ಹುಬ್ಬಳ್ಳಿ: ‘ಕೊಪ್ಪಳದ ಬಿಸಿಎಂ ಹಾಸ್ಟೆಲ್ನಲ್ಲಿ ವಿದ್ಯುತ್ ಅವಘಡ ಸಂಭವಿಸಿ ಐವರು ವಿದ್ಯಾರ್ಥಿಗಳು ಮೃತಪಟ್ಟಿದ್ದು, ಈ ಕುರಿತು ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು’ ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
‘ನೂರಾರು ಕನಸುಗಳನ್ನು ಕಟ್ಟಿಕೊಂಡು ಮನೆ ಬಿಟ್ಟು ಹಾಸ್ಟೆಲ್ನಲ್ಲಿದ್ದು ಓದುತ್ತಿದ್ದ ವಿದ್ಯಾರ್ಥಿಗಳ ಬದುಕು ಮಣ್ಣುಪಾಲಾಗಿದೆ. ಸರ್ಕಾರದ ಅಧೀನದಲ್ಲಿರುವ ಹಾಸ್ಟೆಲ್ಗಳಿಗೆ ಮೂಲ ಸೌಲಭ್ಯ ಒದಗಿಸದಿರುವುದೇ ಇಂತಹ ಅವಘಡ ನಡೆಯಲು ಕಾರಣವಾಗಿದೆ’ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ಘಟಕದ ಸಹ ಕಾರ್ಯದರ್ಶಿ ಮಂಜುನಾಥ ಮಿಸ್ಸೆ ಮಾತನಾಡಿ, ‘ರಾಜ್ಯದಲ್ಲಿನ ಎಲ್ಲ ಹಾಸ್ಟೆಲ್ಗಳ ಸುಧಾರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಐದಾರು ವರ್ಷಗಳಿಂದ ಹೋರಾಡುತ್ತ ಬಂದಿದ್ದೇವೆ. 20, 30 ವರ್ಷಗಳಿಂದ ಬಾಡಿಗೆ ಕಟ್ಟಡದಲ್ಲಿಯೇ ವಿದ್ಯಾರ್ಥಿಗಳು ವಾಸಿಸುತ್ತಿದ್ದಾರೆ. ಆದರೂ, ಸರ್ಕಾರ ಯಾವ ಕ್ರಮ ಕೈಗೊಂಡಿಲ್ಲ. ಹಾಸ್ಟೆಲ್ ವಾರ್ಡನ್ ಮತ್ತು ಅಧಿಕಾರಿಗಳ ನಿರ್ಲಕ್ಷವೂ ಇದಕ್ಕೆ ಕಾರಣವಾಗಿದೆ’ ಎಂದು ಆರೋಪಿಸಿದರು.
ರಾಜ್ಯದ ಎಲ್ಲ ಹಾಸ್ಟೆಲ್ಗಳಿಗೆ ಅಗತ್ಯ ಸಿಬ್ಬಂದಿ ನೇಮಿಸಕಬೇಕು. ಬಾಡಿಗೆ ಕಟ್ಟಡದಿಂದ ಸ್ಥಳಾಂತರಿಸಿ ಸ್ವಂತ ಕಟ್ಟಡಗಳನ್ನು ನಿರ್ಮಿಸಬೇಕು. ಹಾಸ್ಟೆಲ್ ಅಭಿವೃದ್ಧಿಗಾಗಿ ವಿಶೇಷ ಅನುದಾನ ಬಿಡುಗಡೆ ಮಾಡಬೇಕು, ವಿದ್ಯಾರ್ಥಿಗಳ ಬೇಡಿಕೆಗೆ ಅನುಗುಣವಾಗಿ ಹಾಸ್ಟೆಲ್ಗಳ ಸಂಖ್ಯೆ ಹೆಚ್ಚಿಸಬೇಕು ಎಂದು ಒತ್ತಾಯಿಸಿ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.
ನಗರ ಕಾರ್ಯದರ್ಶಿ ಸಚಿನ ರಾಯಕರ್, ಗಂಗಾಧರ ಹಂಜಿಗಿ, ಸೋಮನಗೌಡ ಪಾಟೀಲ, ಕಿಶೋರ ಸಿಂಪಗಿ, ವಿನಯ ಗೌಡ, ವಿರೇಶ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.