವ ಕೆ.ಎನ್.ಗಡ್ಡಿ, ಪ್ರೊ.ಎಸ್.ಎಸ್. ಹರ್ಲಾಪುರ, ಸ್ಥಳೀಯ ದಾಸೋಹ ಮಠದ ಶಿವಕುಮಾರ ಸ್ವಾಮೀಜಿ, ಕಮಲಾಪೂರ ದರ್ಗಾದ ಸೈಯ್ಯದ್ ಖಾದ್ರಿ ಜನಾಬ, ವಿಧಾನ ಪರಿಷತ್ ಸದಸ್ಯ ಪ್ರೊ.ಎಸ್.ವಿ. ಸಂಕನೂರ, ಮಾಜಿ ಶಾಸಕ ಎನ್.ಎಚ್.ಕೋನರಡ್ಡಿ, ಷಣ್ಮುಖ ಗುರಿಕಾರ, ವಿನೋದ ಅಸೂಟಿ, ಮಂಜುನಾಥ ಮಾಯಣ್ಣವರ, ಅಂಜುಮನ್ ಸಂಸ್ಥೆ ಅಧ್ಯಕ್ಷ ಐ.ಜಿ.ಸಮುದ್ರಿ, ಎಸ್.ಎಂ.ಶೇಖಸನದಿ, ಬಿ.ಬಿ.ಗಂಗಾಧರಮಠ, ಹಸನಸಾಬ ಘೂಡುನಾಯ್ಕರ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.