ADVERTISEMENT

ಗೊಂದಲದ ಹೇಳಿಕೆ: ಎಬಿವಿಪಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2020, 9:29 IST
Last Updated 18 ಫೆಬ್ರುವರಿ 2020, 9:29 IST
ಬಜರಂಗ ದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು
ಬಜರಂಗ ದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು   

ಹುಬ್ಬಳ್ಳಿ: ಪಾಕ್ ಪರ ಘೋಷಣೆ ಕೂಗಿದ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ಪೊಲೀಸ್‌ ಕಮಿಷನರ್‌ ಗೊಂದಲದ ಹೇಳಿಕೆ ನೀಡುತ್ತಿದ್ದಾರೆ ಎಂದು ಆರೋಪಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ (ಎಬಿವಿಪಿ) ಕಾರ್ಯಕರ್ತರು ಸೋಮವಾರ ಹೊಸ ಕೋರ್ಟ್‌ ಎದುರು ಪ್ರತಿಭಟನೆ ನಡೆಸಿದರು.

ಕಾನೂನು ರಕ್ಷಕರಾಗಿರುವ ಪೊಲೀಸರು ದೇಶದ್ರೋಹಿಗಳನ್ನು ರಕ್ಷಣೆ ಮಾಡುತ್ತಿದ್ದಾರೆ ಎನ್ನುವ ಅನುಮಾನವಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಎಬಿವಿಪಿ ರಾಜ್ಯ ಕಾರ್ಯದರ್ಶಿ ಪ್ರತೀಕ್‌ ಕಾಳೆ ಮಾತನಾಡಿ, ‘ಪಾಕಿಸ್ತಾನ ಪರ ಘೋಷಣೆ ಕೂಗಿರುವ ವಿಡಿಯೊ ಇದ್ದಾಗಲೂ, ಸೂಕ್ತ ಸಾಕ್ಷಿಯಿಲ್ಲ ಎಂದು ಹೇಳುತ್ತಿರುವುದು ಅನುಮಾನಕ್ಕೆ ಕಾರಣವಾಗಿದೆ. ಪೊಲೀಸ್‌ ಕಮಿಷನರ್‌ ದಿನಕ್ಕೊಂದು ಹೇಳಿಕೆ ನೀಡುತ್ತ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಸುತ್ತಿದ್ದಾರೆ’ ಎಂದು ಆರೋಪಿಸಿದರು.

ADVERTISEMENT

ವಿದ್ಯಾರ್ಥಿನಿ ರೇಖಾ ಹೊಸುರು ಮಾತನಾಡಿ, ‘ಜಾಮೀನು ರಹಿತ ಪ್ರಕರಣ ದಾಖಲಿಸಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸ್‌ ಕಮಿಷನರ್‌ ಹೇಳಿದ್ದರು. ಆದರೆ, ನಿನ್ನೆ ಅವರನ್ನು ಬಿಡುಗಡೆ ಮಾಡಿದ್ದರು. ಆರೋಪಿಗಳಿಗೆ ಸೂಕ್ತ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.

ರುಬಿನಾ ಬಾನು, ಅರುಣ ಶಾಮನೂರು, ಸಚಿನ ರಾಯಬಾಗಕರ್‌, ಹನುಮಂತ ಬದಲಿ, ಗಂಗಾಧರ ಹಂಚಗಿ, ವಿನಯ ಗೌಡರ್‌, ಗಣೇಶ ಪೊಲೀಸಪಾಟೀಲ, ನಿಶಾ ಕಾಮ್ಟೆ ಇದ್ದರು.

ವಿವಿಧ ಸಂಘಟನೆಗಳಿಂದ ಪ್ರತಿಭಟನೆ: ಯುವ ವಕೀಲರ ಸಂಘದ ಸದಸ್ಯರು ಮತ್ತು ಬಜರಂಗ ದಳ ಕಾರ್ಯಕರ್ತರು ಕೋರ್ಟ್‌ ಆವರಣದಲ್ಲಿ ಪ್ರತಿಭಟನೆ ನಡೆಸಿ, ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ದೇಶದ್ರೋಹಿಗಳನ್ನು ರಕ್ಷಿಸಲು ಮುಂದಾಗಿರುವ ಪೊಲೀಸ್‌ ಇಲಾಖೆಗೆ ಧಿಕ್ಕಾರ ಎಂದು ಕೂಗಿದರು. ಎನ್‌ಎಸ್‌ಯುಐ ಸಂಘಟನೆ ಕಾರ್ಯಕರ್ತರು ಕಿಮ್ಸ್‌ ಆವರಣದಿಂದ ಪ್ರತಿಭಟನಾ ರ‍್ಯಾಲಿ ನಡೆಸಿ ಆರೋಪಿಗಳಿಗೆ ತಕ್ಕೆ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು. ಗೋಕುಲ ರಸ್ತೆಯ ಕೆಎಲ್‌ಇ ಎಂಜಿನಿಯರಿಂಗ್‌ ಕಾಲೇಜ್‌ ಆವರಣದಲ್ಲಿಯೂ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.