ADVERTISEMENT

ಧಾರವಾಡ: ಪಾಕಿಸ್ತಾನ ಪರ ಘೋಷಣೆ ಆರೋಪ; ಬಿಜೆಪಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 28 ಫೆಬ್ರುವರಿ 2024, 14:13 IST
Last Updated 28 ಫೆಬ್ರುವರಿ 2024, 14:13 IST
ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಎದುರು ಬಿಜೆಪಿ ಕಾರ್ಯಕರ್ತರು ಸೈಯದ್ ನಾಸೀರ್ ಹುಸೇನ್ ಭಾವಚಿತ್ರ ಹಿಡಿದು ಬುಧವಾರ ಪ್ರತಿಭಟನೆ ನಡೆಸಿದರು
ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಎದುರು ಬಿಜೆಪಿ ಕಾರ್ಯಕರ್ತರು ಸೈಯದ್ ನಾಸೀರ್ ಹುಸೇನ್ ಭಾವಚಿತ್ರ ಹಿಡಿದು ಬುಧವಾರ ಪ್ರತಿಭಟನೆ ನಡೆಸಿದರು   

ಧಾರವಾಡ: ರಾಜ್ಯಸಭೆ ಚುನಾವಣೆ ಫಲಿತಾಂಶದ ಸಂಭ್ರಮಾಚರಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೈಯದ್ ನಾಸೀರ್ ಹುಸೇನ್ ಬೆಂಬಲಿಗರೊಬ್ಬರು ಪಾಕಿಸ್ತಾನದ ಪರ ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ ಮಹಾನಗರ ಹಾಗೂ ಗ್ರಾಮೀಣ ಜಿಲ್ಲಾ ಘಟಕದ ಕಾರ್ಯಕರ್ತರು ಬುಧವಾರ ಬುಧವಾರ ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಎದುರು ಸಮಾವೇಶಗೊಂಡ ಅವರು, ನಾಸೀರ್ ಹುಸೇನ್ ಭಾವಚಿತ್ರ ಮತ್ತು ಕಾಂಗ್ರೆಸ್ ಬಾವುಟಕ್ಕೆ ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಅದನ್ನು ತಡೆಯಲು ಪೊಲೀಸರು ಮುಂದಾದಾಗ, ವಾಗ್ವಾದ ನಡೆಯಿತು.

ದೇಶದ ಇತಿಹಾಸದಲ್ಲಿ ಪ್ರಥಮ ಬಾರಿ ಕರ್ನಾಟಕದ ಶಕ್ತಿ ಕೇಂದ್ರದಲ್ಲಿ ನಾಸೀರ್ ಹುಸೇನ್ ಬೆಂಬಲಿಗರು ದೇಶದ್ರೋಹಿ ಘೋಷಣೆ ಕೂಗಿ ದೇಶಕ್ಕೆ ಅವಮಾನ ಮಾಡಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲ ಇಂತಹ ಘಟನೆಗಳು ನಡೆಯುತ್ತಿರುತ್ತವೆ. ಘೋಷಣೆ ಕೂಗಿದವರ ಮೇಲೆ ದೇಶದ್ರೋಹಿ ಕಾಯ್ದೆ ಅಡಿಯಲ್ಲಿ ಕ್ರಮಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ADVERTISEMENT

ಕೆಲವು ಕಾಂಗ್ರೆಸ್ ನಾಯಕರ ದೇಶ ಒಡೆಯುವ ಮಾತು ಇಂತಹ ಕಿಡಿಗೇಡಿಗಳಿಗೆ ಕುಮ್ಮಕ್ಕು ದೊರೆತಂತಾಗುತ್ತದೆ. ನಾಸೀರ್ ಹುಸೇನ್ ಅವರಿಗೆ ಪ್ರಮಾಣ ವಚನ ಸ್ವೀಕರಿಸಲು ಅವಕಾಶ ನೀಡಬಾರದು. ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರ ಮುಂದುವರಿಸಲು ನೈತಿಕತೆ ಕಳೆದುಕೊಂಡಿದೆ. ರಾಜ್ಯಪಾಲರು ಕೂಡಲೇ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಬಿಜೆಪಿ ಗ್ರಾಮೀಣ ಘಟಕದ ಜಿಲ್ಲಾಧ್ಯಕ್ಷ ನಿಂಗಪ್ಪ ಸುತ್ತಗಟ್ಟಿ, ಮುಖಂಡರಾದ ಸಂಜಯ ಕಪಟಕರ, ಪಾಲಿಕೆ ಸದಸ್ಯ ಶಂಕರ ಶೇಳಕೆ, ಸುರೇಶ ಬೇದರೆ, ಮಲ್ಲಿಕಾರ್ಜುನ ಬಾಳಿಕಾಯಿ, ಬಸವರಾಜ ಗರಗ, ಮೋಹನ ರಾಮದುರ್ಗ, ಶಂಕರ ಕುಮಾರ ದೇಸಾಯಿ, ಆನಂದ ಯಾವಗಲ್ಲ ಸಂತೋಷ ದೇವರಡ್ಡಿ, ನಾಗರಾಜ, ಪವನ ತೀಟೆ, ಶಕ್ತಿ ಹೀರೆಮಠ, ಶಿವು ಹುಗಾರ,ಮಂಜುನಾಥ ನೀರಲಕಟ್ಟಿ, ಪ್ರಮೋದ ಬಾಗಿಲದ, ವಿನಾಯಕ ಗೊಂದಳ್ಳಿ, ಉದಯ, ಮಹಾಂತೇಶ ವಿರಕ್ತಮಠ, ಶಫೀ ಬಿಜಾಪುರ, ಸಂಜಯ ಘಾಟಗೆ ಇದ್ದರು.

ಎಬಿವಿಪಿ ಪ್ರತಿಭಟನೆ; ಆಕ್ರೋಶ

ಧಾರವಾಡ: ಉತ್ತರ ಕರ್ನಾಟಕ ವಿಭಾಗದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಲಾಯಿತು. ಕಾಂಗ್ರೆಸ್ ಅಭ್ಯರ್ಥಿ ಸೈಯದ್ ನಾಸೀರ್ ಹುಸೇನ್ ಅವರ ಗೆಲುವಿನ ಸಂದರ್ಭದಲ್ಲಿ ಅವರ ಬೆಂಬಲಿಗರು ‘ಪಾಕಿಸ್ತಾನ ಜಿಂದಾಬಾದ್’ ಎಂದು ಕೂಗಿರುವುದು ಖಂಡನೀಯ. ಇಂತಹ ದೇಶದ್ರೋಹಿಗಳ ವಿರುದ್ಧ ಕಾನೂನುಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಮನೋಹರ ಶೆಟ್ಟಿ ಶಿವಕುಮಾರ ಬರಡೋಲ ಹನುಮಂತಗೌಡ ಪಾಟೀಲ ಹರೀಶ ಭಜಂತ್ರಿ ಮಹ್ಮದ ಸನ್ನಧಿ ಇದ್ದರು.

ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.