ADVERTISEMENT

ನವಲಗುಂದ: ಅಕ್ಷರ ದಾಸೋಹ ನೌಕರರ ಮುಷ್ಕರ

​ಪ್ರಜಾವಾಣಿ ವಾರ್ತೆ
Published 12 ಫೆಬ್ರುವರಿ 2026, 6:51 IST
Last Updated 12 ಫೆಬ್ರುವರಿ 2026, 6:51 IST
ನವಲಗುಂದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪತ್ರಾಂಕಿತ ವ್ಯವಸ್ಥಾಪಕ ಹರೀಶ ಬೊಮ್ಮನಹಳ್ಳಿ ಅವರಿಗೆ ಅಕ್ಷರ ದಾಸೋಹ ನೌಕರರ ತಾಲ್ಲೂಕು ಘಟಕದಿಂದ ಮನವಿ ಸಲ್ಲಿಸಿದರು
ನವಲಗುಂದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪತ್ರಾಂಕಿತ ವ್ಯವಸ್ಥಾಪಕ ಹರೀಶ ಬೊಮ್ಮನಹಳ್ಳಿ ಅವರಿಗೆ ಅಕ್ಷರ ದಾಸೋಹ ನೌಕರರ ತಾಲ್ಲೂಕು ಘಟಕದಿಂದ ಮನವಿ ಸಲ್ಲಿಸಿದರು   

ನವಲಗುಂದ: ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರು ತಾಲ್ಲೂಕು ಘಟಕದ ನೌಕರರು ಎಲ್ಲ ಶಾಲೆಗಳಲ್ಲಿ ಬಿಸಿಯೂಟ ಕಾರ್ಯ ಸ್ಥಗಿತಗೊಳಿಸಿ ಗುರುವಾರ ಪ್ರತಿಭಟನೆಗೆ ಕರೆ ನೀಡಿದ ಹಿನ್ನೆಲೆಯಲ್ಲಿ ಶಾಲೆಗಳಲ್ಲಿ ಶಿಕ್ಷಕರೇ ಬಿಸಿಯೂಟ ನೀಡುವ ಅನಿವಾರ್ಯತೆ ಎದುರಾಗಿದೆ.

ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದವರು ಕೇಂದ್ರ ಕಾರ್ಮಿಕ ಸಂಘಟನೆಗಳ ಕರೆಯ ಮೇರೆಗೆ ಫೆ.12ರಂದು ಒಂದು ದಿನ ಕೆಲಸವನ್ನು ಸ್ಥಗಿತಗೊಳಿಸಿ ಮುಷ್ಕರದಲ್ಲಿ ಪಾಲ್ಗೊಳ್ಳುತ್ತಿದ್ದೇವೆ ಎಂದು ಮುಷ್ಕರದ ತಿಳಿವಳಿಕೆ ಪತ್ರವನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪತ್ರಾಂಕಿತ ವ್ಯವಸ್ಥಾಪಕ ಹರೀಶ ಬೊಮ್ಮನಹಳ್ಳಿ ಅವರಿಗೆ ಸಲ್ಲಿಸಿದರು.

ರಾಜ್ಯದ ಸರ್ಕಾರಿ/ಅನುದಾನಿತ ಶಾಲೆಗಳಲ್ಲಿನ ಅಡುಗೆ ಸಿಬ್ಬಂದಿಗೆ ಶಾಲೆಯಲ್ಲಿ ಮಕ್ಕಳ ಬಿಸಿಯೂಟ ವಿತರಣೆಗೆ ತೊಂದರೆಯಾಗುವುದರಿಂದ ಮುಷ್ಕರದಲ್ಲಿ ಪಾಲ್ಗೊಳ್ಳದಿರುವ ಬಗ್ಗೆ ಮುಖ್ಯಶಿಕ್ಷಕರನ್ನು ಮನವೊಲಿಸುವಂತೆ ತಿಳಿಸಿದ್ದರು

ADVERTISEMENT

ನೌಕರರು ಮುಷ್ಕರದಲ್ಲಿ ಪಾಲ್ಗೊಂಡಿದ್ದಲ್ಲಿ ಪ್ರಸ್ತುತ ಜಾರಿಯಲ್ಲಿರುವ ಕ್ಷೀರಭಾಗ್ಯ ಯೋಜನೆ, ಬಿಸಿಯೂಟ ಯೋಜನೆ, ಪೂರಕ ಪೌಷ್ಠಿಕ ಆಹಾರ ಯೋಜನೆಯ ವಿತರಣೆಯಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ವ್ಯತ್ಯಯವಾಗದಂತೆ ಅಗತ್ಯ ಪೂರಕ ಕ್ರಮಗಳನ್ನು/ಪರ್ಯಾಯ ವ್ಯವಸ್ಥೆಯನ್ನು ಕೈಗೊಂಡು ಯೋಜನೆಯನ್ನು ಯಶಸ್ವಿಯಾಗಿಸುವಂತೆ ಶಿಕ್ಷಣಾಧಿಕಾರಿಗಳು ಹಾಗೂ ಮುಖ್ಯಶಿಕ್ಷಕರುಗಳಿಗೆ ತಿಳಿಸಿದೆ. ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ತಾಲ್ಲೂಕಿನ ಬಹುತೇಕ ಶಾಲೆಗಳಲ್ಲಿ ಬಿಸಿಯೂಟಕ್ಕೆ ಅಡಚಣೆ ಉಂಟಾಗುವ ಸಾಧ್ಯತೆ ಇದೆ. ಸರ್ಕಾರ ಈ ಕುರಿತು ಅಗತ್ಯ ಕ್ರಮ ಕೈಗೊಂಡು ಮಕ್ಕಳಿಗೆ ಊಟದ ತೊಂದರೆ ಉಂಟಾಗದಂತೆ ಕ್ರಮ ಕೈಗೊಳ್ಳುತ್ತದೆಯೇ ಎಂಬುವುದನ್ನು ಕಾದು ನೋಡಬೇಕು.