ಹುಬ್ಬಳ್ಳಿ: ‘ಸಂಗೊಳ್ಳಿ ರಾಯಣ್ಣನ ಧೈರ್ಯ ಯುವಜನರಿಗೆ ಸ್ಫೂರ್ತಿಯಾಗಿದೆ. ನಗರದಲ್ಲಿ ರಾಯಣ್ಣ ಭವನ ನಿರ್ಮಾಣಕ್ಕೆ ಸರ್ಕಾರಿ ಜಾಗ ಗುರುತಿಸಿದರೆ ಅಥವಾ ಅರ್ಜಿಸಿ ಸಲ್ಲಿಸಿದರೆ, ಕಟ್ಟಡ ನಿರ್ಮಾಣಕ್ಕೆ ಕ್ರಮ ವಹಿಸಲಾಗುವುದು’ ಎಂದು ಶಾಸಕ ಜಗದೀಶ ಶೆಟ್ಟರ್ ಭರವಸೆ ನೀಡಿದರು.
ಸಂಗೊಳ್ಳಿ ರಾಯಣ್ಣ ಹಿತರಕ್ಷಣಾ ಸಮಿತಿ ವತಿಯಿಂದ ಹುಬ್ಬಳ್ಳಿಯ ಚನ್ನಮ್ಮ ವೃತ್ತದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸಂಗೊಳ್ಳಿ ರಾಯಣ್ಣ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ನಗರದ ವಿಮಾನ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣ ಅವರ ಹೆಸರು ನಾಮಕರಣ ಮಾಡಲು ಸರ್ಕಾರದ ಮೇಲೆ ಒತ್ತಡ ಹೇರಲಾಗುವುದು’ ಎಂದರು.
ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಾನಂದ ಮುತ್ತಣ್ಣವರ ಮಾತನಾಡಿ, ‘ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣ ಅವರ ಹೆಸರು ಇಡಬೇಕು ಹಾಗೂ ಸಂಗೊಳ್ಳಿ ರಾಯಣ್ಣ ಭವನ ನಿರ್ಮಾಣ ಮಾಡಬೇಕು’ ಎಂದು ಒತ್ತಾಯಿಸಿದರು.
ಮೂರುಸಾವಿರ ಮಠದ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ಆಶೀರ್ವಚನ ನೀಡಿದರು. ‘ಪ್ರಜಾವಾಣಿ’ ಛಾಯಾಗ್ರಾಹಕ ಗುರು ಹಬೀಬ, ನಟ ಪ್ರಮೋದ್, ನಟಿ ತೇಜಸ್ವಿನಿ ಶರ್ಮಾ ಹಾಗೂ ನಿರ್ದೇಶಕ ಪವನ್ ಒಡೆಯರ್ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮಕ್ಕೂ ಮುನ್ನ ಮೂರು ಸಾವಿರ ಮಠದಿಂದ ಚನ್ನಮ್ಮ ವೃತ್ತದವರೆಗೆ ಡೊಳ್ಳು ಕುಣಿತ, ಜಗ್ಗಲಗಿ ಸೇರಿದಂತೆ ವಿವಿಧ ತಂಡಗಳಿಂದ ಮೆರವಣಿಗೆ ನಡೆಯಿತು. ಮನಸೂರ ಮಹಾಸಂಸ್ಥಾನ ಮಠದ ಬಸವರಾಜ ದೇವರು ರೇವಣಸಿದ್ದೇಶ್ವರ ಸ್ವಾಮೀಜಿ, ಮುಖಂಡರಾದ ಶಿವಾನಂದ ಕರಿಗಾರ, ಅಡಿವೆಪ್ಪ ಶಿವಳ್ಳಿ, ವೀರಭದ್ರಪ್ಪ ಹಾಲಹರವಿ, ವೆಂಕಟೇಶ ಮೇಸ್ತ್ರಿ, ಚಂದ್ರಶೇಖರ ಗೋಕಾಕ, ಪ್ರಭು ನವಲಗುಂದಮಠ, ಪಾಲಿಕೆ ಸದಸ್ಯ ಬೀರಪ್ಪ ಖಂಡೇಕರ, ಉಪ ಮೇಯರ್ ಉಮಾ ಮುಕುಂದ, ಶಿವಾನಂದ ಜೋಗಿನ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.