ADVERTISEMENT

ಮಾಹಿತಿ ತಲುಪಿಸುವ ನಿಟ್ಟಿನಲ್ಲಿ ಸಮದಾಯ ಬಾನುಲಿ ಪಾತ್ರ ಮಹತ್ವದ್ದು

​ಪ್ರಜಾವಾಣಿ ವಾರ್ತೆ
Published 13 ಜನವರಿ 2018, 8:39 IST
Last Updated 13 ಜನವರಿ 2018, 8:39 IST

ಧಾರವಾಡ: ’ರೈತರು ಸೇರಿದಂತೆ ವಿವಿಧ ಸಮುದಾಯಗಳಿಗೆ ಮಾಹಿತಿ ನೀಡುವುದು ಮತ್ತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸಮುದಾಯ ಬಾನುಲಿ ಕೇಂದ್ರಗಳು ನಿರ್ವಹಿಸುತ್ತಿರುವ ಪಾತ್ರ ಅನನ್ಯವಾದುದು' ಎಂದು ಬಿಜೆಪಿ ಮುಖಂಡ ಬಂಡೆಪ್ಪ ಕಾಶಂಪುರ ಹೇಳಿದರು. 

ಇಲ್ಲಿನ ಕೃಷಿ ವಿಶ್ವವಿದ್ಯಾಲಯದ ಏರ್ಪಡಿಸಿದ್ದ ‘ಕೃಷಿ ವಿಸ್ತರಣಾ ಸೇವೆಯಲ್ಲಿ ಸಮುದಾಯ ಬಾನುಲಿ ಕೇಂದ್ರಗಳು ಎದುರಿಸುತ್ತಿರುವ ಸವಾಲುಗಳು ಹಾಗೂ ಭವಿಷ್ಯದಲ್ಲಿನ ಅವಕಾಶಗಳು ಎಂಬ ವಿಷಯದ ಕುರಿತ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಕೃಷಿ ಚಟುವಟಿಕೆಗಳ ಕುರಿತು ಮಾಹಿತಿ ಹಾಗೂ ಜಾಗೃತಿ ನೀಡುವಲ್ಲಿ ಕೃಷಿ ವಿಶ್ವವಿದ್ಯಾಲಯದ ಸಮುದಾಯ ಬಾನುಲಿ ಕೇಂದ್ರ ಉತ್ತಮ ಕೆಲಸ ಮಾಡುತ್ತಿದೆ. ದೇಶದ ಹಾಗೂ ಕರ್ನಾಟಕದ ಮೊದಲ ಸಮುದಾಯ ಬಾನುಲಿ ಕೇಂದ್ರವಾದ ಕೃಷಿ ವಿಶ್ವವಿದ್ಯಾಲಯದ ಸಮುದಾಯ ಬಾನುಲಿ ಕೇಂದ್ರವು ಶತಮಾನೋತ್ಸವ ಆಚರಣೆ ಮಾಡಿಕೊಳ್ಳುತ್ತಿರುವುದು ಸಂತಸದ ಸಂಗತಿ' ಎಂದರು. 

'ಆರಂಭದಲ್ಲಿ ಬೆಳಿಗ್ಗೆ ಮತ್ತು ಸಂಜೆ ಎರಡು ಗಂಟೆಗಳ ಕಾಲ ಪ್ರಸಾರವಾಗುತ್ತಿದ್ದ ಕಾರ್ಯಕ್ರಮಗಳು ಈಗ ಎಂಟು ಗಂಟೆಗೆ ವಿಸ್ತರಣೆಗೊಂಡಿರುವುದು ಉತ್ತಮ ಬೆಳವಣಿಗೆ. ಎಲ್ಲ ಕೃಷಿ ವಿಜ್ಞಾನ ಕೇಂದ್ರ ಮತ್ತು ಸಂಶೋಧನಾ ಕೇಂದ್ರಗಳಲ್ಲಿ ಇಂಥ ಸಮುದಾಯ ಬಾನುಲಿ ಕೇಂದ್ರಗಳನ್ನು ಸ್ಥಾಪಿಸಿದರೆ,  ಸುತ್ತಮುತ್ತಲಿನ ಗ್ರಾಮಗಳಿಗೆ ಕೃಷಿ ತಾಂತ್ರಿಕತೆಗಳನ್ನು ತಲುಪಿಸಲು ಸಾಧ್ಯವಾಗುತ್ತದೆ. ಉತ್ತಮ ತಂತ್ರಜ್ಞಾನ ಬಳಸಿಕೊಂಡು ರೈತರು ಹೆಚ್ಚು ಇಳುವರಿ ಪಡೆಯಬಹುದು’ ಎಂದು ಹೇಳಿದರು.

ADVERTISEMENT

ಕುಲಪತಿ ಡಾ.ಡಿ.ಪಿ.ಬಿರಾದಾರ ಮಾತನಾಡಿ, 'ಕೃಷಿ ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಇನ್ನೆರಡು ಕೃಷಿ ಬಾನುಲಿ ಕೇಂದ್ರಗಳನ್ನು ಸ್ಥಾಪಿಸಲಿದ್ದು, ಅದರ ಜೊತೆಗೆ ಮುಂದಿನ ವರ್ಷ ಟಿವಿ ಕೃಷಿ ವಾಹಿನಿಯನ್ನು ಆರಂಭಿಸುವ ಚಿಂತನೆ ನಡೆದಿದೆ. ವಿಶ್ವವಿದ್ಯಾಲಯ ವ್ಯಾಪ್ತಿಯ ಎಲ್ಲ ಜಿಲ್ಲೆಗಳಿಗೂ ಪ್ರಸಾರ ವ್ಯಾಪ್ತಿ ವಿಸ್ತರಿಸಲು ₹ 1 ಕೋಟಿ ಬಿಡುಗಡೆ ಮಾಡಲಾಗುವುದು. ಬಾನುಲಿ ದಶಮಾನೋತ್ಸವದ ನೆನಪಿನಲ್ಲಿ 100 ರೇಡಿಯೊಗಳನ್ನು ರೈತರಿಗೆ ವಿತರಿಸಲಾಗುತ್ತದೆ’ ಎಂದರು.

ಡಾ.ಜೆ.ಎಚ್.ಕುಲಕರ್ಣಿ, ಸಿ.ಯು.ಬೆಳ್ಳಕ್ಕಿ, ಆಡಳಿತ ಮಂಡಳಿ ಸದಸ್ಯ ಈಶ್ವರಚಂದ್ರ ಹೊಸಮನಿ, ಸುರೇಶ ಗೊಳಸಂಗಿ, ಸುಶಿಲಕುಮಾರ ಬಿ. ಬೆಳಗಲಿ, ಕೃಷಿ ವಿಶ್ವವಿದ್ಯಾಲಯದ ಅಧಿಕಾರಿಗಳು, ರೈತರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ದೇಶದ ಮೊಟ್ಟಮೊದಲ 'ಕೃಷಿ ಬಾನುಲಿ ಕೇಂದ್ರ - ದಶಕದ ಸಂಭ್ರಮ' ಕಿರುಹೊತ್ತಿಗೆಯನ್ನು ಬಿಡುಗಡೆ ಮಾಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.