ಹುಬ್ಬಳ್ಳಿ: ಅಪರಾಧ ಪ್ರಕರಣಗಳಲ್ಲಿ ಬಂಧನವಾಗಿರುವ ಆರೋಪಿಗಳಿಗೆ ಇನ್ನು ಮುಂದೆ ಕೊರೊನಾ ಸೋಂಕು ದೃಢವಾದರೆ ಅವರಿಗೆ ಇಲ್ಲಿನ ಕರ್ನಾಟಕ ವೈದ್ಯಕೀಯ ಶಿಕ್ಷಣ ಸಂಸ್ಥೆನಲ್ಲಿ (ಕಿಮ್ಸ್) ಪ್ರತ್ಯೇಕ ವಾರ್ಡ್ನಲ್ಲಿಟ್ಟು ಚಿಕಿತ್ಸೆ ನೀಡಲಾಗುವುದು ಎಂದು ಹುಬ್ಬಳ್ಳಿ–ಧಾರವಾಡ ಪೊಲೀಸ್ ಕಮಿಷನರ್ ಜಿ. ದಿಲೀಪ್ ತಿಳಿಸಿದರು.
ಮಾಧ್ಯಮದವರ ಜೊತೆ ಶನಿವಾರ ಮಾತನಾಡಿದ ಅವರು ‘ಕಿಮ್ಸ್ನಿಂದ ತಪ್ಪಿಸಿಕೊಂಡಿದ್ದ ಸೋಂಕಿತ ಅರೋಪಿಯನ್ನು ಪುನಃ ಬಂಧಿಸಿದ್ದೇವೆ. ತಪ್ಪಿತಸ್ಥ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ. ಆರೋಪಿಗಳು ತಪ್ಪಿಸಿಕೊಂಡು ಹೋಗುವುದನ್ನು ತಡೆಯಲು ಅವರಿಗೆ ಪ್ರತ್ಯೇಕ ವಾರ್ಡ್ನಲ್ಲಿ ಚಿಕಿತ್ಸೆ ನೀಡಲಾಗುವುದು’ ಎಂದರು.
ಪೊಲೀಸ್ ಸಿಬ್ಬಂದಿಯ ಕುಟುಂಬದವರಿಗೆ ಸಾಂಸ್ಥಿಕ ಕ್ವಾರಂಟೈನ್ ಮಾಡಬೇಕಾಗಿ ಬಂದರೆ, ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗುವುದು. ಜನರ ನಡುವೆಯೇ ಕೆಲಸ ಮಾಡಬೇಕಾದ ಕಾರಣ ಪೊಲೀಸರಿಗೆ ಸೋಂಕು ಹರಡುವ ಅಪಾಯವಿದ್ದೇ ಇರುತ್ತದೆ. ಆದ್ದರಿಂದ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ. ಕೈ ಗವುಸು, ಸ್ಯಾನಿಟೈಸರ್ ಹಾಗೂ ಮಾಸ್ಕ್ ಸೇರಿದಂತೆ ಅಗತ್ಯ ಸಾಮಗ್ರಿಗಳನ್ನು ನೀಡಲಾಗಿದೆ ಎಂದರು.
ಕಿಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಳ್ಳತನದ ಆರೋಪಿ ಶುಕ್ರವಾರ ಬೆಳಗಿನ ಜಾವ ಕಿಮ್ಸ್ನಿಂದ ತಪ್ಪಿಸಿಕೊಂಡು ಹೋಗಿದ್ದ. ಸಂಜೆ ಗದಗ ಬೆಟಗೇರಿಯಲ್ಲಿ ಆತನನ್ನು ಪೊಲೀಸರು ಪುನಃ ಬಂಧಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.