ADVERTISEMENT

ಧಾರವಾಡ: 66 ವೈದ್ಯಕೀಯ ವಿದ್ಯಾರ್ಥಿಗಳಿಗೆ ಕೋವಿಡ್- 2 ಹಾಸ್ಟೆಲ್‌ ಸೀಲ್‌ಡೌನ್

​ಪ್ರಜಾವಾಣಿ ವಾರ್ತೆ
Published 25 ನವೆಂಬರ್ 2021, 10:49 IST
Last Updated 25 ನವೆಂಬರ್ 2021, 10:49 IST
ಧಾರವಾಡದ ಎಸ್‌ಡಿಎಂ ವೈದ್ಯಕೀಯ ಕಾಲೇಜಿಗೆ ಗುರುವಾರ ಭೇಟಿ ನೀಡಿದ ನಿತೇಶ್ ಕೆ. ಪಾಟೀಲ ಅವರು ಡಾ. ರತ್ನಮಾಲಾ ದೇಸಾಯಿ ಅವರೊಂದಿಗೆ ಸಮಾಲೋಚನೆ ನಡೆಸಿದರು. ಡಾ. ಸುಜಾತಾ ಹಸವಿಮಠ ಹಾಗೂ ಡಾ. ಯಶವಂತ ಮದೀನಕರ್ ಇದ್ದಾರೆ.
ಧಾರವಾಡದ ಎಸ್‌ಡಿಎಂ ವೈದ್ಯಕೀಯ ಕಾಲೇಜಿಗೆ ಗುರುವಾರ ಭೇಟಿ ನೀಡಿದ ನಿತೇಶ್ ಕೆ. ಪಾಟೀಲ ಅವರು ಡಾ. ರತ್ನಮಾಲಾ ದೇಸಾಯಿ ಅವರೊಂದಿಗೆ ಸಮಾಲೋಚನೆ ನಡೆಸಿದರು. ಡಾ. ಸುಜಾತಾ ಹಸವಿಮಠ ಹಾಗೂ ಡಾ. ಯಶವಂತ ಮದೀನಕರ್ ಇದ್ದಾರೆ.   

ಧಾರವಾಡ: ಇಲ್ಲಿನ ಸತ್ತೂರಿನಲ್ಲಿರುವ ಎಸ್‌ಡಿಎಂ ವೈದ್ಯಕೀಯ ಕಾಲೇಜಿನಲ್ಲಿ ಗುರುವಾರವರೆಗೆ 66 ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಹೀಗಾಗಿ ಎರಡು ವಿದ್ಯಾರ್ಥಿನಿಲಯಗಳನ್ನು ಜಿಲ್ಲಾಡಳಿತ ಸೀಲ್‌ಡೌನ್ ಮಾಡಿದೆ.

ಸೋಂಕಿತರ ಪ್ರಮಾಣ ಹಚ್ಚಳವಾಗುತ್ತಿರುವುದರಿಂದ ಕಾಲೇಜು ಆವರಣಕ್ಕೆ ಗುರುವಾರ ಜಿಲ್ಲಾಧಿಕಾರಿ ನಿತೇಶ್ ಕೆ. ಪಾಟೀಲ ಭೇಟಿ ನೀಡಿ ಪರಿಶೀಲನೆ ನಡೆಸಿ, ಕಾಲೇಜು ಆಡಳಿತ ಮಂಡಳಿಯೊಂದಿಗೆ ಚರ್ಚಿಸಿದರು.

ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,’ಕಳೆದ ಮೂರು ದಿನಗಳಿಂದ ಕಾಲೇಜಿನಲ್ಲಿ ಸೋಂಕಿತರ ಪ್ರಮಾಣ ಏರಿಕೆಯಾಗುತ್ತಿರುವುದರಿಂದ ಕಾಲೇಜಿನ ಎಲ್ಲಾ 400 ವಿದ್ಯಾರ್ಥಿಗಳು ಹಾಗೂ 3 ಸಾವಿರ ಸಿಬ್ಬಂದಿಯ ಮೂಗು ಹಾಗೂ ಗಂಟಲು ದ್ರವದ ಮಾದರಿ ಸಂಗ್ರಹಿಸಿ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಸೋಂಕಿತರು ಎರಡು ಡೋಸ್ ಲಸಿಕೆ ಪಡೆದಿರುವುದರಿಂದ ತೀವ್ರತರ ರೋಗ ಲಕ್ಷಣಗಳು ಕಂಡುಬಂದಿಲ್ಲ. ಔಷಧೋಪಚಾರ, ಚಿಕಿತ್ಸೆ ನಡೆಯುತ್ತಿದೆ‘ ಎಂದರು.

ADVERTISEMENT

’ಕಳೆದ 17ನೇ ತಾರೀಖಿನಂದು ಕಾಲೇಜಿನ ಆವರಣದ ಕಲಾಕ್ಷೇತ್ರದಲ್ಲಿ ನಡೆದ ವಿದ್ಯಾರ್ಥಿಗಳ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ಹಲವರಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿದೆ. ಈಗಾಗಲೇ 300 ವಿದ್ಯಾರ್ಥಿಗಳ ಕೋವಿಡ್ ತಪಾಸಣೆ ವರದಿ ಬಂದಿದ್ದು, 66 ವಿದ್ಯಾರ್ಥಿಗಳಲ್ಲಿ ಸೋಂಕು ದೃಢಪಟ್ಟಿದೆ. ಉಳಿದ 100 ವಿದ್ಯಾರ್ಥಿಗಳ ಮೂಗು ಹಾಗೂ ಗಂಟಲು ದ್ರವದ ಮಾದರಿ ಸಂಗ್ರಹಿಸಿ ತಪಾಸಣೆಗೆ ಒಳಪಡಿಸಲಾಗಿದೆ. ಸೋಂಕಿತರನ್ನು ಪ್ರತ್ಯೇಕವಾಗಿ ಇರಿಸಲಾಗಿದೆ. ತಪಾಸಣೆಗೆ ಒಳಪಟ್ಟವರನ್ನೂ ಕ್ವಾರಂಟೈನ್ ಮಾಡಲಾಗಿದೆ‘ ಎಂದು ಮಾಹಿತಿ ನೀಡಿದರು.

’ಜಿಲ್ಲಾಡಳಿತ, ಆರೋಗ್ಯ ಮತ್ತು ಕುಂಟುಂಬ ಕಲ್ಯಾಣ ಇಲಾಖೆ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ, ಪೊಲೀಸ್ ಹಾಗೂ ಎಸ್‌ಡಿಎಂ ಆಡಳಿತ ಮಂಡಳಿ ಈಗಾಗಲೇ ಈ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿ ಸೋಂಕು ನಿಯಂತ್ರಣಕ್ಕೆ ಅಗತ್ಯ ಕ್ರಮವಹಿಸಿವೆ. ಸದ್ಯ ಸೋಂಕು ವಿದ್ಯಾರ್ಥಿಗಳಲ್ಲಿ ಮಾತ್ರ ಕಾಣಿಸಿಕೊಂಡಿರುವುದರಿಂದ ಈ ವಲಯದಲ್ಲಿ ನಿಯಂತ್ರಿಸಲಾಗುತ್ತಿದೆ. ಕಾಲೇಜಿನ ವೈದ್ಯಕೀಯ ವಿಭಾಗವು ತೀವ್ರ ನಿಗಾವಹಿಸಿ, ಚಿಕಿತ್ಸೆ, ಔಷಧೋಪಚಾರ ನೀಡುತ್ತಿದೆ‘ ಎಂದು ಜಿಲ್ಲಾಧಿಕಾರಿ ಹೇಳಿದರು.

ನ. 17ರಂದು ನಡೆದ ವಿದ್ಯಾರ್ಥಿಗಳ ಕಾರ್ಯಕ್ರಮದಲ್ಲಿ ಪಾಲ್ಗೊಂಡ ವ್ಯಕ್ತಿಗಳ ಪ್ರಾಥಮಿಕ ಹಾಗೂ ನಂತರದಲ್ಲಿ ಸಂಪರ್ಕಕ್ಕೆ ಬಂದವರ ಕೋವಿಡ್ ತಪಾಸಣೆಗೆ ಒಳಪಟ್ಟು ಸೋಂಕು ನಿಯಂತ್ರಣಕ್ಕೆ ಸಹಕರಿಸಬೇಕು.ಮದುವೆ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಾಧ್ಯವಾದಷ್ಟು ಕೈ ಬಿಡುವುದು ಉತ್ತಮ. ಅನಿವಾರ್ಯವಿದ್ದರೆ ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಸಿ, ಸುರಕ್ಷಿತ ಅಂತರದ ನಿಯಮಗಳನ್ನು ಪಾಲಿಸಬೇಕು. ಜನಸಂದಣಿಯಾಗದಂತೆ ಎಚ್ಚರ ವಹಿಸಬೇಕು‘ ಎಂದು ಸೂಚಿಸಿದ್ದಾರೆ.

ಕಾಲೇಜಿನ ಪ್ರಾಚಾರ್ಯೆ ಡಾ. ರತ್ನಮಾಲಾ ದೇಸಾಯಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಯಶವಂತ ಮದೀನಕರ್,ಜಿಲ್ಲಾ ಸಮೀಕ್ಷಣಾಧಿಕಾರಿ ಡಾ.ಸುಜಾತಾ ಹಸವಿಮಠ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.