ಧಾರವಾಡ: ‘ಹುಬ್ಬಳ್ಳಿಯಲ್ಲಿ ನಡೆದ ಅಂಜಲಿ ಅಂಬಿಗೇರ ಕೊಲೆ ಪ್ರಕರಣ ಪೊಲೀಸ್ ಇಲಾಖೆಯ ನಿಷ್ಕ್ರಿಯತೆಗೆ ನಿದರ್ಶನ. ಹೆಣ್ಣುಮಕ್ಕಳ ಪೋಷಕರು ಆತಂಕದಿಂದ ಬದುಕುವ ಸ್ಥಿತಿ ನಿರ್ಮಾಣವಾಗಿದೆ’ ಎಂದು ಶಾಸಕ, ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಪ್ರಕಟಣೆಯಲ್ಲಿ ಹೇಳಿದ್ದಾರೆ.
‘ಕೆಲ ದಿನಗಳ ಹಿಂದೆ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆಯಾಗಿತ್ತು. ಈಗ ಅಂಜಲಿ ಅಂಬಿಗೇರ ಕೊಲೆ ನಡೆದಿದೆ. ಇದರಿಂದ ವಿದ್ಯಾಭ್ಯಾಸ, ಉದ್ಯೋಗಕ್ಕಾಗಿ ಹೆಣ್ಣುಮಕ್ಕಳನ್ನು ಮನೆಯಿಂದ ಹೊರಗೆ ಕಳಿಸಲು ಹಿಂಜರಿಯುವಂತಾಗಿದೆ’ ಎಂದಿದ್ದಾರೆ.
‘ಹುಬ್ಬಳ್ಳಿ-ಧಾರವಾಡದಲ್ಲಿ ನಡೆಯುತ್ತಿರುವ ಯುವತಿಯರ ಕೊಲೆ ಪ್ರಕರಣಗಳಲ್ಲಿ ಪೊಲೀಸ್ ಇಲಾಖೆ ವೈಫಲ್ಯ ಎದ್ದು ಕಾಣುತ್ತಿದೆ. ಸಮಾಜಘಾತುಕ, ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿರುವವರನ್ನು ಪೊಲೀಸರು ನಿಯಂತ್ರಿಸುತ್ತಿಲ್ಲ’ ಎಂದು ದೂರಿದ್ದಾರೆ.
‘ಇನ್ನೊಂದೆಡೆ ಪೊಲೀಸ್ ಠಾಣೆಗಳಲ್ಲಿ ಅಕ್ರಮ ದಂಧೆಯಲ್ಲಿ ತೊಡಗಿರುವವರು ಕಾಣಿಸಿಕೊಳ್ಳುತ್ತಿರುವುದಿಂದ ಜನರಲ್ಲಿ ಪೊಲೀಸರ ಮೇಲೆ ವಿಶ್ವಾಸ ಕಡಿಮೆಯಾಗುತ್ತಿದೆ. ಪೊಲೀಸ್ ಇಲಾಖೆಯನ್ನು ಇನ್ನಷ್ಟು ಚುರುಕುಗೊಳಿಸಬೇಕು. ಸಮಾಜಘಾತುಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಮೂಲಕ ನಿರ್ಭೀತಿಯ ವಾತಾವರಣವನ್ನು ಸರ್ಕಾರ ಸೃಷ್ಟಿಸಬೇಕು’ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.