ಹುಬ್ಬಳ್ಳಿ: ಲಾರಿ ಮತ್ತು ಆಟೊ ಮಧ್ಯೆ ಇಲ್ಲಿನ ಕಾರವಾರ ರಸ್ತೆಯ ಇಎಸ್ಐ ಆಸ್ಪತ್ರೆಯ ಬಳಿ ಮಂಗಳವಾರ ಬೆಳಿಗ್ಗೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಆಟೊ ಚಾಲಕ ಹಾಗೂ ಅದರಲ್ಲಿದ್ದ ಪ್ರಯಾಣಿಕರೊಬ್ಬರು ಸಾವಿಗೀಡಾಗಿದ್ದಾರೆ. ಇನ್ನೂ ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.
ಆಟೊ ಚಾಲಕ ದಾದಾ ಹಯಾತ್ ಮತ್ತಿಗಟ್ಟಿ (35) ಸ್ಥಳದಲ್ಲೇ ಸಾವಿಗೀಡಾದರೆ, ಅದರಲ್ಲಿ ಪ್ರಯಾಣಿಸುತ್ತಿದ್ದ ಬಾಗಲಕೋಟೆಯ ನಿವಾಸಿ ಯಲ್ಲವ್ವ ಪ್ರಭುಕರ್ (65) ಅವರು ಕಿಮ್ಸ್ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗದಲ್ಲಿ ಕೊನೆಯುಸಿರೆಳೆದರು. ಯಲ್ಲವ್ವ ಅವರ ಪತಿ ವಿಠ್ಠಲ ಪ್ರಭುಕರ್ ಹಾಗೂ ಪುತ್ರ ರಾಮು ಪ್ರಭುಕರ್ ಅವರಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು, ಕಿಮ್ಸ್ನ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಟೊ–ಲಾರಿ ಮಧ್ಯೆ ಡಿಕ್ಕಿ ಸಂಭವಿಸಿದ ಮರುಕ್ಷಣವೇ ಹಿಂಬದಿಯಲ್ಲಿ ಬರುತ್ತಿದ್ದ ಬೈಕ್ ಸವಾರರೊಬ್ಬರು ಆಟೊಗೆ ಡಿಕ್ಕಿ ಹೊಡೆದರು. ಅವರ ಮುಖಕ್ಕೂ ಗಾಯವಾಗಿದೆ ಎಂದು ಪ್ರತ್ಯಕ್ಷದರ್ಶಿ ಶ್ರೀನಿವಾಸ್ ‘ಪ್ರಜಾವಾಣಿ’ಗೆ ತಿಳಿಸಿದರು.
ದಕ್ಷಿಣ ಸಂಚಾರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.