
ಅಣ್ಣಿಗೇರಿ: ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ನಿರಂತರವಾಗಿ ಓದಿನತ್ತ ಗಮನ ಹರಿಸುವ ಮೂಲಕ ಶೈಕ್ಷಣಿಕ ರಂಗದಲ್ಲಿ ಪಾಲ್ಗೊಳ್ಳಬೇಕು. ಅಂದಾಗ ಮಾತ್ರ ಜೀವನದಲ್ಲಿ ಯಶಸ್ಸನ್ನು ಕಾಣಲು ಸಾಧ್ಯವಾಗುತ್ತದೆ ಎಂದು ಹು-ಧಾ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಶಾಕೀರ ಸನದಿ ಹೇಳಿದರು.
ಸ್ಥಳೀಯ ಬಾಪೂಜಿ ಶಿಕ್ಷಣ ಸಂಸ್ಥಯಲ್ಲಿ ಭಾನುವಾರ ಆಯೋಜಿಸಿದ್ದ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ದ್ವಿತೀಯ ವರ್ಷದ ವಿದ್ಯಾರ್ಥಿಗಳ ಬಿಳ್ಕೋಡುವ ಸಮಾರಂಭದಲ್ಲಿ ಮಾತನಾಡಿದರು.
ಎಲ್ಲ ವಿದ್ಯಾರ್ಥಿಗಳು ಕೇವಲ ಡಾಕ್ಟರ್, ಎಂಜಿನಿಯರ್, ಶಿಕ್ಷಕರು ಆಗದೇ ಒಬ್ಬ ಉತ್ತಮ ಸಮಾಜವನ್ನು ನಿರ್ಮಾಣ ಮಾಡುವಂತ ಒಬ್ಬ ಒಳ್ಳೆಯ ರಾಜಕಾರಣಿಯೂ ಸಹ ಆಗಬೇಕು ಎಂದು ತಿಳಿಸಿದರು.
ಗ್ರಾಮೀಣ ಭಾಗದಲ್ಲಿ ಸಾಕಷ್ಟು ಆರ್ಥಿಕ ತೊಂದರೆಗಳನ್ನು ಅನುಭವಿಸುವ ಮೂಲಕ ಶೈಕ್ಷಣಿಕ ಕ್ರಾಂತಿಯನ್ನು ಬಿಂಬಿಸಲು ಶಿಕ್ಷಣ ಸಂಸ್ಥೆಯನ್ನು ಆರಂಭಿಸಿರುವ ಧಾರವಾಡ ಅವರ ಕಾರ್ಯ ಶ್ಲಾಘನೀಯ ಎಂದು ಹೇಳಿದರು.
ನಿವೃತ್ತ ಮುಖ್ಯಶಿಕ್ಷಕ ಕೆ.ಐ.ಕೊಂಗಿ ಮಾತನಾಡಿ, ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದ ಮೊದಲನೇ ಹಂತ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳನ್ನು ಗಳಿಸುವ ಮೂಲಕ ಕಲಿತ ಶಾಲೆಗೆ ಮತ್ತು ಪಾಲಕರಿಗೆ ಉತ್ತಮ ಹೆಸರನ್ನು ತರಬೇಕು ಎಂದರು.
ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಚಾರ್ಯ ಎನ್.ಡಿ.ಧಾರವಾಡ ವಹಿಸಿದ್ದರು.
ರಿಜ್ವಾನಾ ಧಾರವಾಡ, ಎಚ್.ಬಿ.ಕರ್ನೂಲ್, ಮಹ್ಮದ ಯೂನೂಸ್, ಶೇಖಅಹ್ಮದ ಶೇಖಸನದಿ, ಶಿವಾನಂದ ಪಟ್ಟೇದ, ದೇವಿಕಾ ಉಮಚಗಿ ಸೇರಿದಂತೆ ಸಿಬ್ಬಂದಿ ವರ್ಗ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.