ADVERTISEMENT

ಧಾರವಾಡ | ಆಶಾ ಕಾರ್ಯಕರ್ತೆಯರಿಂದ ‌ಅಹೋರಾತ್ರಿ ಧರಣಿ: ‌ಗೌರವಧನ ಹೆಚ್ಚಳಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 13 ಆಗಸ್ಟ್ 2025, 4:09 IST
Last Updated 13 ಆಗಸ್ಟ್ 2025, 4:09 IST
ಧಾರವಾಡದಲ್ಲಿ ಮಂಗಳವಾರ ಆಶಾ ಕಾರ್ಯಕರ್ತೆಯರು ಪ್ರತಿಭಟನಾ ಮೆರವಣಿಗೆ ನಡೆಸಿದರು
ಧಾರವಾಡದಲ್ಲಿ ಮಂಗಳವಾರ ಆಶಾ ಕಾರ್ಯಕರ್ತೆಯರು ಪ್ರತಿಭಟನಾ ಮೆರವಣಿಗೆ ನಡೆಸಿದರು   

ಧಾರವಾಡ: ಆಶಾ ಕಾರ್ಯಕರ್ತೆಯರಿಗೆ ಮಾಸಿಕ ಗೌರವಧನವನ್ನು ₹10 ಸಾವಿರಕ್ಕೆ ಹೆಚ್ಚಿಸಬೇಕು ಎಂಬುದು ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ (ಎಐಯುಟಿಯುಸಿ) ಜಿಲ್ಲಾ ಘಟಕದವರು ಆಹೋರಾತ್ರಿ ಧರಣಿ ಆರಂಭಿಸಿದರು.  

ಕಡಪಾ ಮೈದಾನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.  ಜಿಲ್ಲಾಧಿಕಾರಿ ಕಚೇರಿ ಎದುರು ಸಮಾವೇಶಗೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

'ಆಶಾ ಕಾರ್ಯಕರ್ತೆಯರು ಜನರ ಆರೋಗ್ಯ ನಿಟ್ಟಿನಲ್ಲಿ ಶ್ರಮಿಸುತ್ತಿದ್ದಾರೆ. ಅವರ ಕಾರ್ಯಕ್ಕೆ ತಕ್ಕ ಪ್ರತಿಫಲ ಸಿಗುತ್ತಿಲ್ಲ. ಅಗತ್ಯ ವಸ್ತುಗಳ ಬೆಲೆ ಹೆಚ್ಚಾಗಿರುವುದರಿಂದ ಜೀವನ ನಡೆಸುವುದು ಕಷ್ಟವಾಗಿದೆ. ಕೂಡಲೇ ಗೌರವ ಧನವನ್ನು ಹೆಚ್ಚಿಸಬೇಕು. ಆಶಾ ಕಾರ್ಯಕರ್ತೆಯರನ್ನು ಕಾರ್ಮಿಕರೆಂದು ಪರಿಗಣಿಸಿ ಪಿಎಫ್, ಇಎಸ್‍ಐ, ಗ್ರಾಚ್ಯುಟಿಯಂಥ ಸಾಮಾಜಿಕ ಭದ್ರತಾ ವ್ಯವಸ್ಥೆಗಳನ್ನು ಕಲ್ಪಿಸಬೇಕು' ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ADVERTISEMENT

‘ಜನವರಿಯಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ಪ್ರತಿಭಟನೆ ನಡೆಸಿದ್ದೆವು. ಪ್ರೋತ್ಸಾಹಧನ ಸೇರಿಸಿ ₹10 ಸಾವಿರ ಗೌರವ ಧನ ನೀಡುವುದಾಗಿ  ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದರು. ಆದರೆ,ಈವರೆಗೆ ಜಾರಿ ಮಾಡಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.

‘ಬಜೆಟ್‍ನಲ್ಲಿ ಅಂಗನವಾಡಿ ಹಾಗೂ ಬಿಸಿಯೂಟ ಕಾರ್ಯಕರ್ತೆಯರಿಗೆ  ಪ್ರೋತ್ಸಾಹಧನವನ್ನು ₹1000 ಹೆಚ್ಚಿಸಲಾಗಿದೆ. ಆಶಾ ಕಾರ್ಯಕರ್ತೆಯರಿಗೂ ಪ್ರೋತ್ಸಾಹ ಧನ ಹೆಚ್ಚಿಸಬೇಕು. ಜನಸಂಖ್ಯೆಯ ಮಿತಿ ಹೆಸರಿನಲ್ಲಿ ಆಶಾ ಕಾರ್ಯಕರ್ತೆಯರನ್ನು ಕೆಲಸದಿಂದ ವಜಾ ಮಾಡಬಾರದು’ ಎಂದು ಆಗ್ರಹಿಸಿದರು.

‘ಆಶಾ ಸುಗಮಕಾರರನ್ನು ವೇತನದೊಂದಿಗೆ ಮುಂದುವರಿಸಬೇಕು, ನಿವೃತ್ತರಾದವರಿಗೆ ಇಡಿಗಂಟು ನೀಡಬೇಕು, ಗೌರವ ಧನ ₹ 2 ಸಾವಿರ ಹೆಚ್ಚಿಸಬೇಕು. ಕೇಂದ್ರ ಸರ್ಕಾರ ಹೆಚ್ಚಿಸಿದ ಪ್ರೋತ್ಸಾಹ ಧನವನ್ನು ರಾಜ್ಯದಲ್ಲಿ ಜಾರಿಗೊಳಿಸಬೇಕು' ಎಂದು ಒತ್ತಾಯಿಸಿದರು.

‘ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಪಾಲು ಸೇರಿ ಮಾಸಿಕ ₹10 ಸಾವಿರ ಗೌರವ ಧನ ನೀಡಬೇಕು. ಆಶಾ ಕಾರ್ಯಕರ್ತೆಯರ ಕೆಲಸದ ವ್ಯಾಪ್ತಿಯನ್ನು ಹೆಚ್ಚಳ ಮಾಡಬಾರದು' ಎಂದು ಆಗ್ರಹಿಸಿದರು.

ಸಂಘಟನೆ ಜಿಲ್ಲಾಧ್ಯಕ್ಷೆ ಭುವನಾ ಬಳ್ಳಾರಿ, ಭಾರತಿ ಶೆಟ್ಟರ್, ಸುಜಾತಾ ಹಿರೇಮಠ, ಶೈಲಾ ಮಧುಗಲ್, ಮಂಜುಳಾ ಗಾಡುಗೋಳಿ, ಸಪ್ನಾ ಸುಳ್ಳದ್, ರಾಜೇಶ್ವರಿ ಕೋರಿ, ನಂದಾ ದೊಡ್ಡಮನಿ, ಗೀತಾ ಸೂರ್ಯವಂಶಿ, ಜ್ಯೋತಿ ಶಾಂತಪ್ನವರ, ಸಂಗೀತಾ ಗೊರವನಕೊಳ ಪ್ರತಿಭಟನೆಯಲ್ಲಿದ್ದರು. 

ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.